×
Ad

‘‘ಯೆತ್ನಳ್ಳ’’ ಎತ್ತಿನ ಹೊಳೆಯಾದ ಬಗೆ...

Update: 2016-09-29 23:09 IST

ಭಾಗ- 1

ನಮ್ಮೂರಿನ ರಂಗ ಚಟುವಟಿಕೆಗಳು ಮತ್ತು ಆಮೂಲಕ ನಾವು ಕಟ್ಟಿಕೊಂಡ ಬದುಕು, ಹೋರಾಟಗಳು ದುಃಖ-ಸಂಭ್ರಮಗಳು, ಅದರ ಮೂಲಕ ಹೊರಜಗತ್ತಿನೊಡನೆ ನಾವು ನಡೆಸುತ್ತಿರುವ ಸಂವಾದ, ಈ ಎಲ್ಲದರ ಜೊತೆ ಎತ್ತಿನ ಹಳ್ಳದ ಸಂಬಂಧವಿದೆ. ಸಂಬಂಧ ಅನ್ನುವುದು ಯಾವಾಗಲೂ ದೊಡ್ಡದೇ.

‘‘ಲಕ್ಷ್ಮ್ಮಯ್ಯ’’ ಎಂಬ ಅನಕ್ಷರಸ್ಥ ಕೂಲಿಕಾರ್ಮಿಕನೊಬ್ಬ, ಸ್ವಾಭಿಮಾನಿಯಾಗಿ, ಸ್ವಾಧ್ಯಾಯಿಯಾಗಿ ಅಕ್ಷರಕಲಿತು, ತಲೆಯೆತ್ತಿ ನಿಲ್ಲುವ ಘಟನೆ ಮುಂದೆ ನಮ್ಮೂರಿನ ರಾತ್ರಿ ಶಾಲೆಗೆ, ಆ ಶಾಲೆಯ ಅಕ್ಷರದಾಹಿಗಳ ಮೂಲಕ ನಮ್ಮೆಲ್ಲ ಸಾಂಸ್ಕೃತಿಕ ಸಾಹಸಗಳಿಗೆ ಕಾರಣವಾಯಿತು. ‘‘ಲಕ್ಷ್ಮ್ಮಯ್ಯ’’ನ ಸ್ವಾಧ್ಯಾಯದ ಹಿನ್ನೆಲೆಯಲ್ಲಿ ಎತ್ತಿನ ಹಳ್ಳದ ಸಂಗೀತವಿದೆ. ಆತ ನನ್ನಿಂದ ಕಾಗುಣಿತವನ್ನು ಹೇಳಿಸಿಕೊಂಡು ಗುಟ್ಟಾಗಿ ಯಾರಿಗೂ ತಿಳಿಯದಂತೆ ರಾಗವಾಗಿ ಹಾಡಿ ಬಾಯಿಪಾಠ ಮಾಡಿಕೊಂಡದ್ದು ಇದೇ ಎತ್ತಿನ ಹಳ್ಳದಲ್ಲಿ ಸ್ನಾನ ಮಾಡುತ್ತ, ಈಜಾಡುತ್ತ. ಎತ್ತಿನ ಹಳ್ಳದ ನೀರಿನಲ್ಲಿ ಗುಣಿತಾಕ್ಷರಗಳು ಅನುರಣಗೊಂಡಿವೆ.

ಸಕಲೇಶಪುರ ತಾಲೂಕಿನ ಪಶ್ಚಿಮ ಭಾಗದಲ್ಲಿರುವ ಮೂರ್ಕಣ್ಣು ಗುಡ್ಡದ ಬೆಟ್ಟಸಾಲಿನಲ್ಲಿ ಎತ್ತಿನ ಹಳ್ಳ ಹುಟ್ಟುತ್ತದೆ. ಅಲ್ಲಿ ಮೂರು ತೊರೆಗಳು ಹುಟ್ಟುತ್ತವೆ. ಎತ್ತಿನಹಳ್ಳ, ಚಿಟ್ಟನಹಳ್ಳ ಮತ್ತು ಜಪಾವತಿ. ಉಳಿದೆರಡು ತೊರೆಗಳು ಪೂರ್ವಕ್ಕೆ ಹರಿದು ಹೇಮಾವತಿಯ ಮಡಿಲಿಗೆ ಬಿದ್ದರೆ, ಎತ್ತಿನಹಳ್ಳ ಪಶ್ಚಿಮಾಭಿಮುಖಿ. ಇದರ ಹರಿವು, ಎಂಟ್ಹತ್ತು ಕಿಲೋಮೀಟರುಗಳು ಅಷ್ಟೆ. ನಂತರ ಶಿರಾಡಿ ಘಟ್ಟ ಪ್ರದೇಶದ ಕೆಂಪೊಳೆಯಲ್ಲಿ ಲೀನವಾಗುತ್ತದೆ.

