ವಕ್ಫ್ ಆಸ್ತಿಗಳ ದಾಖಲೆಗಳು ಡಿಜಿಟಲೀಕರಣಗೊಳ್ಳಲಿ: ಡಾ.ಕೆ.ರಹ್ಮಾನ್ಖಾನ್
ಬೆಂಗಳೂರು, ಎ.30: ದೇಶದ ಎಲ್ಲ ರಾಜ್ಯಗಳಲ್ಲಿರುವ ವಕ್ಫ್ ಆಸ್ತಿಗಳ ಸಂರಕ್ಷಣೆಯ ದೃಷ್ಟಿಯಿಂದ ಅವುಗಳ ದಾಖಲೆಗಳು, ಮಾಹಿತಿಗಳು ಡಿಜಿಟಲೀಕರಣಗೊಳ್ಳಬೇಕು ಎಂದು ರಾಜ್ಯಸಭಾ ಸದಸ್ಯ ಡಾ.ಕೆ.ರಹ್ಮಾನ್ಖಾನ್ ಅಭಿಪ್ರಾಯಪಟ್ಟಿದ್ದಾರೆ.
ಶನಿವಾರ ನಗರದ ಕಬ್ಬನ್ಪೇಟೆ ಮುಖ್ಯರಸ್ತೆಯಲ್ಲಿರುವ ಹಝ್ರತ್ ಹಮೀದ್ ಶಾ ಕಾಂಪ್ಲೆಕ್ಸ್ನಲ್ಲಿರುವ ಉರ್ದು ಸಭಾಂಗಣದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ವಕ್ಫ್ ಅಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಕ್ಫ್ ಆಸ್ತಿಗಳ ಡಿಜಿಟಲೀಕರಣಕ್ಕಾಗಿ ಯುಪಿಎ ಸರಕಾರದ ಅವಧಿಯಲ್ಲಿ 30 ಕೋಟಿ ರೂ.ಗಳನ್ನು ಒದಗಿಸಲಾಗಿತ್ತು. ಆದರೆ, 7 ವರ್ಷವಾದರೂ ಈ ನಿಟ್ಟಿನಲ್ಲಿ ಪ್ರಯತ್ನ ನಡೆದಿಲ್ಲ. ಮುತವಲ್ಲಿ ಹಾಗೂ ಜಿಲ್ಲಾ ವಕ್ಫ್ ಸಲಹಾ ಸಮಿತಿಗಳ ನೇಮಕಾತಿ ಹಾಗೂ ಅವರ ಸಮಸ್ಯೆಗಳನ್ನು ಸರಿಪಡಿಸುವುದರಲ್ಲೇ ವಕ್ಫ್ ಬೋರ್ಡ್ನ ಶೇ.90ರಷ್ಟು ಸಮಯ ವ್ಯರ್ಥವಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
2013ನೆ ಸಾಲಿನ ವಕ್ಫ್ ತಿದ್ದುಪಡಿ ಕಾಯ್ದೆಯು ಒಂದು ಕ್ರಾಂತಿಕಾರಕ ಹೆಜ್ಜೆಯಾಗಿದೆ. ಈ ಕಾಯ್ದೆ ಜಾರಿಯಾದ ಒಂದು ವರ್ಷದೊಳಗೆ ಎಲ್ಲ ವಕ್ಫ್ ಆಸ್ತಿಗಳ ಸರ್ವೆಯಾಗಬೇಕಿತ್ತು. ಆದರೆ, ಸರಕಾರಗಳ ನಿರಾಸಕ್ತಿಯಿಂದಾಗಿ ಈವರೆಗೆ ಸರ್ವೇ ಕಾರ್ಯ ಪೂರ್ಣಗೊಂಡಿಲ್ಲ ಎಂದು ರಹ್ಮಾನ್ಖಾನ್ ಹೇಳಿದರು.
