ಸಿಐಡಿ ಎಡಿಜಿಪಿ ನೇತೃತ್ವದ ತಂಡ ಮಂಗಳೂರಿಗೆ
ಮಂಗಳೂರು, ಜು. 9: ಡಿವೈಎಸ್ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ಹಸ್ತಾಂತರಿಸಿದ್ದು, ಈ ಹಿನ್ನೆಲೆಯಲ್ಲಿ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಸಿಐಡಿ ಎಡಿಜಿಪಿ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಸಿಐಡಿ ತಂಡ ಶನಿವಾರ ಸಂಜೆ ಮಂಗಳೂರಿಗೆ ಆಗಮಿಸಿದೆ.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಡಿಜಿಪಿ ಪ್ರತಾಪ್ ರೆಡ್ಡಿ , ಎಂ.ಕೆ.ಗಣಪತಿ ಅವರು ಮಂಗಳೂರು ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದುದರಿಂದ ಈ ಬಗ್ಗೆ ಮಾಹಿತಿ ಕಲೆ ಹಾಕಲು ಮಂಗಳೂರಿಗೆ ಆಗಮಿಸಿರುವುದಾಗಿ ತಿಳಿಸಿದರು.
ಸರಕಾರ ಪ್ರಕರಣವನ್ನು ಸಿಐಡಿ ವಹಿಸಿದ್ದರಿಂದ ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಪ್ರತಿಯೊಂದನ್ನೂ ಪರಿಶೀಲಿಸುತ್ತಿದ್ದೇವೆ. ಆತ್ಯಹತ್ಯೆಗೆ ಸಂಬಂಧಿಸಿ ಪುರಾವೆಗಳನ್ನು ಸಂಗ್ರಹಿಸುತ್ತಿದ್ದು, ತನಿಖೆ ಮುಂದುವರಿದಿದೆ ಎಂದರು.
ಎಡಿಜಿಪಿ ಪ್ರತಾಪ್ ರೆಡ್ಡಿ ಅವರು ಭೇಟಿ ನೀಡಿದ ಸ್ವಲ್ಪ ಹೊತ್ತಿನಲ್ಲೇ ಐಜಿಪಿ ಹೇಮಂತ ನಿಂಬಾಳಕರ್ ಐಜಿ ಕಚೇರಿಗೆ ಭೇಟಿ ನೀಡಿದರು.