ನಾವೆಲ್ಲ ಚಿಕ್ಕವರಿದ್ದಾಗ ಬೇಸಗೆಯ ರಜಾದಿನಗಳಲ್ಲಿ ಕಾಲ ಕಳೆಯುತ್ತಿದ್ದುದು, ಈಜು ಕಲಿತದ್ದು ಎತ್ತಿನ ಹಳ್ಳದಲ್ಲೇ ಆ ಕಾಲದಲ್ಲಿ ಮಧ್ಯಾಹ್ನದ ವೇಳೆಗೆ ನೂರಾರು ದನಕರುಗಳನ್ನು ನೀರಿಗಾಗಿ ಎತ್ತಿನಹಳ್ಳಕ್ಕೆ ತರುತ್ತಿದ್ದರು. ಆಗ ಸುತ್ತಲಿನ ಗ್ರಾಮಗಳಲ್ಲಿ ಸಾವಿರಾರು ಎಕರೆ ಗೋಮಾಳವೂ ಇತ್ತು. ದನಕಾಯುವ ಹುಡುಗರ ದಂಡೇ ಅಲ್ಲಿ ನೆರೆಯುತ್ತಿತ್ತು. ಬುಗುರಿ, ಚಿಣ್ಣಿದಾಂಡು ಆಡುತ್ತಾ, ಬೀಡಿ ಸೇದುತ್ತ, ನಿತ್ಯ ಜಲಕ್ರೀಡೆಯ ವೈಭೋಗದಲ್ಲಿದ್ದ ಆ ಹುಡುಗರನ್ನು ಕಂಡಾಗ. ಶಾಲೆಗೆ ಹೋಗಲೇಬೇಕಾದ ಶಿಕ್ಷೆಗೊಳಗಾಗಿದ್ದ ನಮ್ಮಂತವರಿಗೆ, ದನಕಾಯುವವರು ಪರಮ ಸುಖಿಗಳೆಂದು ಅನ್ನಿಸಿ ಬುಗುರಿ, ಚಿಣ್ಣಿದಾಂಡಿಗಾಗಿ ಅವರ ಸ್ನೇಹಕ್ಕೆ ಹಾತೊರೆಯುತ್ತಿದ್ದೆವು. ಹರಕು ಬಟ್ಟೆ ತೊಟ್ಟು ಒಪ್ಪೊತ್ತಿನ ಊಟದ ಶ್ರೀಮಂತಿಕೆಯಲ್ಲಿದ್ದ ಆ ದನಗಾಹಿಗಳಿಗೆ, ಸಾಲೆ ಕಲಿಯುತ್ತಿದ್ದ ನಮ್ಮಂತವರ ಬಗ್ಗೆ ವಿಶೇಷ ಗೌರವವೇನೂ ಇರಲಿಲ್ಲ. ಅವರೆಲ್ಲ ನಮ್ಮನ್ನು ಕೈಲಾಗದ ‘ಹೇತ್ಲಾಂಡಿ’ಗಳಂತೆ ಕಾಣುತ್ತಿದ್ದರಲ್ಲದೆ, ತಾವುಗಳು ಮಹಾನ್ ವೀರಾಧಿವೀರರಂತೆ ನಡೆದುಕೊಳ್ಳುತ್ತಿದ್ದರು. ಅವರಲ್ಲಿ ಅವರದ್ದೇ ಆದ ಅನೇಕ ತರದ ಸಾಹಸದ ರೋಚಕ ಕತೆಗಳಿರುತ್ತಿದ್ದವು. ಅವುಗಳಲ್ಲಿ ಮಾಮುಬ್ಯಾರಿಯ ಅಂಗಡಿಯಿಂದ ಕದ್ದ ಬೀಡಿ ಬಂಡಲಿನ ಕತೆ, ಇನ್ಯಾರದೋ ತೋಟದಲ್ಲಿ ಬೈನೆ ಬಿಚ್ಚಿ ಸೇಂದಿ ಕುಡಿದು ಏಟುತಿಂದದ್ದು ಮುಂತಾದ ಸಾಹಸಗಳಿರುತ್ತಿದ್ದವು.

