ಶಿವಮೊಗ್ಗ: ಸೋಮಿನಕೊಪ್ಪ ಶಾಲೆಯಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
ಶಿವಮೊಗ್ಗ, ಜೂ. 27: ನಗರದ ಹೊರವಲಯದ ಸೋಮಿನಕೊಪ್ಪಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಯೊಂದರ ಮೇಲ್ಛಾವಣಿಯ ಹೆಂಚುಗಳು ಮಳೆಯಿಂದ ಕೆಳಕ್ಕೆ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಅನಾಹುತವೊಂದು ತಪ್ಪಿದೆ. ಹೆಂಚುಗಳು ಕೆಳಕ್ಕೆ ಬಿದ್ದ ವೇಳೆ ಕೊಠಡಿಯಲ್ಲಿದ್ದ ಮಕ್ಕಳು ಹೊರಭಾಗದಲ್ಲಿ ಆಟವಾಡುತ್ತಿದ್ದರು. ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ.
ಪ್ರಸ್ತುತ ಕೊಠಡಿಯ ಮರದ ರಿಪೀಸ್ ಕೂಡ ಬಿರುಕು ಬಿಟ್ಟಿದ್ದು, ಯಾವಾಗ ಬೇಕಾದರೂ ಮುರಿದು ಬೀಳುವ ಸ್ಥಿತಿಯಲ್ಲಿದೆ. ಮಳೆ ನೀರು ಕುಡ ಕೊಠಡಿಯ ಒಳಭಾಗಕ್ಕೆ ಬೀಳುತ್ತಿದೆ. ಕೊಠಡಿಯು ಅಪಾಯಕಾರಿ ಸ್ಥಿತಿಯಲ್ಲಿರುವುದರಿಂದ ಮಕ್ಕಳನ್ನು ಶಾಲೆಯ ಕಾರಿಡಾರ್ನಲ್ಲಿಯೇ ಕುಳ್ಳರಿಸಿ ಪಾಠ ಹೇಳಿಕೊಡಲಾಗುತ್ತಿದೆ. ಇದು ಅನಿವಾರ್ಯ ಕೂಡ ಆಗಿದ್ದು, ಇತರೆ ಮೂರು ಕೊಠಡಿಗಳು ಕೂಡ ಶಿಥಿಲಾವಸ್ಥೆಯಲ್ಲಿವೆ. ಮಕ್ಕಳನ್ನು ಕುಳ್ಳರಿಸಲು ಸೂಕ್ತ ಕೊಠಡಿಯ ವ್ಯವಸ್ಥೆ ಇಲ್ಲವಾಗಿದೆ ಎಂದು ಸ್ಥಳಕ್ಕೆ ತೆರಳಿದ ಸುದ್ದಿಗಾರರಿಗೆ ಹೆಸರು ಬಹಿರಂಗಪಡಿಸಲಿಚ್ಛಿಸದ ಶಾಲೆಯ ಶಿಕ್ಷಕೊರಬ್ಬರು ತಿಳಿಸಿದ್ದಾರೆ.
ಸೋಮಿನಕೊಪ್ಪ ಸರಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸರಿಸುಮಾರು 200ಕ್ಕೂ ಅಧಿಕ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಈ ವರ್ಷ ಹೊಸದಾಗಿ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ. ಆದರೆ ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಅಪಾಯಕಾರಿ ಸ್ಥಿತಿಯಲ್ಲಿದೆ ಎಂದು ಶಾಲಾಭಿವೃದ್ದಿ ಸಮಿತಿಯ ಸೈಯದ್ ರಸೂಲ್ ಹೇಳಿದ್ದಾರೆ. ಈಗಾಗಲೇ ಹಲವು ಬಾರಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಇಲ್ಲಿಯವರೆಗೂ ಶಾಲೆಯ ಕಟ್ಟಡದ ದುರಸ್ತಿಗೆ ಯಾವುದೇ ಕ್ರಮಕೈಗೊಂಡಿಲ್ಲ.ಸಂಪೂರ್ಣ ನಿರ್ಲಕ್ಷ ವಹಿಸಿದ್ದಾರೆ. ಮಕ್ಕಳು ಭಯದಿಂದಲೇ ಕಲಿಯುವಂತಾಗಿದೆ. ಇದೀಗ ಕೊಠಡಿಯೊಂದರ ಮೇಲ್ಛಾವಣಿಯ ಹೆಂಚುಗಳು ಕೂಡ ಕುಸಿದು ಬಿದ್ದಿವೆ. ದೇವರ ದಯೆಯಿಂದ ಈ ವೇಳೆ ಕೊಠಡಿಯಲ್ಲಿ ಮಕ್ಕಳಿರಲಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಆಗಬಹುದಾಗಿದ್ದ ತೊಂದರೆ ತಪ್ಪಿದೆ. ಇನ್ನಾದರೂ ಆಡಳಿತ ವ್ಯವಸ್ಥೆ ಈ ಶಾಲೆಯತ್ತ ಗಮನಹರಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಪೋಷಕ ಶಿಫಿವುಲ್ಲಾ ತಿಳಿಸಿದ್ದಾರೆ.
ಸೋಮಿನಕೊಪ್ಪದ ಸರಕಾರಿ ಉರ್ದು ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿರುವುದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಗೊತ್ತಿದ್ದರೂ ಇಲ್ಲಿಯವರೆಗೂ ಅವ್ಯವಸ್ಥೆ ಸರಿಪಡಿಸಲು ಮುಂದಾಗಿಲ್ಲ. ಸಂಪೂರ್ಣ ನಿರ್ಲಕ್ಷ ವಹಿಸಿದ್ದಾರೆ. ಅಧಿಕಾರಿಗಳು ಅನಾಹುತ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕು. ಶಿಥಿಲಾವಸ್ಥೆಯಲ್ಲಿರುವ ಕಟ್ಟಡವನ್ನು ತೆರವುಗೊಳಿಸಿ, ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.
ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ : ಜಿ.ಪಂ. ಉಪಾಧ್ಯಕ್ಷೆ ವೇದಾ ವಿಜಯಕುಮಾರ್
ಸೋಮಿನಕೊಪ್ಪಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹಾಗೆಯೇ ವಿದ್ಯಾರ್ಥಿಗಳ ಪಾಠ, ಪ್ರವಚನಕ್ಕೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಸಲಹೆ ನೀಡಿದ್ದೇನೆ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ತಿಳಿಸಿದ್ದಾರೆ.
ಸೋಮವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಷಯ ತಿಳಿಯುತ್ತಿದ್ದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಕಲೆ ಹಾಕಿದ್ದೇನೆ. ಈ ಸರಕಾರಿ ಶಾಲೆಯ ಅಭಿವೃದ್ದಿಗೆ ಜಿ.ಪಂ. ಆಡಳಿತದಿಂದ ಲಭ್ಯವಾಗಬಹುದಾದ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಸ್ಪಷ್ಟಪಡಿಸಿದರು.