ರಾಜ್ಯದ ರೈಲ್ವೆ ಕಾಮಗಾರಿಗಳು 2019ರ ವೇಳೆಗೆ ಪೂರ್ಣ: ಸುರೇಶ್ ಪ್ರಭು

Update: 2016-05-15 18:23 GMT

ಬೆಂಗಳೂರು, ಮೇ 15: ಕರ್ನಾಟಕ ರಾಜ್ಯದಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಕಾಮಗಾರಿಗಳನ್ನು 2019ರ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಹೇಳಿದ್ದಾರೆ. ರವಿವಾರ ನಗರದ ನೈಋತ್ಯ ರೈಲ್ವೆ ವಲಯ ರೈಲ್ವೆ ಇನ್‌ಸ್ಟಿಟ್ಯೂಟ್ ಮೈದಾನದಲ್ಲಿ ಆಯೋಜಿಸಿದ್ದ ರೈಲ್ವೆ ಇಲಾಖೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ ಮತ್ತು ನಿಲ್ದಾಣದ ಮರುನಾಮಕರಣವನ್ನು ನೆರವೇರಿಸಿ ಅವರು ಮಾತನಾಡಿದರು.

ಕರ್ನಾಟಕ ಸರಕಾರ ರೈಲ್ವೆ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರವನ್ನು ನೀಡುತ್ತಿದ್ದು, 2019ರ ವೇಳೆಗೆ ಬಾಕಿ ಉಳಿದಿರುವ ರಾಜ್ಯದ ಎಲ್ಲ ರೈಲ್ವೆ ಕಾಮಗಾರಿಗಳು ಹಾಗೂ ಸದ್ಯ ಶಂಕುಸ್ಥಾಪನೆಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ಬೆಂಗಳೂರು ಮತ್ತು ಮೈಸೂರು ರೈಲ್ವೆ ಕಾಮಗಾರಿ ಯೋಜನೆಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು.

ಯಲಹಂಕ ಮತ್ತು ಪೆನುಕೊಂಡ, ಅರಸೀಕೆರೆ, ತುಮಕೂರು, ಹುಬ್ಬಳ್ಳಿ ಹಾಗೂ ಚಿಕ್ಕಜಾಜೂರು ದ್ವಿಪಥೀಕರಣ ಯೋಜನೆ ಮತ್ತು ಕೊಪ್ಪಳ ರೈಲ್ವೆ ನಿಲ್ದಾಣದ ಬಳಿಯ ರಸ್ತೆ ಮೇಲ್ಸೇತುವೆಗಳ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಾಗಿದ್ದು, ದಾವಣಗೆರೆ ರೈಲ್ವೆ ನಿಲ್ದಾಣದ ಬಳಿಯ ರಸ್ತೆ ಮೇಲ್ಸೇತುವೆ, ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಮತ್ತು ಹಾಸನ ರೈಲ್ವೆ ದ್ವಿಪಥೀಕರಣ ಕಾಮಗಾರಿ ಯೋಜನೆಗೆ ಕೇಂದ್ರ ಸರಕಾರ 1 ಸಾವಿರದ 60 ಕೋಟಿ ರೂ.ಈಗಾಗಲೇ ಬಿಡುಗಡೆ ಮಾಡಿದ್ದು, ಆ ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ. ಅಲ್ಲದೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆಶಯದಂತೆಯೇ ಶ್ರವಣಬೆಳಗೊಳ, ಶೃಂಗೇರಿ ಹಾಗೂ ಶಿವಮೊಗ್ಗ ರೈಲ್ವೆ ಕಾಮಗಾರಿ ಯೋಜನೆಯನ್ನು ಕೈಗೆತ್ತಿಕೊಳ್ಳಬೇಕೆಂಬ ಸಲಹೆಯನ್ನು ನೀಡಿದ್ದಾರೆ.