ಎತ್ತಿನಹಳ್ಳದ ಎರಡೂ ದಡಗಳ ಉದ್ದಕ್ಕೂ ಸೊಂಪಾಗಿ ಬೆಳೆದ ವಾಟೆ ಮೆಳೆಗಳಿದ್ದವು. ಸುತ್ತಲಿನ ಗ್ರಾಮಗಳ ಸಮಸ್ತ ಕೃಷಿ ಚಟುವಟಿಕೆಗಳಿಗೆ ಪೂರಕ ಸಾಮಗ್ರಿಗಳಾದ ಅಂದರೆ ಕುಕ್ಕೆ, ಮಂಕರಿ, ಪಾತಿ-ಚಪ್ಪರಗಳಿಗೆ, ಮಳೆಗಾಲಕ್ಕೆ ಗೊರಗ, ಗುಡಿಸಲುಗಳ ಮಾಡಿಗೆ ಹುಲ್ಲು ಹೊದೆಸಲು ಅಡ್ಡಗಳು, ಗೋಡೆಗೆ ನೆರಿಕೆ, ತಟ್ಟಿ, ಎಲ್ಲಕ್ಕೂ ಎತ್ತಿನ ಹಳ್ಳದ ವಾಟೆಯೇ ಆಧಾರ. ಎಲ್ಲ ದನಗಾಹಿಗಳ ಕೈಯಲ್ಲೂ ದನಗಳನ್ನು ಅಟ್ಟುವ ಕೋಲಿನೊಂದಿಗೆ ವಾಟೆಯಿಂದ ತಯಾರಿಸಿದ ಕೊಳಲೂ ಇರುತ್ತಿತ್ತು. ದನಗಾಹಿಗಳು ದಾರಿಯುದ್ದಕ್ಕೂ ಯಾವುದಾದರೂ ಸಿನೆಮಾ ಹಾಡಿನ ಅಥವಾ ಜಾನಪದ ಗೀತೆಗಳ ದಾಟಿಯನ್ನು ನುಡಿಸುತ್ತ ಸಾಗುತ್ತಿದ್ದರು, ಇದು ಬಹಳ ದೂರದವರೆಗೆ ಕೇಳುತ್ತಿತ್ತು. ಅವರಲ್ಲೂ ಅನೇಕರು ಸುಶ್ರಾವ್ಯವಾಗಿ ನುಡಿಸುತ್ತಿದ್ದು ಮಾರ್ಗದರ್ಶನ ದೊರೆತಿದ್ದರೆ ಉತ್ತಮ ಕೊಳಲು ವಾದಕರಾಗುವ ಸಾಧ್ಯತೆ ಇತ್ತು. ಎತ್ತಿನ ಹಳ್ಳದ ಬಳಿ ಮೇಳೈಸಿರುತ್ತಿದ್ದ ನೂರಾರು ದನಕರುಗಳ ಹಿಂಡು ವಾಪಸ್ ಹೋಗುವಾಗ ತಮ್ಮ ಒಡೆಯನ ಕೊಳಲಿನ ದನಿಯನ್ನನುಸರಿಸಿ ತಮ್ಮತಮ್ಮ ಗುಂಪನ್ನು ಸೇರಿಕೊಳ್ಳುತ್ತಿದ್ದವು.

ಹಿಂದಿನ ಕಾಲದಲ್ಲಿ ಮಂಗಳೂರಿನತ್ತ ಸಾಗುತ್ತಿದ್ದ ಎತ್ತಿನ ಗಾಡಿಗಳು, ಇದೇ ಎತ್ತಿನ ಹಳ್ಳದ ಬಳಿ ತಂಗುತ್ತಿದ್ದವಂತೆ. ಎತ್ತುಗಳನ್ನು ತೊಳೆದು, ನೀರು ಕುಡಿಸಿ ದಣಿವಾರಿಕೊಳ್ಳುತ್ತಿದ್ದ ಈ ಸ್ಥಳವನ್ನು ಎತ್ತಿನ ಹಳ್ಳವೆಂದು ಕರೆದಿರಬೇಕು. ಮುಂದೆ ಇದೇ ಹೆಸರು ರೂಢಿಗೆ ಬಂತು. ಜನರ ಬಾಯಲ್ಲಿ ‘‘ಯೆತ್ನಳ್ಳ’’ವಾಯಿತು. (ಸಕಲೇಶಪುರ ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈ ಸ್ಥಳಕ್ಕೆ ‘‘ಎತ್ತಿನಹಳ್ಳ’’ ಎಂದೇ ಹೆಸರು. ಇದರ ಮೇಲ್ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲೇ ನದಿತಿರುವು ಯೋಜನೆಯ ಅಣೆಕಟ್ಟೊಂದು ನಿರ್ಮಾಣವಾಗುತ್ತಿದೆ).

