ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಪಿಐಎಲ್
Update: 2016-07-24 14:37 GMT
ಬೆಂಗಳೂರು, ಜು. 24: ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಸೇರಿದಂತೆ ಸಾರಿಗೆ ನೌಕರರ ಮುಷ್ಕರವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದು, ಸೋಮವಾರ ಆ ಅರ್ಜಿ ವಿಚಾರಣೆ ಬರುವ ಸಾಧ್ಯತೆಗಳಿವೆ.
ಚನ್ನಸಂದ್ರದ ಆರ್.ವಾಸುದೇವನ್ ಎಂಬುವರು ಸಲ್ಲಿಸಿರುವ ಈ ಅರ್ಜಿ ಸೋಮವಾರ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬರಲಿದೆ.
ಸಾರಿಗೆ ಸಂಸ್ಥೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರದಿಂದ ಸಾರ್ವಜನಿಕ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಆದುದರಿಂದ, ಇದನ್ನು ತಡೆಯುವಂತೆ ರಾಜ್ಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.
ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ 11 ಜನರನ್ನು ಪ್ರತಿವಾದಿಗಳನ್ನಾಗಿ ಅರ್ಜಿಯಲ್ಲಿ ಹೆಸರಿಸಲಾಗಿದೆ.