×
Ad

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಟ್ಟ ಹೆಜ್ಜೆ: ಸಚಿವ ದೇಶಪಾಂಡೆ

Update: 2016-08-15 22:34 IST

ಕಾರವಾರ, ಆ.15: ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ಮೂಲಸೌಲಭ್ಯ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾ ನಗೊಳಿಸಲಾಗುತ್ತಿದ್ದು, ಪ್ರಗತಿ ಕಡೆಗೆ ದೃಢ ಹೆಜ್ಜೆ ಇರಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಸಹಮತ ವ್ಯಕ್ತಪಡಿಸಿದ್ದಾರೆ.

ಅವರು ಸೋಮವಾರ ಕಾರವಾರ ಪೊಲೀಸ್ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.

ಪ್ರವಾಸೋದ್ಯಮ ಅಭಿವೃದ್ಧಿ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಒತ್ತು ನೀಡಲಾಗಿದೆ. ‘ಕೋಸ್ಟಲ್ ಸರ್ಕಿಟ್’ ಯೋಜನೆಯಡಿ ಈಗಾಗಲೇ 30 ಕೋಟಿ ರೂ. ವೆಚ್ಚದಲ್ಲಿ 12 ಬೀಚ್‌ಗಳ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಸ್ವದೇಶ್ ದರ್ಶನ್ ಯೋಜನೆಯಡಿ ಕರಾವಳಿಯ ಆಯ್ದ ಬೀಚ್‌ಗಳ ಅಭಿವೃದ್ಧಿಗೆ 92.5ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದರು.

ನೇತ್ರಾಣಿ ನಡುಗಡ್ಡೆ ಈ ವರ್ಷ ಅಂತಾರಾಷ್ಟ್ರೀಯ ಮಟ್ಟದ ಸ್ಕೂಬಾ ಡೈವಿಂಗ್ ಉತ್ಸವವನ್ನು ಆಯೋಜಿಸಲಾಗುವುದು. ಕಾರವಾರ ಹಾಗೂ ಓಂ ಬೀಚ್‌ಗಳಲ್ಲಿ ಜಲಸಾಹಸ ಕ್ರೀಡೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ನಗರಗಳಲ್ಲಿ ರಸ್ತೆ, ಒಳಚರಂಡಿ, ವಸತಿ ನಿರ್ಮಾಣ ಸೇರಿದಂತೆ ಮೂಲಸೌಲಭ್ಯಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾರವಾರ ನಗರ ಅಭಿವೃದ್ಧಿಗೆ ಇನ್ನೂ 30ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಕುಮಟಾದ ಮಣಕಿಯಲ್ಲಿ ಮಿನಿ ರನ್‌ವೇ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ಕಾಮಗಾರಿ ಶೀಘ್ರ ಆರಂಭಿಸಲಾಗುವುದು. ತದಡಿಯಲ್ಲಿ ಸುಸಜ್ಜಿತ ಬಂದರು ನಿರ್ಮಾಣಕ್ಕಾಗಿ ಹೆಜ್ಜೆ ಇರಿಸಲಾಗಿದ್ದು, ಕೇಂದ್ರ ಸರಕಾರದ ಅನುಮತಿಯನ್ನು ಕಾಯಲಾಗುತ್ತಿದೆ. ಇದೇ ರೀತಿ ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ ನಿರ್ಮಾಣ ಕಾರ್ಯ ಆರಂಭಿಸಲು ರಾಜ್ಯ ಸರಕಾರ ಎಲ್ಲಾ ನೆರವು ಒದಗಿಸಿದೆ ಎಂದು ಹೇಳಿದರು.

  ಸಮಾರಂಭದಲ್ಲಿ ಶಾಸಕ ಸತೀಶ್ ಸೈಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ, ಉಪಾಧ್ಯಕ್ಷ ಸಂತೋಷ ರೇಣಕೆ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಉಪಸ್ಥಿತರಿದ್ದರು.

‘ಕಾರವಾರಕ್ಕೆ ನೂತನ ಕಾರಾಗೃಹ’

ಕಾರವಾರ: ಇಲ್ಲಿನ ಕಣಸಗೇರಿಯಲ್ಲಿ ನೂತನ ಜಿಲ್ಲಾ ಕಾರಾಗೃಹ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಅವರು ತಿಳಿಸಿದರು.

ಅವರು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೂತನ ಕಾರಾಗೃಹ ನಿರ್ಮಾಣಕ್ಕಾಗಿ ಈಗಾಗಲೇ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಣಸಗೇರಿಯಲ್ಲಿ ಕಾರಾಗೃಹ ನಿರ್ಮಿಸುವ ಕುರಿತಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೊಸ ಕಾರಾಗೃಹ ನಿರ್ಮಾಣಕ್ಕಾಗಿ ಬಜೆಟ್‌ನಲ್ಲಿ ಅನುದಾನ ಒದಗಿಸಲಾಗಿದೆ ಎಂದು ಹೇಳಿದರು. ಕಾರವಾರ-ಕೋಡಿಭಾಗ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳ್ಳಲು ಸಾರ್ವಜನಿಕರು ಸಹಕರಿಸಬೇಕು ಎಂದು ಸಚಿವರು ವಿನಂತಿಸಿದರು.

<ಮಳೆ ಕೊರತೆಯಿಂದ ಬೆಳೆ ಹಾನಿ ಅನುಭವಿಸಿದ ರೈತರಿಗೆ ಒಟ್ಟು 40ಕೋಟಿ ರೂ. ಬೆಳೆ ವಿಮೆ ಬಿಡುಗಡೆ ಮಾಡಲಾಗಿದೆ. ಬರಪೀಡಿತ ತಾಲೂಕುಗಳಲ್ಲಿ ಒಟ್ಟು 24, 542 ರೈತರಿಗೆ 11ಕೋಟಿ ರೂ. ಇನ್‌ಪುಟ್ ಸಬ್ಸಿಡಿಯನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಮುಂದಿನ ಒಂದುವರೆ ವರ್ಷಗಳ ಒಳಗಾಗಿ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ. ಸಚಿವ ದೇಶಪಾಂಡೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News