ತಮಿಳುನಾಡಿಗೆ ನೀರು ಬಿಡದಿರಲು ಸರ್ವಪಕ್ಷ ಮುಖಂಡರ ಸಭೆಯ ತೀರ್ಮಾನ
ಬೆಂಗಳೂರು, ಆ.27: ಕಾವೇರಿ ನೀರು ಬಿಡುಗಡೆ ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಗೆ ಪ್ರತಿಯಾಗಿ ರಾಜ್ಯ ಎದುರಿಸುತ್ತಿರುವ ಸಂಕಷ್ಟವನ್ನು ಸುಪ್ರೀಂಕೋರ್ಟ್ಗೆ ಸ್ಪಷ್ಟವಾಗಿ ಮನವರಿಕೆ ಮಾಡಿಕೊಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಮುಖಂಡರ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಮುಖಂಡರ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದ ವಸ್ತುಸ್ಥಿತಿಯನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡುವ ವಿಚಾರದಲ್ಲಿ ಸರಕಾರ ಕೈಗೊಳ್ಳುವ ನಿರ್ಣಯಕ್ಕೆ ತಾವು ಬದ್ಧ ಎಂದು ಸರ್ವಪಕ್ಷ ಮುಖಂಡರು ತಿಳಿಸಿರುವುದಾಗಿ ಹೇಳಿದರು.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆಯಿಂದಾಗಿ ಉಂಟಾಗಿರುವ ಪರಿಸ್ಥಿತಿಯನ್ನು ಸರ್ವಪಕ್ಷಗಳ ಮುಖಂಡರಿಗೆ ಮನವರಿಕೆ ಮಾಡಿಕೊಡಲಾಗಿದೆ. ನಾವೇ ಕಷ್ಟದಲ್ಲಿರುವಾಗ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದರು.
ಕಾವೇರಿ ಕಣಿವೆಯಲ್ಲಿ ಕಬಿನಿ, ಹಾರಂಗಿ, ಹೇಮಾವತಿ ಮತ್ತು ಕೃಷ್ಣರಾಜ ಸಾಗರ ಜಲಾಶಯಗಳಿವೆ. ಈ ಜಲಾಶಯಗಳ ಒಟ್ಟು ನೀರು ಸಂಗ್ರಹ ಸಾಮರ್ಥ್ಯವು 114 ಟಿಎಂಸಿ. ಇದರಲ್ಲಿ ಬಳಕೆಗೆ ಸಿಗುವ ನೀರಿನ ಪ್ರಮಾಣ 104 ಟಿಎಂಸಿ ಮಾತ್ರ. ಈ ವರ್ಷ ಎಲ್ಲ ಜಲಾಶಯಗಳ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಅಭಾವ ಇರುವುದರಿಂದ ಒಳ ಹರಿವು ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ಆ.24ರ ವೇಳೆಗೆ 195.25 ಟಿಎಂಸಿ ನೀರು ಒಳಹರಿವು ಬರಬೇಕಿತ್ತು. ಆದರೆ, 108 ಟಿಎಂಸಿ ಮಾತ್ರ ಸಂಗ್ರಹವಾಗಿದೆ. ಜೊತೆಗೆ ಒಳ ಹರಿವಿನ ಪ್ರಮಾಣವು ಶೇ. 55 ರಷ್ಟು ಮಾತ್ರ ಇದೆ. ಹೀಗಾಗಿ ನಮ್ಮ ಬಳಿ ಬಳಕೆಗೆ ಈಗ ಲಭ್ಯವಿರುವುದು 51 ಟಿಎಂಸಿ ಮಾತ್ರ. ಬೆಂಗಳೂರು, ಮೈಸೂರು, ಮಂಡ್ಯ ಹಾಗೂ ಇತರ ನಗರಗಳಿಗೆ ಕುಡಿಯುವ ನೀರು ಒದಗಿಸುವ ಸಲುವಾಗಿ ನಮಗೆ ಕನಿಷ್ಠ 40 ಟಿಎಂಸಿ ನೀರು ಬೇಕಾಗುತ್ತದೆ ಎಂದು ಸಿದ್ದರಾಮಯ್ಯ ವಿವರಣೆ ನೀಡಿದರು.