ಹೀಗೆ ಹಾಡುತ್ತ, ಕುಣಿಯುತ್ತ, ಮಳೆಗಾಲದಲ್ಲಿ ಆರ್ಭಟಿಸುತ್ತ, ಭೋರ್ಗರೆಯುತ್ತ, ತಣ್ಣಗೆ ಹರಿಯುತ್ತಿದ್ದ, ಎತ್ತಿನ ಹಳ್ಳಕ್ಕೆ ಶುಕ್ರ, ಶನಿಯೋ, ಅಂತೂ ಒಂದು ದೆಸೆ ಪ್ರಾರಂಭವಾದದ್ದು, ಮೂರೂವರೆ ದಶಕಗಳ ಹಿಂದೆ. ಸಕಲೇಶಪುರ ನಗರಕ್ಕೆ ಪೂರೈಕೆಯಾಗುತ್ತಿರುವ ಹೇಮಾವತಿ ನದಿಯ ನೀರು ಕಲುಷಿತವಾಗಿದೆ, ಕುಡಿಯಲು ಯೋಗ್ಯವಾಗಿಲ್ಲ ಎಂದು ಕೆಲವರು ಅದಕ್ಕೆ ಪರಿಹಾರವನ್ನು ಹುಡುಕತೊಡಗಿದರು. ಅಂದಿನ ರಾಜಕಾರಣಿಗಳು, ಸಕಲೇಶಪುರ ಪುರಸಭೆಯ ಹಿರಿಯರೂ ಸೇರಿ ಎತ್ತಿನ ಹಳ್ಳದ ನೀರನ್ನು ಸಕಲೇಶಪುರ ನಗರಕ್ಕೆ ತಂದರೆ ಶುದ್ಧವಾದ ನೀರು ಸಿಗುತ್ತದೆಂದು ಭಾವಿಸಿದರು. ಇದಕ್ಕೆ ಅಂದಿನ ಹಿರಿಯ ರಾಜಕಾರಣಿಗಳಲ್ಲೊಬ್ಬರಾದ ಎನ್.ಕೆ.ಗಣಪಯ್ಯನವರೂ ದನಿಗೂಡಿದರು. ಗಣಪಯ್ಯನವರ ‘‘ಹಾರ್ಲೆ ಎಸ್ಟೇಟ್’’ ಕೂಡಾ ಎತ್ತಿನ ಹಳ್ಳದ ಪಕ್ಕದಲ್ಲೇ ಇತ್ತು. ಹಾರ್ಲೆ ಎಸ್ಟೇಟಿನ ಪಕ್ಕದಲ್ಲಿ ಸಣ್ಣ ಕಟ್ಟೆಯೊಂದನ್ನು ಕಟ್ಟಿ ನೀರನ್ನು ಆರು ಕಿ.ಮೀ ದೂರದ ಸಕಲೇಪುರಕ್ಕೆ ತರುವ ಸಣ್ಣಯೋಜನೆ ಇದಾಗಿತ್ತು. ಆದರೆ ಬಹಳ ಬೇಗ ಈ ಯೋಜನೆಯ ಮೇಲೆ ಅಧಿಕಾರಿಗಳ, ರಾಜಕಾರಣಿಗಳ ಗಮನ ಹರಿಯಿತು. ಎತ್ತಿನಹಳ್ಳದ ನೀರನ್ನು ಬರಿಯ ಸಕಲೇಶಪುರ ನಗರಕ್ಕೆ ತರುವುದರೊಂದಿಗೆ, ಸ್ವಲ್ಪದೊಡ್ಡ ಯೋಜನೆಯನ್ನಾಗಿ ಮಾಡಿ ಹೇಮಾವತಿ ನದಿಗೆ ಸೇರಿಸಿದರೆ ನೀರಾವರಿಗೂ ಮತ್ತಷ್ಟು ನೀರು ದೊರೆಯುವುದೆಂಬ ಮಾತು ಕೇಳಿಬರತೊಡಗಿತು. ಇದನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿದವರು ಅಂದಿನ ನೀರಾವರಿ ಮಂತ್ರಿಗಳಾಗಿದ್ದ ಹೆಚ್.