×
Ad

ಅಲ್ಪಸಂಖ್ಯಾತ ಬಡಜನರ ಅಭಿವೃದ್ಧಿಗೆ ಶ್ರಮಿಸಿ: ಜಿಲ್ಲಾಧಿಕಾರಿ

Update: 2016-07-14 22:29 IST

ಮಡಿಕೇರಿ, ಜು.14: ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ವಿನಿಯೋಗ ಮಾಡುವಂತೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚನೆ ನೀಡಿದ್ದಾರೆ. ನಗರದ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿಯವರ 15 ಅಂಶ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರಕಾರ ನಾನಾ ಇಲಾಖೆಗಳ ಮೂಲಕ ಕಾರ್ಯಕ್ರಮಗಳನ್ನು ಮೀಸಲಿಟ್ಟಿದೆ. ಅವುಗಳಿಗೆ ಕ್ರಿಯಾಯೋಜನೆ ತಯಾರಿಸಿ ಸಕಾಲದಲ್ಲಿ ಸೌಲಭ್ಯಗಳನ್ನು ತಲುಪಿಸುವಂತಾಗಬೇಕು ಮತ್ತು ಅಧಿಕಾರಿಗಳಿಗೆ ಕೊಟ್ಟಿರುವ ಶೇ.ವಾರು ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಶಾಲಾ ಶೈಕ್ಷಣಿಕ ಸೌಲಭ್ಯ ಹೆಚ್ಚಿಸುವುದು, ಸ್ವ ಉದ್ಯೋಗ ಕೈಗೊಳ್ಳಲು ಅನುವು ಮಾಡುವುದು, ಗ್ರಾಮೀಣ ವಾಸ ಯೋಜನೆಯಲ್ಲಿ ಸಮಾನ ಪಾಲು ನೀಡುವುದು, ಹೀಗೆ ನಾನಾ ಸೌಲಭ್ಯವನ್ನು ಕಲ್ಪಿಸುವ ಮೂಲಕ ಅಲ್ಪಸಂಖ್ಯಾತ ಬಡಜನರ ಅಭಿವೃದ್ಧಿಗೆ ಶ್ರಮಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು. ಆಯಾಯ ವರ್ಷದಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವ ನಿಟ್ಟಿನಲ್ಲಿ ಸಂಬಂಧಪಟ್ಟವರಿಗೆ ಮಾಹಿತಿ ನೀಡುವಂತಾಗಬೇಕು. ವಿವಿಧ ಇಲಾಖೆಗಳು ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿದ್ದು, ಇವುಗಳು ಹೆಚ್ಚು ಪ್ರಗತಿ ಸಾಧಿಸುವಂತಾಗಬೇಕು ಎಂದರು.

ಅಲ್ಪಸಂಖ್ಯಾತರಿಗಾಗಿ ಮೀಸಲಿಟ್ಟಿರುವ ಅನುದಾನ ಹಾಗೂ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಸ್ಥಳೀಯವಾಗಿ ಹೆಚ್ಚಿನ ಮಾಹಿತಿ ಒದಗಿಸಬೇಕು. ಹಾಗೆಯೇ ಫಲಾನುಭವಿಗಳು ಇದ್ದಲ್ಲಿ ಸಂಪೂರ್ಣ ಸಹಕಾರ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, ಅಲ್ಪಸಂಖ್ಯಾತರ ಅಭಿವೃದ್ಧಿಗೋಸ್ಕರ ಪ್ರಧಾನಮಂತ್ರಿಯವರ 15 ಅಂಶಗಳ ಯೋಜನೆಯಡಿಯಲ್ಲಿ ಶೈಕ್ಷಣಿಕ ಅವಕಾಶಗಳನ್ನು ಹೆಚ್ಚಿಸುವುದು, ಆರ್ಥಿಕ ಚಟುವಟಿಕೆ ಹಾಗೂ ಉದ್ಯೋಗದಲ್ಲಿ ಸಮಾನ ಪಾಲು, ಅಲ್ಪಸಂಖ್ಯಾತರ ಜೀವನ ಮಟ್ಟವನ್ನು ಉತ್ತಮ ಪಡಿಸುವುದು ಹಲವು ಅಂಶಗಳನ್ನು ಒಳಗೊಂಡಂತೆ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಅವಕಾಶ ಮಾಡಿಕೊಳ್ಳುವಲ್ಲಿ ಇಲಾಖೆ ಅಧಿಕಾರಿಗಳು ಕೈಜೋಡಿಸುವಂತೆ ಮನವಿ ಮಾಡಿದರು. ಈ ಸಂದರ್ಭ ಪೌರಾಯುಕ್ತೆ ಬಿ.ಬಿ.ಪುಷ್ಪಾವತಿ, ಡಿ.ಡಿ.ಪಿ.ಐ ಜಿ.ಬಸವರಾಜು, ಕೃಷಿ ಇಲಾಖೆಯ ಉಪ ನಿರ್ದೇಶಕ ರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಗಿರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾಗರಾಜು, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಸಿ.ಜಗನ್ನಾಥ, ಮೀನುಗಾರಿಕೆ ಇಲಾಖೆ ಅಧಿಕಾರಿ, ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ಹಾಗೂ ಪಪಂಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಯ ಹಲವು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News