ಇತ್ತೀಚೆಗೆ ತಮಿಳುನಾಡಿನ ರೈತ ಮುಖಂಡರ ನಿಯೋಗ ತಮ್ಮನ್ನು ಭೇಟಿ ಮಾಡಿ ನಮ್ಮ ಬೆಳೆಗಳಿಗೆ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಿತು. ನಾವೇ ಕಷ್ಟದಲ್ಲಿದ್ದೇವೆ. ಇನ್ನು ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಹೇಗೆ. ಬೇಕಾದರೆ, ನೀವೆ ಹೋಗಿ ಜಲಾಶಯಗಳನ್ನು ವೀಕ್ಷಿಸಿ ಎಂದು ಅವರಿಗೆ ವಸ್ತುಸ್ಥಿತಿಯನ್ನು ವಿವರಿಸಿದ್ದೇನೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಈ ವರ್ಷದ ಮುಂಗಾರು ತೃಪ್ತಿಕರವಾಗಿಲ್ಲ. ವಾಡಿಕೆ ಪ್ರಕಾರವೂ ಮಳೆ ಬಂದಿಲ್ಲ. ಆದರೆ, ತಮಿಳುನಾಡು ದಕ್ಷಿಣ ಭಾರತದ ವಾಡಿಕೆ ಮಳೆಯ ಅಂಕಿ-ಅಂಶ ಮುಂದಿಟ್ಟು ಕೊಂಡು ಸುಪ್ರೀಂಕೊರ್ಟ್ಗೆ ಅರ್ಜಿ ಸಲ್ಲಿಸಿದೆ. ನಾವು ಎದುರಿಸುತ್ತಿರುವ ಸಂಕಷ್ಟ ಪರಿಸ್ಥಿತಿಯನ್ನು ತಮಿಳುನಾಡು ನ್ಯಾಯಾಲಯಕ್ಕೆ ತಿಳಿಸಿಲ್ಲ. ಕಾವೇರಿ ಕಣಿವೆಯ ಜಲಾಶಯಗಳಲ್ಲಿ ಕೇವಲ 51 ಟಿಎಂಸಿ ನೀರಿದೆ ಎಂಬುದನ್ನೂ ತಿಳಿಸಿಲ್ಲ. ಯಾವುದನ್ನೂ ಹೇಳದೆ 50 ಟಿಎಂಸಿಗೆ ತಮಿಳುನಾಡು ಸರಕಾರ ಬೇಡಿಕೆ ಇಟ್ಟಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಕುಡಿಯುವ ಉದ್ದೇಶಕ್ಕೆ ಪೂರೈಸಿದರೆ, ಈಗಾಗಲೆ ಬಿತ್ತನೆಯಾಗಿರುವ ಬೆಳೆಗಳಿಗೆ ಒದಗಿಸಿದರೆ ನಮಗೆ ನೀರು ಇರುವುದೆ ಇಲ್ಲ. ತಮಿಳುನಾಡಿಗೆ ಈಗಾಗಲೆ 29 ಟಿಎಂಸಿ ನೀರು ಹರಿದು ಹೋಗಿದೆ. ಮೆಟ್ಟೂರು ಜಲಾಶಯದಲ್ಲಿ ಪ್ರಸ್ತುತ 34 ಟಿಎಂಸಿ ನೀರು ಸಂಗ್ರಹವಿದೆ. ಆದರೂ, ನೀರಿಗಾಗಿ ತಗಾದೆ ತೆಗೆದಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.
