×
Ad

11,800 ಕೋಟಿ ರೂ.ನೆರವಿಗೆ ಪ್ರಧಾನಿಗೆ ಮನವಿ: ಸಿಎಂ

Update: 2016-05-06 23:40 IST

ಬೆಂಗಳೂರು, ಮೇ 6: ರಾಜ್ಯದಲ್ಲಿ ಭೀಕರ ಸ್ವರೂಪದ ಬರ ಪರಿಸ್ಥಿತಿ ಹಾಗೂ ಮುಂಗಾರು ಮತ್ತು ಹಿಂಗಾರು ಬೆಳೆ ನಷ್ಟಕ್ಕೆ ಒಟ್ಟು 11,800 ಕೋಟಿ ರೂ.ನೆರವು ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರಕಟಿಸಿದ್ದಾರೆ.
ಶುಕ್ರವಾರ ಚಿತ್ರದುರ್ಗ ಜಿಲ್ಲೆಯ ಬರ ಪೀಡಿತ ಚಳ್ಳಕೆರೆ ತಾಲೂ ಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲಿಸಿ, ಆ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ನಾಳೆ (ಮೇ 7) ಹೊಸದಿಲ್ಲಿಯಲ್ಲಿ ಪ್ರಧಾನಿಯನ್ನು ಖುದ್ದು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಆಶ್ರಯ ಕಲ್ಪಿಸಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ (ಎನ್‌ಆರ್‌ಇಜಿ)ಯಡಿ ಕೆಲಸ ನಿರ್ವ ಹಿಸುವ ಕಾರ್ಮಿಕರಿಗೆ ರಾಜ್ಯಾದ್ಯಂತ ಕಾಮಗಾರಿ ಸ್ಥಳದಲ್ಲೇ ಕುಡಿಯುವ ನೀರು ಮತ್ತು ಕಾರ್ಮಿಕರ ಮಕ್ಕಳಿಗೆ ಬಿಸಿಲಿ ನಿಂದ ರಕ್ಷಣೆಗೆ ನೆರಳಿನ ಆಶ್ರಯ ಕಲ್ಪಿಸಬೇಕೆಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಹಿಳೆಯರಿಗೆ ಪುರುಷರಷ್ಟೇ ಸಮಾನ ವೇತನ ನೀಡ ಬೇಕು. ಪ್ರತಿವಾರವೂ ಉದ್ಯೋಗ ಖಾತರಿ ಯೋಜನೆ ಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಪಾವತಿಸಬೇಕು ಎಂದ ಅವರು, ಉದ್ಯೋಗ ಖಾತರಿ ಯೋಜನೆಯಲ್ಲಿ ಮಾನವ ದಿನಗಳ ಸೃಷ್ಟಿಯ ಬಗ್ಗೆ ತನಿಖೆ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಚಳ್ಳಕೆರೆ ತಾಲೂಕಿನ ದೊಡ್ಡ ಉಳ್ಳಾರ್ತಿ, ಪಾಲನಾಯಕನ ಕೋಟೆ, ಹೀರೆಹಳ್ಳಿ ಕೆರೆ ಪುನಶ್ಛೇತನ ಕಾಮಗಾರಿ ವೀಕ್ಷಿಸಿದ ಮುಖ್ಯಮಂತ್ರಿ, ಇದೇ ವೇಳೆ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು. ಅಲ್ಲದೆ, ಕುರುಬರ ಕಪಿಲೆಯಲ್ಲಿ ನೀರು ಸರಬರಾಜು ಹಾಗೂ ಸಮೀಪದ ಮತ್ತಿಗಾರಹಳ್ಳಿಯಲ್ಲಿನ ಗೋಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಧಿಕಾರಿ ಅಮಾನತ್ತು: ಜಾನುವಾರುಗಳಿಗೆ ಕಲುಷಿತ ನೀರು ಪೂರೈಕೆ ಮಾಡಿದ ಪಶು ವೈದ್ಯಾಧಿಕಾರಿಯನ್ನು ಕೂಡಲೇ ಅಮಾನತ್ತು ಮಾಡುವಂತೆ ಸ್ಥಳದಲ್ಲೇ ಆದೇಶಿಸಿದ ಸಿದ್ದರಾಮಯ್ಯ, ಜಾನುವಾರುಗಳಿಗೆ ಕಲುಷಿತ ನೀರು ಒದಗಿಸಿದರೆ ಅವುಗಳಿಗೆ ರೋಗ ಬರುವುದಿಲ್ಲವೇ ಎಂದು ಪಶು ಸಂಗೋಪನಾ ಇಲಾಖೆ ನಿರ್ದೇಶಕರನ್ನು ತರಾಟೆಗೆ ತೆಗೆದು ಕೊಂಡರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಆಂಜನೇಯ, ಶಾಸಕ ರಾದ ಡಿ.ಸುಧಾಕರ್, ರಘುಮೂರ್ತಿ, ಮೇಲ್ಮನೆ ಸದಸ್ಯ ವಿ.ಎಸ್.ಉಗ್ರಪ್ಪ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಪ್ರತ್ಯೇಕ ನಿಗಮ ಸ್ಥಾಪನೆ..
‘ಭದ್ರಾ ಮೇಲ್ದಂಡೆ, ಎತ್ತಿನಹೊಳೆ ಯೋಜನೆಗಳ ತ್ವರಿತ ಅನುಷ್ಠಾನ ಸಂಬಂಧ ಪ್ರತ್ಯೇಕ ನಿಗಮ ಸ್ಥಾಪಿಸಲಾಗುವುದು. ‘ಬರ ಪರಿಹಾರಕ್ಕೆ ಕೇಂದ್ರ ನೀಡಿದ ಅನುದಾನ ವೆಚ್ಚವಾಗಿಲ್ಲ’ ಎಂಬ ಬಿಎಸ್‌ವೈ ಹೇಳಿಕೆ ರಾಜಕೀಯ ಪ್ರೇರಿತ. ಅವರಿಗೆ ಸರಿಯಾದ ಮಾಹಿತಿಯೇ ಇಲ್ಲ, ಕೇಂದ್ರದ ಅನುದಾನ ಸಂಪೂರ್ಣ ರೈತರ ಬೆಳೆ ನಷ್ಟಕ್ಕೆ ಈಗಾಗಲೇ ಪಾವತಿಸಲಾಗಿದೆ’
- ಸಿದ್ದರಾಮಯ್ಯ ಮುಖ್ಯಮಂತ್ರಿ

ಇಂದು ಮುಖ್ಯಮಂತ್ರಿ ಹೊಸದಿಲ್ಲಿಗೆ
ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬರ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಮೇ 7) ಬೆಳಗ್ಗೆ 10ಗಂಟೆಗೆ ಇಲ್ಲಿನ ಎಚ್‌ಎಎಲ್ ವಿಮಾನ ನಿಲ್ದಾಣದ ಮೂಲಕ ವಿಶೇಷ ವಿಮಾನದಲ್ಲಿ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಸಂಜೆ 4ಗಂಟೆಗೆ ಹೊಸದಿಲ್ಲಿಯ ಸೌತ್‌ಬ್ಲಾಕ್‌ನಲ್ಲಿರುವ ಪ್ರಧಾನಿ ಮಂತ್ರಿಯ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಯ ಲಿದ್ದು, ಆ ಸಭೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಳ್ಳಲಿದ್ದಾರೆ.
ರಾತ್ರಿ 8ಗಂಟೆಗೆ ಹೊಸದಿಲ್ಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಪಸ್ ಆಗಲಿದ್ದಾರೆಂದು ಸಿಎಂ ಕಾರ್ಯಾಲಯದ ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News