ಕಾಪು ಕ್ಷೇತ್ರ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Update: 2016-10-04 17:22 GMT

ಮಂಗಳೂರು, ಅ.4: ಉಡುಪಿ ಜಿ.ಪಂ., ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವಲಯ ಹಾಗೂ ಶಿರ್ವದ ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆ ಇವುಗಳ ಸಹಯೋಗದಲ್ಲಿ ಕಾಪು ಕ್ಷೇತ್ರ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವು ರವಿವಾರ ಶಿರ್ವ ಹಿಂದೂ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಶಿರ್ವ ವಿದ್ಯಾವರ್ಧಕ ಸಂಘದ ಸಂಚಾಲಕ ವಿ.ಸುಬ್ಬಯ್ಯ ಹೆಗ್ಡೆ ತ್ರಿವರ್ಣದ ಬಲೂನ್‌ಗಳನ್ನು ಹಾರಿ ಬಿಡುವುದರ ಮೂಲಕ ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸುವವರು ರಾಷ್ಟ್ರ ಹಾಗೂ ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ಹಾರೈಸಿದರು.

ಉಡುಪಿ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶೇಖರ ಗೌಡ ಸಿ.ಪಾಟೀಲ್ ಧ್ವಜಾರೋಹಣ ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ.ಭಾಸ್ಕರ ಶೆಟ್ಟಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡರೆ ವ್ಯಕ್ತಿತ್ವ ವಿಕಸನಗೊಳ್ಳಲು ಸಾಧ್ಯ ಎಂದರು.

ಮುಖ್ಯ ಅತಿಥಿಗಳಾಗಿ ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಮುಮ್ತಾಝ್ ಅಲಿ, ಆಡಳಿತಾಧಿಕಾರಿ ಬಿ.ಎಂ.ಬೀರಾ ಮೊದಿನ್, ಕಾರ್ಯದರ್ಶಿ ವಹೀದ್ ಅಹ್ಮದ್, ಉಪಾಧ್ಯಕ್ಷ ಶಬೀ ಅಹ್ಮದ್ ಖಾಝಿ, ಹಿಂದೂ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸುಂದರ ಮೇರಾ, ಉಡುಪಿ ಜಿಲ್ಲಾ ದೈ.ಶಿ. ಶಿಕ್ಷಕ ಸಂಘದ ಸೀತಾರಾಮ ಶೆಟ್ಟಿ, ತಾ.ದೈ.ಶಿ.ಶಿಕ್ಷಕ ಸಂಘದ ಸೋಮಪ್ಪ ತಿಂಗಳಾಯ ಉಪಸ್ಥಿತರಿದ್ದರು.

ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಫೆಲಿಸಿಟಾಸ್ ಪಿರೇರಾ ಸ್ವಾಗತಿಸಿದರು. ಉಡುಪಿ ಜಿಲ್ಲಾ ಮಾಜಿ ದೈ.ಶಿ. ಪರಿವೀಕ್ಷಣಾಧಿಕಾರಿ ಬಸವರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಗೀತಾ ಗಣೇಶ್ ವಂದಿಸಿದರು. ಶಿಕ್ಷಕಿ ರೇವತಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News