ಸಿ. ಶ್ರೀಕಂಠಯ್ಯ. ಆಗಲೇ ಮುಂದಾಗಲಿರುವ ಅನಾಹುತವನ್ನು ಗ್ರಹಿಸಿ ಎನ್.ಕೆ.ಗಣಪಯ್ಯ ಈ ಯೋಜನೆಯನ್ನು ವಿರೋಧಿಸತೊಡಗಿದರು. ಆಗ ಕೆಲವರು ‘‘ಈಗ ಗಣಪಯ್ಯ ತನ್ನ ಕಾಫಿತೋಟ ಮುಳುಗಡೆ ಆಗುತ್ತೆ ಅಂತ ವಿರೋಧ ಮಾಡ್ತಾರೆ, ಮೊದ್ಲು ಶುರು ಮಾಡಿದ್ದೂ ಇವರೇ’’ ಎಂದು ದೂರತೊಡಗಿದರು. ವಾಸ್ತವದ ಸಂಗತಿಯೆಂದರೆ, ಈ ಯೋಜನೆಯಿಂದ ಗಣಪಯ್ಯನವರ ತೋಟ ಮುಳಗಡೆಯಾಗುತ್ತಿರಲಿಲ್ಲ, ಬದಲಿಗೆ ಅಕ್ಕ ಪಕ್ಕದ ಕೆಲವು ಕಾಫಿ ತೋಟಗಳು ಭಾಗಶಃ ಮುಳುಗಡೆಯಾಗುತ್ತಿದ್ದವು. ನಂತರದ ದಿನಗಳಲ್ಲಿ ಇದಕ್ಕಾಗಿ ಸರ್ವೇ ಇತ್ಯಾದಿ ಕಾರ್ಯಗಳು ಪ್ರಾರಂಭವಾದವು. ಪ್ರತಿನಿತ್ಯ ನೀರಿನ ಹರಿವನ್ನು ಅಳೆಯಲು ಒಬ್ಬ ನೌಕರನ ನೇಮಕವೂ ಆಯ್ತು. ಹಾರ್ಲೆ ಎಸ್ಟೇಟಿನ ಬಳಿ ಎತ್ತಿನ ಹಳ್ಳಕ್ಕೆ, ಅಬ್ಬಿ ಹಳ್ಳ ಎನ್ನುವ ಪುಟ್ಟ ತೊರೆಯೊಂದು ಸೇರುವ ಜಾಗವಿದೆ. ಅಲ್ಲಿ ಕಟ್ಟೆಯೊಂದನ್ನು ಕಟ್ಟಿ ನಾಲೆಯ ಮೂಲಕ, ಹೆಬ್ಬಸಾಲೆ, ಮಾವಿನಕೂಲು, ಗ್ರಾಮಗಳನ್ನು ಹಾದು, ಸಕಲೇಶಪುರ ಮೂಡಿಗೆರೆ ರಸ್ತೆಯನ್ನು ಹಾರ್ಲೆಕೂಡಿಗೆ ಎನ್ನುವ ಸ್ಥಳದಲ್ಲಿ ದಾಟಿ, ಗಾಣದಹೊಳೆ ಗ್ರಾಮವನ್ನು ಸೇರಿ ಅಲ್ಲಿಂದ ಹೇಮಾವತಿ ನದಿಗೆ ನೀರನ್ನು ಸಾಗಿಸುವ ಯೋಜನೆಯೂ ಸುದ್ದಿಯಾಯಿತು. ಯಾರ ಜಮೀನು ಹೋಗಬಹುದು, ಪರಿಹಾರವೆಷ್ಟು ಸಿಕ್ಕೀತು ಎನ್ನುವ ಲೆಕ್ಕಾಚಾರಗಳು ಪ್ರಾರಂಭವಾದವು. ಇದೆಲ್ಲ ಆಗಲು ಇನ್ನೂ ಇಪ್ಪತ್ತು ವರ್ಷವಾದರೂ ಬೇಕು. ಆವಾಗ ನೋಡೋಣ ಎನ್ನುವವರೂ ಇದ್ದರು.

