×
Ad

ವಿವಿ ಶೌಚಾಲಯದಲ್ಲಿ ಗುಪ್ತ ಕ್ಯಾಮರಾ ಪ್ರಕರಣ: ಆರೋಪಿಯ ಜಾಮೀನು ರದ್ದುಗೊಳಿಸಲು ನ್ಯಾಯಾಲಯಕ್ಕೆ ಮನವಿ

Update: 2016-09-18 13:49 IST

ಮಂಗಳೂರು, ಸೆ.18: ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಫೋನ್ ಕ್ಯಾಮರಾ ಇಟ್ಟ ಪ್ರಕರಣದಲ್ಲಿ ಬಂಧಿತನಿಗೆ ಸಿಕ್ಕಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ತಿಳಿಸಿದ್ದಾರೆ.
ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕಾನೂನು ಪ್ರಕಾರ ಆರೋಪಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಆರೋಪಿಗೆ ಜಾಮೀನು ಸಿಗುವಂತೆ ಸಣ್ಣ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಆರೋಪಿಸುವವರ ಜೊತೆ ಚರ್ಚಿಸಲಾಗುವುದು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ಪರವಾಗಿ ಪ್ರಭಾವಿಗಳು ಒತ್ತಡ ಕೆಲಸ ಮಾಡಿದ್ದು ಕಂಡುಬಂದರೆ ಅಂತಹ ಪ್ರಭಾವಿಗಳನ್ನೂ ಬಂಧಿಸಲಾಗುವುದು ಎಂದು ಹೇಳಿದರು.
ಭಾರೀ ಆತಂಕ ಸೃಷ್ಟಿಸಿದ್ದ ಶೌಚಾಲಯದಲ್ಲಿ ಗುಪ್ತ ಕ್ಯಾಮರಾ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಸಂತೋಷ್ ಆಚಾರ್ಯ ಮರುದಿನವೇ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದನು. ಇದು ಪ್ರಕರಣದ ತನಿಖೆ ಹಾಗೂ ಆತನ ಮೇಲೆ ದಾಖಲಾಗಿರುವ ಮೊಕದ್ದಮೆಗಳ ಬಗ್ಗೆ ಸಾರ್ವಜನಿಕ ಸಂಶಯಕ್ಕೆ ಕಾರಣವಾಗಿತ್ತು.

ಕಟೀಲು ಕ್ಷೇತ್ರದ ಅಪಮಾನ ಪ್ರಕರಣ: ತನಿಖೆಗೆ ಫೇಸ್‌ಬುಕ್ ಅಸಹಕಾರ
ಕಟೀಲು ಕ್ಷೇತ್ರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿಯಾಗಿ ಬರೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗೆ ಸಹಕರಿಸುವಂತೆ ಫೇಸ್‌ಬುಕ್ ಸಂಸ್ಥೆಗೆ ಮೂರು ನೋಟಿಸ್ ಕಳುಹಿಸಲಾಗಿದೆ. ಆದರೆ ಫೇಸ್‌ಬುಕ್ ಯಾವುದೇ ಸಹಕಾರ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಂಸ್ಥೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಕಮಿಷನರ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News