ಈ ಎಲ್ಲ ವಿಚಾರಗಳ ಬಗ್ಗೆ ಇಂದಿನ ಸಭೆಯಲ್ಲಿ ಸರ್ವಪಕ್ಷ ಮುಖಂಡರ ಜೊತೆ ಚರ್ಚಿಸಲಾಗಿದೆ. ವಾಸ್ತವಿಕ ಚಿತ್ರಣವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಿ ಎಂದು ಅವರು ಸಲಹೆ ನೀಡಿದ್ದಾರೆ. ಅದರಂತೆ ನಮ್ಮ ವಕೀಲರ ತಂಡ ನ್ಯಾಯಾಲಯ ದಲ್ಲಿ ವಾದ ಮಂಡಿಸಲಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಸಭೆಯಲ್ಲಿ ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ಕಾವೇರಿ ಕಣಿವೆ ಜಿಲ್ಲೆಗಳ ಉಸ್ತುವಾರಿ ಸಚಿವರು ಭಾಗವಹಿಸಿದ್ದರು.
ನೀರು ಬಿಡಲು ನಾರಿಮನ್ ಹೇಳಿಲ್ಲ
ತಮಿಳುನಾಡಿಗೆ 4-5 ಟಿಎಂಸಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ವಕೀಲ ಫಾಲಿ ನಾರಿಮನ್ ಸರಕಾರಕ್ಕೆ ಸಲಹೆ ನೀಡಿದ್ದಾರೆ ಎಂದು ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಅವರು ಆ ರೀತಿಯ ಯಾವುದೆ ಸಲಹೆಯನ್ನು ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಸರಕಾರದ ತೀರ್ಮಾನಕ್ಕೆ ಬದ್ಧ: ಅನಂತ್ಕುಮಾರ್
ಬೆಂಗಳೂರು, ಆ.27: ರಾಜ್ಯದ ನೆಲ, ಜಲ, ಭಾಷೆಯ ವಿಷಯಗಳಿಗೆ ಸಂಬಂಧಿಸಿದಂತೆ ಎಲ್ಲ ರಾಜಕೀಯ ಪಕ್ಷಗಳು ಪಕ್ಷಭೇದವಿಲ್ಲದೆ ಒಗ್ಗಟ್ಟಾಗಿ ಸರಕಾರವನ್ನು ಬೆಂಬಲಿಸುತ್ತಾ ಬಂದಿವೆ. ಈ ಸಂಪ್ರದಾಯವು ಮುಂದುವರೆಯಲಿದೆ ಎಂದು ಕೇಂದ್ರ ರಸಗೊಬ್ಬರ ಸಚಿವ ಅನಂತ್ಕುಮಾರ್ ತಿಳಿಸಿದ್ದಾರೆ.
ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷಗಳ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯ ಅಭಾವದಿಂದ ರಾಜ್ಯದಲ್ಲಿ ತಲೆದೋರಿರುವ ತೀವ್ರ ಸಂಕಷ್ಟದ ಪರಿಸ್ಥಿತಿಯನ್ನು ನಮ್ಮ ವಕೀಲರ ಮೂಲಕ ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡುವಂತೆ ಸಲಹೆ ನೀಡಲಾಗಿದೆ ಎಂದರು.
ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿಗೆ ತೀವ್ರ ಸಂಕಷ್ಟವುಂಟಾಗಿದ್ದು, ನಾವು ಯಾವುದೆ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿಯಲ್ಲಿಲ್ಲ. ಇಂತಹ ಸ್ಥಿತಿಯ ಬಗ್ಗೆ ನಾವು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕಿದೆ. ಈ ಕೆಲಸವನ್ನು ಸರಕಾರ ಮಾಡಬೇಕು ಎಂದು ಅವರು ಹೇಳಿದರು.
ಮೈಸೂರು, ಹಾಸನ, ಮಂಡ್ಯ, ರಾಮನಗರ ಸೇರಿದಂತೆ ಕಾವೇರಿ ಪ್ರದೇಶಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದುರಾಗುವ ಸಂದರ್ಭ ಬಂದಿದೆ. ಜನ ಕುಡಿಯುವ ನೀರಿಗೂ ಪರಿತಪಿಸುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತುಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗುತ್ತಿಲ್ಲ ಎಂದು ಅನಂತ್ಕುಮಾರ್ ತಿಳಿಸಿದರು.