ಆಗಿನ ಅಂದಾಜಿನ ಪ್ರಕಾರ, ಹಾರ್ಲೆ ಎಸ್ಟೇಟಿನ ಬಳಿ ಕಟ್ಟೆಯನ್ನು ಕಟ್ಟಿ ನೀರನ್ನು ತಿರುಗಿಸಿದರೆ,ಎತ್ತಿನ ಹಳ್ಳದಿಂದ ದೊರೆಯುವ ನೀರಿನ ಪ್ರಮಾಣ ಸುಮಾರು ಒಂದೂವರೆ ಟಿ.ಎಂ.ಸಿ ಎಂದು ನೀರಾವರಿ ಇಲಾಖೆ ಪ್ರಕಟಿಸಿತ್ತು.

ನಂತರದ ವರ್ಷಗಳಲ್ಲಿ ಈ ನೀರು ತಿರುಗಿಸುವ ಯೋಜನೆ ಗುಪ್ತಗಾಮಿನಿಯಾಗಿ ಹರಿಯುತ್ತಲೇಇತ್ತು.

ಎತ್ತಿನ ಹಳ್ಳಕ್ಕೆ ಈ ಕಟ್ಟೆಯನ್ನು ಕಟ್ಟಲು ಯೋಜಿಸಿದ್ದ ಜಾಗ ಪೂರ್ಣ ಚಂದ್ರ ತೇಜಸ್ವಿಯವರ ಮೆಚ್ಚಿನ ತಾಣಗಳಲ್ಲಿ ಒಂದು. ಅವರು ಎಪ್ಪತ್ತರ ದಶಕದಲ್ಲಿ ಹಲವು ಬಾರಿ ಇಲ್ಲಿಗೆ ಮೀನು ಹಿಡಿಯಲು ಬರುತ್ತಿದ್ದರು. ಆಗ ನಮ್ಮ ಸುತ್ತಮುತ್ತಲಿನ ಗ್ರಾಮಗಳ ಕೆಲವು ಯುವಕರೂ ಅವರೊಂದಿಗೆ ಹೋಗುವುದಿತ್ತು. ಆಗಿನ್ನೂ ಈ ಎತ್ತಿನ ಹಳ್ಳದ ನೀರನ್ನು ಸಕಲೇಶಪುರಕ್ಕೆ ಸಾಗಿಸುವ ಮಾತಷ್ಟೆ ಪ್ರಚಾರದಲ್ಲಿತ್ತು. ನನ್ನ ಗೆಳೆಯರು ಯಾರೋ ತೇಜಸ್ವಿಯವರಿಗೆ. ಈ ವಿಚಾರವನ್ನು ತಿಳಿಸಿದ್ದರು. ಅದಕ್ಕೆ ತೇಜಸ್ವಿ ‘‘ಹೇಮಾವತಿ ನೀರು ಕ್ಲೀನಿಲ್ಲ ಅಂದ್ರೆ ಅದನ್ನ ಕೆಡಸಿದವ್ರ ಯಾರು, ನಾವೇ ಅಲ್ವೆ, ಈಗೆಲ್ಲ ಏನೇನೋ ವಿಧಾನಗಳು ಬಂದಿವೆ, ಅದೇ ನೀರನ್ನು ಕ್ಲೀನ್ ಮಾಡಿ ಬಳಸಬೇಕು, ಮನೆಬಾಗಲ ನೀರು ಕೆಡಸಿ ಇನ್ನೊಂದು ಕಡೆಯಿಂದ ನೀರು ತರ್ತೀನಿ ಅನ್ನೋದು ಮೂರ್ಖತನ ಕಣ್ರೀ ನೀವೆಲ್ಲಾ ವಿರೋಧಿಸಬೇಕು’’ ಎಂದಿದ್ದರಂತೆ. ನಂತರದ ದಿನಗಳಲ್ಲಿ ತೇಜಸ್ವಿಯವರೂ ಇತ್ತ ಬರುವುದನ್ನು ಕಡಿಮೆ ಮಾಡಿದರು. (ಇತ್ತೀಚೆಗೆ ಖಾಸಗಿ ಟಿ.ವಿ ಛಾನಲ್ ಒಂದಕ್ಕೆ ತೇಜಸ್ವಿಯವರ ಬಗ್ಗೆ ನಾವೊಂದಷ್ಟು ಜನ ಗೆಳೆಯರು ಸೇರಿ, ಸಾಕ್ಷ್ಯ ಚಿತ್ರವೊಂದನ್ನು ಮಾಡಿದೆವು, ಆಗ ಇದೇ ಸ್ಥಳದಲ್ಲಿ ಚಿತ್ರೀಕರಣ ನಡೆಸಲಾಗಿದೆ. ಎತ್ತಿನ ಹೊಳೆಯೋಜನೆ ಪೂರ್ಣಗೊಂಡರೆ ಈ ಸ್ಥಳಗಳೆಲ್ಲ ನೆನಪು ಮಾತ್ರವಾಗಲಿದೆ)

