ಕಾವೇರಿ ವಿವಾದ: ಪ್ರಧಾನಿ ಮೋದಿ ಭೇಟಿ ಕೋರಿಕೆಗೆ ಉತ್ತರ ಬಂದಿಲ್ಲ - ಟಿ.ಬಿ. ಜಯಚಂದ್ರ
ಬೆಂಗಳೂರು, ಸೆ.15: ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆಯ ಸಂಬಂಧ ಮಾತುಕತೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಸಮಯ ಕೋರಿದ್ದರೂ, ಇದುವರೆಗೂ ಯಾವುದೇ ಉತ್ತರ ಬಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಕಾವೇರಿ ನೀರು ಹಂಚಿಕೆ ವಿವಾದದ ಸಂಬಂಧ ಸುಪ್ರೀಂಕೋರ್ಟ್ ಮತ್ತು ಮೇಲುಸ್ತುವಾರಿ ಸಮಿತಿಗಳ ಮುಂದೆ ಅನುಸರಿಸಬೇಕಾದ ಕಾನೂನು ಹೋರಾಟದ ಕುರಿತ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ಪ್ರಧಾನಿ ಮೋದಿಯವರೊಂದಿಗೆ ಯಾವಾಗ ಮಾತುಕತೆ ನಡೆಸಲಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೋದಿಯವರೊಂದಿಗೆ ಮಾತುಕತೆ ನಡೆಸಲು ಸಮಯಾವಕಾಶ ಕೋರಿ ಸಿಎಂ ಸಿದ್ದರಾಮಯ್ಯ ಈಗಾಗಲೇ ಪತ್ರ ಬರೆದಿದ್ದಾರೆ.
ಆದರೆ, ಇದುವರೆಗೂ ಯಾವುದೇ ಉತ್ತರವಿಲ್ಲ. ಭೇಟಿಯ ಸಮಯಕ್ಕೆ ಕಾಯುತ್ತಿದ್ದೇವೆ ಎಂದರು.
ಇಂದಿನ ಸಭೆಯ ಬಗ್ಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಇದುವರೆಗೂ ಸರಕಾರ ಅನುಸರಿಸಿದ ಕಾನೂನು ಹೋರಾಟ, ಮುಂದೆ ಕೈಗೊಳ್ಳಬೇಕಾದ ನಿಲುವುಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಪಾಲ್ಗೊಂಡ ತಜ್ಞರೆಲ್ಲರೂ, ಒಳ್ಳೆಯ ಸಲಹೆಗಳನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಸುಪ್ರೀಂಕೋರ್ಟ್ ಮತ್ತು ಮೇಲುಸ್ತುವಾರಿ ಸಮಿತಿಗಳ ಮುಂದೆ ವಾದ ಮಂಡಿಸಲು ನಮಗೆ ನೈತಿಕ ಶಕ್ತಿ ದೊರೆತಂತಾಗಿದೆ ಎಂದು ಜಯಚಂದ್ರ ಹೇಳಿದರು.