ಎಸ್ಡಿಪಿಐ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆ
ಬೆಂಗಳೂರು, ಸೆ.26: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯು ಬೆಂಗಳೂರಿನ ಪ್ರಧಾನ ಕಚೇರಿಯಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್, ದೇಶದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿರುವುದು ಗಮನಿಸಿದರೆ ಈ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ದುಷ್ಟಶಕ್ತಿಗಳು ಹೊರಟಿರುವಂತೆ ಕಾಣುತ್ತಿದೆ. ಇಂತಹ ಸಂದಿಗ್ಧ ವಾತಾವರಣದಲ್ಲಿ ಜವಾಬ್ದಾರಿಯಿಂದ ಇದ್ದು ಜನರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಪಕ್ಷವನ್ನು ಮುನ್ನಡೆಸಬೇಕಾಗಿದೆ ಎಂದು ಕರೆ ನೀಡಿದರು. ‘ಜಾತ್ಯತೀತ ಇಂಡಿಯಾ ಸಮಾವೇಶ’ ಎಂಬ ಶೀರ್ಷಿಕೆಯಡಿ ರಾಷ್ಟ್ರಮಟ್ಟದಲ್ಲಿ ಅ.2ರಿಂದ 8ರವರೆಗೆ ಹಮ್ಮಿಕೊಂಡ ಅಭಿಯಾನವನ್ನು ಯಶಸ್ವಿಗೊಳಿಸಲು ತೀರ್ಮಾನಿಸಿದ ಸಭೆಯು, ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸರಕಾರ ವಿಫಲವಾಗಿದೆ. ಫಲಾನುಭವಿಗಳು ಭ್ರಷ್ಟಾಚಾರದ ಅವ್ಯವಸ್ಥೆಗೆ ಬಲಿಯಾಗುತ್ತಿರುವುದರ ವಿರುದ್ಧ ಹೋರಾಟ ರೂಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯದ ಉಸ್ತುವಾರಿ ಇಲ್ಯಾಸ್ ಮುಹಮ್ಮದ್ ತುಂಬೆ, ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ಲತೀಫ್ ಮತ್ತು ಅಬ್ದುಲ್ ಮಜೀದ್, ರಾಜ್ಯ ಸಮಿತಿ ಸದಸ್ಯರು, ಜಿಲ್ಲಾಧ್ಯಕ್ಷರು ಪಾಲ್ಗೊಂಡಿದ್ದರು.