ಎತ್ತಿನಹಳ್ಳ ಹುಟ್ಟಿ ಹರಿಯುವ ಮೂರ್ಕಣ್ಣುಗುಡ್ಡ ಸಾಲಿನ ತಪ್ಪಲಿನಲ್ಲೇ ನಮ್ಮ ರಂಗ ತಂಡವೂ ಹುಟ್ಟಿ ಬೆಳೆದಿದೆ. ಎಪ್ಪತ್ತರ ದಶಕದ ಕೊನೆಯಭಾಗದಲ್ಲಿ ಹುಟ್ಟಿದ ನಮ್ಮ ರಂಗಬಳಗದ ಗೆಳೆಯರೆಲ್ಲ ಸೇರಿ, ಹತ್ತು ವರ್ಷಗಳ ಚಟುವಟಿಕೆಯ ನಂತರ ಪ್ರಥಮ ಬಾರಿಗೆ ರಂಗ ತರಬೇತಿ ಶಿಬಿರವೊಂದನ್ನು ಆಯೋಜಿಸಿದ್ದೆವು. ಅದರ ಉದ್ಘಾಟನೆಯನ್ನು ತೇಜಸ್ವಿಯವರೇ ನಡೆಸಿಕೊಟ್ಟರು. ಆ ದಿನ ನಮ್ಮೂರ ಶಾಲಾಮಕ್ಕಳಿಂದ ನಾಟಕ ಪ್ರದರ್ಶನವಿತ್ತು. ನಾಟಕವನ್ನು ನಾನೇ ಬರೆದು ನಿರ್ದೇಶಿಸಿದ್ದೆ. ನಾಟಕದ ಹೆಸರು ‘‘ಮೂರ್ಕಣ್ಣು ಗುಡ್ಡ’’. ನಾಟಕದ ವಸ್ತುವೂ ಪರಿಸರ ನಾಶದಿಂದಾಗುವ ಹಾನಿಯ ಬಗ್ಗೆ ಇತ್ತು. ಮಕ್ಕಳ ಅಭಿನಯವನ್ನು ತೇಜಸ್ವಿಯವರು ತುಂಬಾ ಮೆಚ್ಚಿಕೊಂಡರು. ಮುಂದೆ ನಮ್ಮ ರಂಗ ತಂಡಕ್ಕೆ. ‘‘ಪ್ರಕೃತಿ ರಂಗ ಮಂಚ’’ ಎಂದೇ ಹೆಸರಿಟ್ಟೆವು.

ಈಗ ನಮ್ಮೆಲ್ಲ ರಂಗ ಚಟುವಟಿಕೆಗಳು ನಡೆಯುತ್ತಿರುವ, ಇನ್ನೂ ನಿರ್ಮಾಣ ಹಂತದಲ್ಲಿರುವ ರಂಗ ಮಂದಿರಕ್ಕೆ ‘ಪೂರ್ಣಚಂದ್ರ ತೇಜಸ್ವಿ ರಂಗಮಂದಿರ’ ವೆಂದು ಕರೆದಿದ್ದೇವೆ. ಇಲ್ಲಿ ನಿಂತು ನೋಡಿದರೆ, ಪೂರ್ವ ದಿಕ್ಕಿಗೆ ಸಕಲೇಶಪುರದ ಮಂಜ್ರಾಬಾದ್ ಕೋಟೆಯೂ, ದಕ್ಷಿಣದಲ್ಲಿ ಬಾನಿನಂಚಿಗೆ ಕುಮಾರ ಪರ್ವತವೂ ಪಶ್ಚಿಮದಲ್ಲಿ ಮೂರ್ಕಣ್ಣು ಗುಡ್ಡ ಸಾಲೂ, ವಾಯುವ್ಯದಲ್ಲಿ ದೂರದಲ್ಲಿ ಬಾಬಾಬುಡನ್ ಗಿರಿಶಿಖರಗಳೂ ಗೋಚರಿಸುತ್ತವೆ. ರಂಗಮಂದಿರದಲ್ಲಿ ನಿಂತು, ಅಲ್ಲಿಂದಲೇ ಸಂಪೂರ್ಣ ಎತ್ತಿನ ಹಳ್ಳದ ಜಲಾನಯನ ಪ್ರದೇಶವನ್ನು ವೀಕ್ಷಿಸಬಹುದು.

ಘಟ್ಟ ಪ್ರದೇಶದ ಕೆಂಪೊಳೆಯಲ್ಲಿ ಹಾಗೂ ಕಾಡುಮನೆ ಭಾಗದಲ್ಲಿ ಜಲವಿದ್ಯುತ್ ಯೋಜನೆಗಳು ಪ್ರಾರಂಭವಾದ್ದರಿಂದ, ಎತ್ತಿನ ಹಳ್ಳವನ್ನು ತಿರುಗಿಸುವ ಯೋಜನೆಯ ಮಾತು ಹಿನ್ನೆಲೆಗೆ ಸರಿಯಿತು. ಈ ನೀರನ್ನು ತಿರುಗಿಸಿದರೆ ಕೆಳಭಾಗದಲ್ಲಿ ಸ್ಥಾಪಿಸಿರುವ ಜಲವಿದ್ಯುತ್ ಯೋಜನೆಗಳಿಗೆ ನೀರಿನ ಕೊರತೆ ಉಂಟಾಗುವುದರಿಂದ ಇದನ್ನು ಕೈಬಿಡಲಾಗುವುದೆಂದೇ ಎಲ್ಲರೂ ನಂಬಿದರು. ಈ ವಿದ್ಯುತ್ ಯೋಜನೆಗಳಲ್ಲಿ ಕೆಲವು ಆನೆದಾರಿಯಲ್ಲೇ ಅಡ್ಡವಾಗಿ ಸ್ಥಾಪಿತವಾದವು. ಇದರಿಂದಾಗಿ ಸುತ್ತಲಿನ ಗ್ರಾಮಗಳಲ್ಲಿ ಆನೆ ಮತ್ತಿತರ ಕಾಡುಪ್ರಾಣಿಗಳಿಂದ ತೊಂದರೆಯೂ ಆರಂಭವಾದವು. ಆದರೆ ಈ ಜಲ ವಿದ್ಯುತ್ ಯೋಜನೆಗಳಿಂದ ನಮ್ಮೂರು ಬೆಳಕಾದೀತೆಂತು ಕಾದು ಕುಳಿತವರಿಗೆ ನಿರಾಸೆಯಾದದ್ದು ಈ ವಿದ್ಯುತ್ ಆಂಧ್ರದ ಪಾಲಾಗಿದೆಯೆಂದು ತಿಳಿದಾಗ.

