ಸರಕಾರದ 3ವರ್ಷ ಸಾಧನೆ ಪುಸ್ತಕ ಬಿಡುಗಡೆ
ಾರವಾರ, ಮೇ 13: ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಮೂಲಸೌಲಭ್ಯ ಅಭಿವೃದ್ಧಿ, ಪ್ರವಾಸೋದ್ಯಮ, ಮಾನವಸಂಪನ್ಮೂಲ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಇತಿಹಾಸದ ಪುಟದಲ್ಲಿ ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಹ ಸಾಧನೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ ಸಾಧಿಸಿರುವ ಪ್ರಗತಿ ಕುರಿತು ಪ್ರಕಟಿಸಲಾಗಿರುವ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಉನ್ನತ ಶಿಕ್ಷಣ, ರಸ್ತೆಗಳ ಅಭಿವೃದ್ಧಿ, ಪ್ರವಾಸಿ ತಾಣಗಳ ಅಭಿವೃದ್ಧಿ, ಆರೋಗ್ಯ ಕ್ಷೇತ್ರ ಹಾಗೂ ಶಿಕ್ಷಣ, ಸಮಾಜ ಕಲ್ಯಾಣ ಕ್ಷೇತ್ರದಲ್ಲಿ ಸುಧಾರಣೆ, ಮೂಲಸೌಕರ್ಯಗಳ ಅಭಿವೃದ್ಧಿಗೆ ಹಿಂದೆಂದೂ ನೀಡದಷ್ಟು ಅನುದಾನವನ್ನು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಜಿಲ್ಲೆಗೆ ಒದಗಿಸಲಾಗಿರುವುದು ದಾಖಲೆಯಾಗಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಭರವಸೆಗಳ ಪೈಕಿ ಕಳೆದ 3ವರ್ಷಗಳಲ್ಲಿ ಶೇ.75ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಅವರು ಹೇಳಿದರು.
ರೈತರಿಗೆ ನೆರವು: ಎಲ್ಲಾ ರೈತರಿಗೆ ಅತ್ಯಾಧುನಿಕ ಯಂತ್ರೋಪಕರಣಗಳು ಲಭ್ಯವಾಗುವಂತೆ ಬಾಡಿಗೆ ಆಧಾರಿತ ಯಂತ್ರೋಪಕರಣಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ 5.15ಕೋಟಿ ರೂ. ಸಹಾಯಧನ ಒದಗಿಸಲಾಗಿದ್ದು, 5,850 ರೈತರು ಪ್ರಯೋಜನ ಪಡೆದಿದ್ದಾರೆ. ಮಳೆ ಕೊರತೆಯಿಂದ ಬೆಳೆ ಹಾನಿ ಸಂಭವಿಸಿದ 6 ತಾಲೂಕುಗಳ ರೈತರಿಗೆ 11.50 ಕೋಟಿ ರೂ. ಸಹಾಯಧನ ಒದಗಿಸಲಾಗಿದ್ದು, ಇದನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ. ಪ್ರಕೃತಿ ವಿಕೋಪ ಅಡಿಯಲ್ಲಿ 14 ಕೋಟಿ ರೂ. ವೆಚ್ಚದಲ್ಲಿ 528 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಪ್ರವಾಸೋದ್ಯಮ: ರಾಜ್ಯಕ್ಕೆ 3ನೆ ಸ್ಥಾನ ಪ್ರವಾಸೋದ್ಯಮ ಕ್ಷೇತ್ರದಲ್ಲಿ ರಾಜ್ಯ 3ನೆ ಸ್ಥಾನ ಪಡೆದಿದ್ದು, ಕೈಗಾರಿಕಾ ವಲಯದಲ್ಲಿ ಸಹ ಮೂರನೆ ಸ್ಥಾನ ಪಡೆದಿದೆ. ಜಿಲ್ಲೆಯಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಲಾಗಿದೆ. ಕುಮಟಾದಲ್ಲಿ ಗೇರುಬೀಜ ಟ್ರೇಡಿಂಗ್ ಸೆಂಟರ್, ತದಡಿಯಲ್ಲಿ ಮೀನು ರಫ್ತುಗಾರರಿಗೆ ನೆರವಾಗಲು ಮೂಲಸೌಕರ್ಯ ಅಭಿವೃದ್ಧಿ, ದಾಂಡೇಲಿಯಲ್ಲಿ ಸ್ಕಿಲ್ ಟ್ರೈನಿಂಗ್ ಸೆಂಟರ್, ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಶಾಸಕ ಸತೀಶ್ ಸೈಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಜಯಶ್ರೀ ಮೊಗೇರ, ಉಪಾಧ್ಯಕ್ಷ ಸಂತೋಷ ರೇಣಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಪ್ರಸಾದ್ ಮನೋಹರ್, ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಉಪಸ್ಥಿತರಿದ್ದರು.
ಕಾರವಾರ ವೈದ್ಯಕೀಯ ಕಾಲೇಜು
ಜಿಲ್ಲೆಯ ಜನತೆಯ ಬಹುವರ್ಷಗಳ ಕನಸಾಗಿದ್ದ ಕಾರವಾರ ವೈದ್ಯಕೀಯ ಕಾಲೇಜು ಈ ವರ್ಷದಿಂದ ಆರಂಭವಾಗಲಿದ್ದು, ಈಗಾಗಲೇ ಸುಮಾರು 150ಕೋಟಿ ರೂ. ವೆಚ್ಚ ಮಾಡಲಾಗಿದೆ. ಇನ್ನುಳಿದ ಕಾಮಗಾರಿಗಳಿಗೆ ಸರಕಾರ ಅಗತ್ಯ ಅನುದಾನವನ್ನು ಒದಗಿಸಲಿದೆ. ವೈದ್ಯಕೀಯ ಕಾಲೇಜು ಪ್ರಾರಂಭದಿಂದ ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ನಿರೀಕ್ಷಿಸಲಾಗಿದೆ. ಕಾರವಾರದಲ್ಲಿ ಹಲವು ವರ್ಷದಿಂದ ನನೆೆಗುದಿಗೆ ಬಿದ್ದಿದ್ದ ಸರಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡ ಕಾಮಗಾರಿ ಈಗ ಬಹುತೇಕ ಅಂತಿಮ ಹಂತದಲ್ಲಿದ್ದು, ಆದಷ್ಟು ಬೇಗನೆ ಕಾಲೇ ಜು ಪ್ರಾರಂಭಗೊಳ್ಳಲಿದೆ ಎಂದು ಸಚಿವ ದೇಶಪಾಂಡೆ ಹೇಳಿದರು.