ಜಿಲ್ಲಾ ವಕ್ಫ್ ಸಲಹಾ ಸಮಿತಿಗಳು ಹಾಗೂ ಜಿಲ್ಲಾ ವಕ್ಫ್ ಅಧಿಕಾರಿಗಳು ತಮ್ಮ ತಮ್ಮ ಜಿಲ್ಲೆಗಳಲ್ಲಿರುವ ವಕ್ಫ್ ಆಸ್ತಿಗಳ ಸ್ಥಳ ವೀಕ್ಷಣೆ ಮಾಡಿ ಅವುಗಳಿಗೆ ಸಂಬಂಧಿಸಿದಂತೆ ಸಂಪೂರ್ಣವಾದ ಮಾಹಿತಿಯನ್ನು ರಾಜ್ಯ ವಕ್ಫ್ ಬೋರ್ಡ್ಗೆ ಕಳುಹಿಸಬೇಕು ಎಂದು ಅವರು ತಿಳಿಸಿದರು.
ಒತ್ತುವರಿ ತೆರವು: ರಾಜ್ಯದಲ್ಲಿ 57 ಸಾವಿರ ಎಕರೆ ವಕ್ಫ್ ಆಸ್ತಿಯನ್ನು ರಾಜಕೀಯ ಮುಖಂಡರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಒಂದು ವರದಿಯಲ್ಲಿ ಆರೋಪಿಸಲಾಗಿದೆ. ಆದರೆ, ಇನಾಮ್ ರದ್ಧತಿ ಕಾಯ್ದೆಯಡಿಯಲ್ಲಿ 47 ಸಾವಿರ ಎಕರೆ ಹಾಗೂ ಭೂ ಸುಧಾರಣಾ ಕಾಯ್ದೆಯಡಿ 10 ಸಾವಿರ ಎಕರೆ ವಕ್ಫ್ ಆಸ್ತಿಯನ್ನು ಸರಕಾರವೇ ಪಡೆದುಕೊಂಡಿದೆ ಎಂದು ರಹ್ಮಾನ್ಖಾನ್ ಹೇಳಿದರು.
2013ರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವ ಆಸ್ತಿಗಳನ್ನು ತೆರವುಗೊಳಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಡಾ.ಮುಹಮ್ಮದ್ ಯೂಸುಫ್ ಮಾತನಾಡಿ, ಕಾನೂನಿನ ಚೌಕಟ್ಟಿನಲ್ಲಿ ಜಿಲ್ಲಾ ವಕ್ಫ್ ಸಲಹಾ ಸಮಿತಿಗಳು ಹಾಗೂ ವಕ್ಫ್ ಅಧಿಕಾರಿಗಳು ಯಾವ ರೀತಿಯಲ್ಲಿ ವಕ್ಫ್ ಆಸ್ತಿಗಳ ಸಂರಕ್ಷಣೆ, ಅಭಿವೃದ್ಧಿ ಹಾಗೂ ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಜಾಗೃತಿ ಮೂಡಿಸಲು ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದರು.
ರಾಜ್ಯದಲ್ಲಿ ಒಟ್ಟು 34,171 ವಕ್ಫ್ ಆಸ್ತಿಗಳಿದ್ದು, ಅವುಗಳ ಸರ್ವೇ ಕಾರ್ಯ ಪ್ರಗತಿಯಲ್ಲಿದೆ. ಭಾರತ ಸರಕಾರದ ಅಲ್ಪಸಂಖ್ಯಾತರ ವ್ಯವಹಾರಗಳ ಇಲಾಖೆಯಡಿಯಲ್ಲಿ ವಕ್ಫ್ ಆಸ್ತಿಗಳ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ರಾಜ್ಯ ವಕ್ಫ್ ಬೋರ್ಡ್ನ ಸದಸ್ಯರಾದ ಆರ್.ಅಬ್ದುಲ್ ರಿಯಾಝ್ಖಾನ್, ವೌಲಾನ ಶಾಫಿ ಸಅದಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಂ.ಝುಲ್ಫಿಕರುಲ್ಲಾ, ಹಝ್ರತ್ ಹಮೀದ್ ಶಾ ದರ್ಗಾ ಸಮಿತಿಯ ಅಧ್ಯಕ್ಷ ಜಿ.ಎ.ಬಾವಾ, ಹಝ್ರತ್ ಸೋತೆ ಶಾ ಮಾಣಿಕ್ ಶಾ ದರ್ಗಾ ಸಮಿತಿಯ ಅಧ್ಯಕ್ಷ ಮುಹಮ್ಮದ್ ಉಬೇದುಲ್ಲಾ ಶರೀಫ್ ಮತ್ತಿತರರು ಉಪಸ್ಥಿತರಿದ್ದರು.