ಇದರೊಂದಿಗೆ ಮಲೆನಾಡಿನ ಅತ್ಯಂತ ಸೂಕ್ಷ್ಮ ಹಾಗೂ ಸುಂದರ ಅರಣ್ಯಪ್ರದೇಶಗಳಾದ ಬಿಸಲೆ, ಕಾಗಿನಹರೆ, ಹೊಂಗಡಹಳ್ಳ ಪ್ರದೇಶಗಳನ್ನೆಲ್ಲ ಮುಳುಗಿಸಿ ವಿದ್ಯುತ್ ತಯಾರಿಸುವ ‘ಗುಂಡ್ಯಜಲ ವಿದ್ಯುತ್‌ಯೋಜನೆ’ಯೂ ಪ್ರಕಟವಾಯ್ತು. ನಂತರ ನಡೆದ ಹೋರಾಟದ ವಿವರಗಳು ಎಲ್ಲರಿಗೂ ತಿಳಿದಿರುವಂತದ್ದೇ ಆಗಿದೆ

ಎತ್ತಿನ ಹಳ್ಳಕ್ಕೆ ಈ ಕಟ್ಟೆಯನ್ನು ಕಟ್ಟಲು ಯೋಜಿಸಿದ್ದ ಜಾಗ ಪೂರ್ಣ ಚಂದ್ರ ತೇಜಸ್ವಿಯವರ ಮೆಚ್ಚಿನ ತಾಣಗಳಲ್ಲಿ ಒಂದು. ಅವರು ಎಪ್ಪತ್ತರ ದಶಕದಲ್ಲಿ ಹಲವು ಬಾರಿ ಇಲ್ಲಿಗೆ ಮೀನು ಹಿಡಿಯಲು ಬರುತ್ತಿದ್ದರು. ಆಗ ನಮ್ಮ ಸುತ್ತಮುತ್ತಲಿನ ಗ್ರಾಮಗಳ ಕೆಲವರು ಯುವಕರೂ ಅವರೊಂದಿಗೆ ಹೋಗುವುದಿತ್ತು. ಆಗಿನ್ನೂ ಈ ಎತ್ತಿನ ಹಳ್ಳದ ನೀರನ್ನು ಸಕಲೇಶಪುರಕ್ಕೆ ಸಾಗಿಸುವ ಮಾತಷ್ಟೆ ಪ್ರಚಾರದಲ್ಲಿತ್ತು. ನನ್ನ ಗೆಳೆಯರು ಯಾರೋ ತೇಜಸ್ವಿಯವರಿಗೆ. ಈ ವಿಚಾರವನ್ನು ತಿಳಿಸಿದ್ದರು. ಅದಕ್ಕೆ ತೇಜಸ್ವಿ ‘‘ಹೇಮಾವತಿ ನೀರು ಕ್ಲೀನಿಲ್ಲ ಅಂದ್ರೆ ಅದನ್ನ ಕೆಡಸಿದವ್ರ ಯಾರು, ನಾವೇ ಅಲ್ವೆ, ಈಗೆಲ್ಲ ಏನೇನೋ ವಿಧಾನಗಳು ಬಂದಿವೆ, ಅದೇ ನೀರನ್ನು ಕ್ಲೀನ್ ಮಾಡಿ ಬಳಸಬೇಕು, ಮನೆಬಾಗಲ ನೀರು ಕೆಡಸಿ ಇನ್ನೊಂದು ಕಡೆಯಿಂದ ನೀರು ತರ್ತೀನಿ ಅನ್ನೋದು ಮೂರ್ಖತನ ಕಣ್ರೀ ನೀವೆಲ್ಲಾ ವಿರೋಧಿಸಬೇಕು’’ ಎಂದಿದ್ದರಂತೆ.

Writer - ಪ್ರಸಾದ್ ರಕ್ಷಿದಿ

contributor

Editor - ಪ್ರಸಾದ್ ರಕ್ಷಿದಿ

contributor

Similar News