ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಮೋದಿ ವಿಫಲ: ವಿ.ಜೆ.ಕೆ.ನಾಯರ್
ಉಡುಪಿ, ಆ.30: ತೈಲ, ಆಹಾರಧಾನ್ಯ, ವಿದ್ಯುತ್ ಸೇರಿದಂತೆ ಎಲ್ಲ ಅಗತ್ಯವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಿಐಟಿಯು ರಾಜ್ಯಾಧ್ಯಕ್ಷ ವಿ.ಜೆ.ಕೆ.ನಾಯರ್ ಕಟುವಾಗಿ ಟೀಕಿಸಿದ್ದಾರೆ. ಸೆ.2ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ಬೆಂಬಲಿಸಿ ಉಡುಪಿ ಜಿಲ್ಲಾ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಆಶ್ರಯದಲ್ಲಿ ಬನ್ನಂಜೆ ಶಿವಗಿರಿಸಭಾಭವನದಲ್ಲಿ ಇತ್ತೀಚೆಗೆ ಆಯೋಜಿಸಲಾದ ಉಡುಪಿ ಜಿಲ್ಲಾ ಕಾರ್ಮಿಕರ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಅಧ್ಯಕ್ಷತೆಯನ್ನು ಸಿಐಟಿಯು ಜಿಲ್ಲಾಧ್ಯಕ್ಷ ಪಿ. ವಿಶ್ವನಾಥ ರೈ ವಹಿಸಿದ್ದರು. ಎಐಟಿಯುಸಿಯ ದ.ಕ.ಜಿಲ್ಲಾ ಮುಖಂಡ ಬಿ.ಕುಕ್ಯಾನ್ ಮಾತ ನಾಡಿದರು. ಜಿಲ್ಲಾ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸಂಚಾಲಕ ಅದಮಾರು ಶ್ರೀಪತಿ ಆಚಾರ್ಯ ಕರಡು ನಿರ್ಣಯವನ್ನು ವಾಚಿಸಿದರು. ವೇದಿಕೆಯಲ್ಲಿ ಬಿಇಎಫ್ಐಯರಾಜ್ಯ ಉಪಾಧ್ಯಕ್ಷ ಬಿ.ಎಂ. ಮಾಧವ, ಎ.ರವೀಂದ್ರ, ಕೆ.ವಿ. ಭಟ್, ಹೆರಾಲ್ಡ್ ಡಿಸೋಜ, ಬಿಎಸ್ಸೆನ್ನೆಲ್ ನೌಕರರ ಸಂಘದ ಶಶಿಧರ ಗೊಲ್ಲ, ವಿಮಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಯು.ಗುರುದತ್ ಉಪಸ್ಥಿತರಿದ್ದರು.