ಆ ಯೋಜನೆಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು. ಪ್ರತಿ ದಿನ 700 ಕಿ.ಮೀ. ರೈಲ್ವೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂಬ ಯೋಜನೆಯನ್ನು ಹಾಕಿಕೊಂಡಿದ್ದೇವೆ ಹಾಗೂ ಹುಬ್ಬಳ್ಳಿ ಮತ್ತು ಬೆಂಗಳೂರು ರೈಲ್ವೆ ವೇಗವನ್ನು ಮತ್ತಷ್ಟು ಹೆಚ್ಚಿಸಲಾಗುವುದು. ಅಲ್ಲದೆ, ರೈಲ್ವೆ ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
   
 
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೇರಿದಂತೆ ಇನ್ನಿತರ ಮಹನೀಯರು ಈ ನಾಡಿಗಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಹೀಗಾಗಿ, ಇವರುಗಳ ಇತಿಹಾಸದ ಬಗ್ಗೆ ಕೈಪಿಡಿಗಳನ್ನು ಮಾಡಿಸಿ ಜನರಿಗೆ ನೀಡಬೇಕು ಎಂದು ಹೇಳಿದರು. ಆಯಾ ಜಿಲ್ಲೆಗಳಲ್ಲೇ ಕಾರ್ಯಕ್ರಮ ನಡೆಯಲಿ: ಸಿದ್ದೇಶ್ವರ ಅಸಮಾಧಾನ ಸಾರ್ವಜನಿಕ ಉದ್ದಿಮೆಗಳ ರಾಜ್ಯ ಸಚಿವ ಜಿ.ಎಂ.ಸಿದ್ದೇಶ್ವರ ಮಾತನಾಡಿ, ಆಯಾ ಜಿಲ್ಲೆಗಳಲ್ಲಿಯೇ ರೈಲ್ವೆ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮಗಳು ನಡೆಯಬೇಕು. ಆದರೆ, ಆ ಕಾರ್ಯಕ್ರಮಗಳನ್ನು ನಗರ ಪ್ರದೇಶಗಳಲ್ಲಿ ನೆರವೇರಿಸುತ್ತಿರುವುದು ತನಗೆ ಸಮಂಜಸ ಎನಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೆಂಗಳೂರು, ದಾವಣಗೆರೆ ಹಾಗೂ ಹುಬ್ಬಳ್ಳಿ ರೈಲ್ವೆ ಕಾಮಗಾರಿಗಾಗಿ 199 ಕೋಟಿ ರೂ.ಮೀಸಲಿಡಲಾಗಿತ್ತು. ಇದರಲ್ಲಿ ಈಗಾಗಲೇ 135 ಕೋಟಿ ರೂ.ಯನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ. ಆದರೆ, ದಾವಣಗೆರೆ ಜಿಲ್ಲಾಧಿಕಾರಿ 135 ಕೋಟಿ ರೂ. 3 ಕೋಟಿ ರೂ.ಯನ್ನು ಮಾತ್ರ ಬಿಡುಗಡೆಗೊಳಿಸಿದ್ದಾರೆ. ಹೀಗಾಗಿ, ಸಿಎಂ ಸಿದ್ದರಾಮಯ್ಯ ಹಾಗೂ ದಾವಣಗೆರೆ ಉಸ್ತುವಾರಿ ಸಚಿವ ಶಾಮನೂರು ಶಿವಶಂಕರಪ್ಪ ಅವರು ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ಸಮಸ್ಯೆಯನ್ನು ಬಗೆ ಹರಿಸಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯನಾಯ್ಡು, ಕೇಂದ್ರ ಸಚಿವ ಅನಂತ್‌ಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಆರ್.ರೋಷನ್ ಬೇಗ್, ಶಾಮನೂರು ಶಿವಶಂಕರಪ್ಪ, ಎ.ಮಂಜು, ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ, ಶಾಸಕ ಭೈರತಿ ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.

ಯಲಹಂಕ, ಪೆನುಕೊಂಡ, ಅರಸೀಕೆರೆ, ತುಮಕೂರು, ಹುಬ್ಬಳ್ಳಿ ಹಾಗೂ ಚಿಕ್ಕಜಾಜೂರು ದ್ವಿಪಥ ಯೋಜನೆ ಮತ್ತು ಕೊಪ್ಪಳ ರೈಲ್ವೆ ನಿಲ್ದಾಣದ ಬಳಿಯ ರಸ್ತೆ ಮೇಲ್ಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆ, ದಾವಣಗೆರೆ ರೈಲ್ವೆ ನಿಲ್ದಾಣದ ಬಳಿಯ ಮೇಲ್ಸೇತುವೆ ಲೋಕಾರ್ಪಣೆ ಹಾಗೂ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ ಎಂದು ಮರುನಾಮಕರಣ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News