ಸಮಾಜದ ಏಳಿಗೆಗೆ ಶಿಕ್ಷ ಕರ ಕೊಡುಗೆ ಅಪಾರ: ಸಚಿವ ಕಾಗೋಡು
ಸಾಗರ, ಸೆ.10: ನನ್ನ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಕರು ನಿರ್ವಹಿಸಿದ ಪಾತ್ರ ಪ್ರಮುಖವಾಗಿದ್ದು, ಸಮಾಜದ ಏಳಿಗೆಗೆ ಶಿಕ್ಷಕರ ಕೊಡುಗೆ ಅಪಾರ ಎಂದು ಸಚಿವ ಕಾಗೋಡು ತಿಮ್ಮಪ್ಪಹೇಳಿದರು.
ಇಲ್ಲಿನ ಗುರುಭವನದಲ್ಲಿ ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರ ದಿನಾಚರಣೆ ಅನುಷ್ಠಾನ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಶಿಕ್ಷಣಕ್ಕೆ ಹೊಸಬೆಳಕು ನೀಡುವ ಶಿಕ್ಷಕ ವರ್ಗವನ್ನು ನಾವು ಗೌರವಾದರಗಳಿಂದ ನೋಡಿಕೊಳ್ಳಬೇಕು. ಬದಲಾದ ದಿನಮಾನಗಳಲ್ಲಿ ಸಮಾಜ ಸುಧಾರಣೆಯಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಶಿಕ್ಷಕ ದಿನಾಚರಣೆ ಸಂದರ್ಭದಲ್ಲಿ ಆತ್ಮಾವಲೋಕನ ಮಾಡಿಕೊಳ್ಳುವ ಜೊತೆಗೆ ಭವಿಷ್ಯದ ಪ್ರಜೆಗಳನ್ನು ರೂಪಿಸುವ ನಿಟ್ಟಿನಲ್ಲಿ ಅನುಸರಿಸಬೇಕಾದ ರೀತಿನೀತಿಗಳ ಕುರಿತು ಶಿಕ್ಷಕರು ಗಮನ ಹರಿಸಬೇಕು ಎಂದು ತಿಳಿಸಿದರು. ಶಿಕ್ಷಕ ದಿನಾಚರಣೆ ಕುರಿತು ವಿಶೇಷ ಉಪನ್ಯಾಸ ನೀಡಿದ ಕುಂದಾಪುರ ಬಸ್ರೂರು ಶಾರದಾ ಕಾಲೇಜಿನ ಪ್ರಾಧ್ಯಾಪಕ ಪ್ರತಾಪ್ ಚಂದ್ರಶೆಟ್ಟಿ ಹಳ್ನಾಡು, ವಿದ್ಯಾರ್ಥಿಗಳ ಖಾಸಗಿತನವನ್ನು ವ್ಯಾಟ್ಸ್ಆ್ಯಪ್, ಇಂಟರ್ನೆಟ್ನಂತಹ ಮಾಧ್ಯಮಗಳು ಅಪಹರಿಸುತ್ತಿದೆ. ತಂತ್ರಜ್ಞಾನವನ್ನು ಹೊರಗಿಟ್ಟು ವಿದ್ಯಾರ್ಥಿಗಳನ್ನು ಬೆಳೆಸಲು ಸಾಧ್ಯವಿಲ್ಲ. ಅದನ್ನು ಬಳಸಿಕೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಬಗ್ಗೆ ಶಿಕ್ಷಕ ಸಮೂಹ ಗಮನ ಹರಿಸಬೇಕು ಎಂದು ಹೇಳಿದರು. ಶಿಕ್ಷಣವು ವಿದ್ಯಾರ್ಥಿಗಳ ಒಟ್ಟಾರೆ ಮನಸ್ಸು, ಭಾವನೆಗಳನ್ನು ಬದಲಾಯಿಸಬೇಕು. ಶಿಕ್ಷಕರ ದಿನಾಚರಣೆಗಳು ಇಂತಹ ವಿಷಯಗಳ ಮೇಲೆ ಬೆಳಕು ಚೆಲ್ಲಬೇಕು ಎಂದರು. ಇದೇ ಸಂದರ್ಭ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ 8 ಶಿಕ್ಷಕರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಹಾಗೂ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ವತಿಯಿಂದ 5 ಪ್ರೌಢಶಾಲಾ ಸಹ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಜಿಪಂ ಅಧ್ಯಕ್ಷ ಆರ್.ಸಿ. ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಉಪಾಧ್ಯಕ್ಷ ಪರಶುರಾಮ ಕೆ.ಎಚ್., ಜಿಲ್ಲಾ ಪಂಚಾಯತ್ಸದಸ್ಯ ರಾಜಶೇಖರ ಗಾಳಿಪುರ, ನಗರಸಭಾ ಸದಸ್ಯೆ ನಾದಿರಾ ಪರ್ವೀನ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಿ.ಗಣಪತಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಜ್ಯೋತಿ ರೀನಾ ಅಂದ್ರಾದೆ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಚಂದ್ರಶೇಖರ್, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ಪಸಂಗಣ್ಣನವರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಅಣ್ಣಪ್ಪಜಿ.ನಾಯಕ್, ಉಪವಿಭಾಗಾಧಿಕಾರಿ ಡಿ.ಎಂ. ಸತೀಶ್ಕುಮಾರ್, ತಹಶೀಲ್ದಾರ್ ಎನ್.ಟಿ. ಧರ್ಮೋಜಿರಾವ್, ಕಾರ್ಯ ನಿರ್ವಹಣಾಧಿಕಾರಿ ಸಿದ್ದಲಿಂಗಯ್ಯ ಮತ್ತಿತರರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಲಿಂಗಪ್ಪ ಸ್ವಾಗತಿಸಿದರು.
