×
Ad

ರಾಷ್ಟ್ರೀಯ ಜಲ ನೀತಿಯೊಂದೇ ಪರಿಹಾರ: ಸಿಎಂ ಸಿದ್ದರಾಮಯ್ಯ

Update: 2016-09-10 23:44 IST

‘ಒಕ್ಕೂಟ ವ್ಯವಸ್ಥೆಯಲ್ಲಿ ಸಮಸ್ಯೆಗಳ ಇತ್ಯರ್ಥಕ್ಕೆ ಸಂಘರ್ಷ ಸಲ್ಲ’

ಬೆಂಗಳೂರು, ಸೆ.10: ನದಿ ನೀರಿನ ಹಂಚಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಸಂಘರ್ಷ ಸರಿಯಲ್ಲ. ನ್ಯಾಯಾಲಯಗಳ ಮೂಲಕ ಸಮಸ್ಯೆ ಇತ್ಯರ್ಥ ಅಸಾಧ್ಯ. ಆದುದರಿಂದ ಕೇಂದ್ರ ಸರಕಾರ ರಾಷ್ಟ್ರೀಯ ಜಲ ನೀತಿ ರೂಪಿಸಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಶನಿವಾರ ಇಲ್ಲಿನ ವೈಯಾಳಿಕಾವಲ್‌ನಲ್ಲಿ ತೆಲುಗು ವಿಜ್ಞಾನ ಸಮಿತಿಯು ನೂತನವಾಗಿ ನಿರ್ಮಿಸಿರುವ ಕೃಷ್ಣದೇವರಾಯ ಕಲಾಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಕ್ಕೂಟ ವ್ಯವಸ್ಥೆಯಲ್ಲಿ ನದಿ ನೀರಿನ ಹಂಚಿಕೆಯ ವಿಚಾರದಲ್ಲಿ ರಾಜ್ಯಗಳ ನಡುವೆ ಜಗಳ ಸೃಷ್ಟಿ ಆಗುತ್ತಿರುವುದು ದುರದೃಷ್ಟಕರ ಎಂದು ವಿಷಾದ ವ್ಯಕ್ತಪಡಿಸಿದರು.

ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ನೂರು ವರ್ಷಗಳಷ್ಟು ಹಳೆಯದು. ಸೌಹಾರ್ದಯುತ ಮಾತುಕತೆಯ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಅವಕಾಶವಿದ್ದರೂ ತಮಿಳುನಾಡು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಪದೇಪದೇ ಗೊಂದಲ ಸೃಷ್ಟಿಸುತ್ತಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕಾವೇರಿ ಜಲಾನಯನ ಪ್ರದೇಶ ಸೇರಿದಂತೆ ರಾಜ್ಯದಲ್ಲಿ ಕುಡಿಯಲು ನೀರಿಲ್ಲದೆ ಭೀಕರ ಬರ ಪರಿಸ್ಥಿತಿ ಸೃಷ್ಟಿಯಾಗಿದೆ. ಆದರೆ, ತಮಿಳುನಾಡು ಸರಕಾರ ಅಲ್ಲಿನ ‘ಸಾಂಬಾ’ ಬೆಳೆಗೆ ಕಾವೇರಿ ನೀರು ಕೇಳುತ್ತಿದ್ದು, ಕೋರ್ಟ್ ಮೆಟ್ಟಿಲೇರಿದೆ. ತಮಿಳುನಾಡಿನ ಮೆಟ್ಟೂರು ಜಲಾಶಯ ದಲ್ಲಿ 36 ಟಿಎಂಸಿ ನೀರಿದ್ದರೂ, ಕಾವೇರಿ ನೀರು ಕೇಳುವುದು ಎಷ್ಟು ಸರಿ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ರಾಜ್ಯದಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಲೇ ಬೇಕಾದ ಅನಿವಾರ್ಯವಿದೆ. ಆದರೂ, ಭಾರವಾದ ಮನಸ್ಸಿನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದ ಅವರು, ಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು, ರಾಜ್ಯದ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡಲಾಗುವುದು ಎಂದರು.

ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಸೆ.12ರಂದು ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧಿಸಿದ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ನಡೆಯಲಿದ್ದು, ರಾಜ್ಯದ ಜಲಾಶಯಗಳ ವಾಸ್ತವ ಸ್ಥಿತಿ ಹಾಗೂ ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಪತ್ರ ರವಾನೆ: ಮಹಾದಾಯಿ ನೀರಿನ ಹಂಚಿಕೆ ಸಂಬಂಧ ನ್ಯಾಯಾಧಿಕರಣದ ಸೂಚನೆ ಹಿನ್ನೆಲೆಯಲ್ಲಿ ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಈಗಾಗಲೇ ಪತ್ರ ಬರೆದಿದ್ದು, ಮಾತುಕತೆಗೆ ಆಗಮಿಸುವಂತೆ ಕೋರಲಾಗಿದೆ. ಅಲ್ಲದೆ, ಪ್ರಧಾನಿ ಮಧ್ಯ ಪ್ರವೇಶಕ್ಕೆ ಮನವಿ ಮಾಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಮಾತುಕತೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸ್ಪಂದಿಸಿದ್ದು, ಗೋವಾ ಮುಖ್ಯಮಂತ್ರಿ ದೂರವಾಣಿ ಕರೆಗೂ ಸಿಗುತ್ತಿಲ್ಲ ಎಂದು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನದಿ ನೀರಿನ ಹಂಚಿಕೆ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಿ ಚರ್ಚೆಯ ಮೂಲಕ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.

ಜಿಎಸ್‌ಟಿ ವಿಧೇಯಕ: ಸೆ.14ರಂದು ಕರೆದಿದ್ದ ವಿಶೇಷ ಅಧಿವೇಶನ ರದ್ದು

ಬೆಂಗಳೂರು, ಸೆ.10: ಸರಕು ಹಾಗೂ ಸೇವಾ ತೆರಿಗೆ ವಿಧೇಯಕ(ಜಿಎಸ್‌ಟಿ)ಕ್ಕೆ ವಿಧಾನಮಂಡಲದ ಒಪ್ಪಿಗೆ ಪಡೆಯಲು ಸೆ.14ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಒಂದು ದಿನದ ವಿಶೇಷ ಅಧಿವೇಶನವನ್ನು ರದ್ದುಗೊಳಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

 ಶನಿವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ಯಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದರು. ಸಂಸತ್ತು ಅನುಮೋದನೆ ನೀಡಿರುವ ಜಿಎಸ್‌ಟಿ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂಕಿತ ಹಾಕಿ ರುವುದರಿಂದ ಅದು ಕಾನೂನಿನ ರೂಪ ಪಡೆದುಕೊಂಡಿದೆ.

 ಆದುದರಿಂದ, ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಅಧಿವೇಶನ ಕರೆಯುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

ವಿಶೇಷ ಅಧಿವೇಶನವನ್ನು ರದ್ದುಗೊಳಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಯಚಂದ್ರ ತಿಳಿಸಿದರು.

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸೆ.5ರಂದು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಪರಿಷ್ಕರಿಸು ವಂತೆ ಕೋರಿ ಇವತ್ತು ಅರ್ಜಿ ಸಲ್ಲಿಸಲಾಗಿದೆ. ಸೋಮವಾರ ದಿಲ್ಲಿಯಲ್ಲಿ ಕಾವೇರಿ ಮೇಲುಸ್ತುವಾರಿ ಸಮಿತಿ ಸಭೆ ನಿಗದಿಯಾಗಿದ್ದು, ಅಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಅವರು ಹೇಳಿದರು. ಸಭೆಯಲ್ಲಿ ಪಾಲ್ಗೊಳ್ಳಲು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಮುಖ್ಯ ಕಾರ್ಯದರ್ಶಿ ಅರವಿಂದಜಾಧವ್, ಅಡ್ವೊಕೇಟ್ ಜನರಲ್, ತಾಂತ್ರಿಕ ತಂಡವು ದಿಲ್ಲಿಗೆ ತೆರಳಿದೆ ಎಂದು ಜಯಚಂದ್ರ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News