‘ಆರೋಗ್ಯ ರಕ್ಷಣೆ ಆದ್ಯ ಕರ್ತವ್ಯವಾಗಲಿ’ :
ಸಾಗರ: ಆರೋಗ್ಯ ರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಅದರಲ್ಲಿಯೂ ಕಣ್ಣಿನ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು ಎಂದು ಸಚಿವ ಕಾಗೋಡು ತಿಮ್ಮಪ್ಪಹೇಳಿದರು. ಇಲ್ಲಿನ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಕಾಗೋಡು ತಿಮ್ಮಪ್ಪ ಅಭಿಮಾನಿಗಳ ಸಮಾಜಸೇವಾ ಬಳಗ, ಪ್ರೇಮಕುಮಾರ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ ಹಾಗೂ ಬೆಥನಿ ವೃತ್ತಿ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಕಾಗೋಡು ತಿಮ್ಮಪ್ಪಅವರ ಹುಟ್ಟುಹಬ್ಬದ ಅಂಗವಾಗಿ ಏರ್ಪಡಿಸಲಾಗಿದ್ದ ಮೂರು ದಿನಗಳ ಉಚಿತ ಕಣ್ಣಿನ ತಪಾಸಣೆ, ಹೊಲಿಗೆರಹಿತ ಕಣ್ಣಿನ ಶಸ್ತ್ರಚಿಕಿತ್ಸೆ ಹಾಗೂ ಮಸೂರ ಅಳವಡಿಕೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾದ ರೋಗಿಗಳಿಗೆ ಕನ್ನಡಕ, ಔಷಧ ವಿತರಣೆ ಮಾಡಿ ಅವರು ಮಾತನಾಡುತ್ತಿದ್ದರು. ಬದಲಾದ ದಿನಮಾನಗಳಲ್ಲಿ ಸಮಾಜಸೇವೆ ತನ್ನ ಅರ್ಥವನ್ನು ಕಳೆದುಕೊಳ್ಳುತ್ತಿದೆ. ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಸೇವೆ ಮಾತ್ರ ಸಾರ್ಥಕತೆಯನ್ನು ಪಡೆಯುತ್ತದೆ. ಹುಟ್ಟುಹಬ್ಬ ಆಚರಣೆ ಬಗ್ಗೆ ನನಗೆ ನಂಬಿಕೆಯಿಲ್ಲ. ಜನರ ಕೆಲಸ ಮಾಡುವುದೇ ನನ್ನ ಸಾರ್ಥಕ ಸೇವೆಯ ಪ್ರತೀಕ ಎಂದು ಭಾವಿಸಿದ್ದೇನೆ. ಅಭಿಮಾನಿಗಳು ಹುಟ್ಟುಹಬ್ಬವನ್ನು ಇಂತಹ ಸಾಮಾಜಿಕ ಸೇವೆ ಮೂಲಕ ನಡೆಸುತ್ತಿರುವುದು ಸಂತೋಷ ತಂದಿದೆ ಎಂದರು. ಡಯಾಲಿಸಿಸ್ ಮಾಡಿಸಿಕೊಳ್ಳಲು ಅಕ್ಕಪಕ್ಕದ ತಾಲೂಕುಗಳಿಂದಲೂ ರೋಗಿಗಳು ಬರುತ್ತಿದ್ದಾರೆ. ಬರುವವರಿಗೆ ಡಯಾಲಿಸಿಸ್ ಯಂತ್ರದ ಕೊರತೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಉಪವಿಭಾಗೀಯ ಆಸ್ಪತ್ರೆಯಲ್ಲಿ ದಾನಿಗಳ ಸಹಕಾರದಿಂದ ಹೆಚ್ಚುವರಿಯಾಗಿ 6 ಡಯಾಲಿಸಿಸ್ ಘಟಕವನ್ನು ಅಳವಡಿಸಲಾಗಿದೆ. ಇದರಿಂದ ಹೆಚ್ಚಿನ ರೋಗಿಗಳಿಗೆ ಅನುಕೂಲವಾಗಲಿದೆ ಎಂದರು. ವೇದಿಕೆಯಲ್ಲಿ ಸಂತ ಜೋಸೆಫ್ ದೇವಾಲಯದ ಧರ್ಮಗುರು ವೀನಸ್ ಪ್ರವೀಣ್, ತಾಲೂಕು ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್, ತಾಲೂಕು ಅಧ್ಯಕ್ಷ ಎಲ್.ಟಿ.ಹೆಗಡೆ, ನಗರ ಅಧ್ಯಕ್ಷ ಮಕ್ಬೂಲ್ ಅಹ್ಮದ್, ಗಣಾಧೀಶ್, ಸುರೇಶ್ಬಾಬು, ಡಾ. ರಾಜನಂದಿನಿ, ಡಾ. ಪ್ರಕಾಶ್ ಬೋಸ್ಲೆ, ಡಾ. ಕೆ.ಪಿ.ಅಚ್ಚುತ್ ಮತ್ತಿತರರಿದ್ದರು. ಅನ್ವರ್ ಬಾಷಾ ನಿರೂಪಿಸಿದರು.