ಬೆಳೆ ಹಾನಿ ಸಮೀಕ್ಷೆ ಚುರುಕುಗೊಳಿಸಿ: ಆರ್.ವಿ. ದೇಶಪಾಂಡೆ
ಕಾರವಾರ, ಅ.6: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ಹಾನಿಯನ್ನು ಅಂದಾಜಿಸಲು ಕಂದಾಯ ಇಲಾಖೆ ಹಾಗೂ ಕೃಷಿ ಇಲಾಖೆ ಜಂಟಿ ಸಮೀಕ್ಷೆ ಕಾರ್ಯ ಶೀಘ್ರ ಪೂರ್ಣಗೊಳಿಸಬೇಕೆಂದು ಜಿಲ್ಲಾ ಉಸ್ತವಾರಿ ಸಚಿವ ಆರ್.ವಿ. ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಮಳೆ ಬೆಳೆ ಪರಿಸ್ಥಿತಿ ಕುರಿತು ಪರಿಶೀಲನಾ ಸಭೆ ನಡೆಸಿ ಮಾತನಾಡುತ್ತಿದ್ದರು.
ಪ್ರಸ್ತುತ ಹಳಿಯಾಳ ಮತ್ತು ಸಿದ್ದಾಪುರ ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲಾಗಿದೆ. ಶಿರಸಿ, ಮುಂಡಗೋಡು ಭಾಗಗಳಲ್ಲಿಯೂ ಮಳೆ ಕೊರತೆಯಿಂದ ಬೆಳೆ ಹಾನಿ ಸಂಭವಿಸಿದೆ. ಮಳೆ ಕೊರತೆಯಿಂದ ಬೆಳೆ ಹಾನಿ ಸಂಭವಿಸಿದ ಕಡೆಗಳಲ್ಲಿ ಶೇ.33ರಷ್ಟು ಇನ್ಪುಟ್ ಸಬ್ಸಿಡಿ ನೀಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆ ಹಾನಿ ಸಂಭವಿಸಿದ ಎಲ್ಲಾ ತಾಲೂಕುಗಳಲ್ಲಿ ಸಮೀಕ್ಷೆ ಕಾರ್ಯ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ: ಕೃಷಿ, ತೋಟಗಾರಿಕೆ, ಕಂದಾಯ ಸೇರಿದಂತೆ ಪ್ರಮುಖ ಇಲಾಖೆ ಅಧಿಕಾರಿಗಳು ನಿರಂತರವಾಗಿ ಗ್ರಾಮೀಣ ಪ್ರದೇಶಗಳಿಗೆ ಪ್ರವಾಸ ಕೈಗೊಂಡು ಬೆಳೆ ಪರಿಸ್ಥಿತಿ ಪರಿಶೀಲನೆ ನಡೆಸಬೇಕು. ಅಧಿಕಾರಿಗಳ ಪ್ರವಾಸ ದಿನಚರಿಯನ್ನು ಜಿಲ್ಲಾಧಿಕಾರಿ, ಸಿಇಒ, ಸಚಿವರ ಕಚೇರಿ, ಶಾಸಕರ ಕಚೇರಿಗೂ ಕಳುಹಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರಗಿಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಕುಡಿಯುವ ನೀರು: ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಬಹುದು. ಅಂತಹ ಗ್ರಾಮಗಳನ್ನು ಈಗಲೇ ಗುರುತಿಸಿ ಪರ್ಯಾಯ ವ್ಯವಸ್ಥೆಗಳನ್ನು ಕೈಗೊಳ್ಳಬೇಕು. ಅಕ್ಟೋಬರ್ 20ರ ಒಳಗಾಗಿ ತಾಲೂಕು ಮಟ್ಟದಲ್ಲಿ ಟಾಸ್ಕ್ಫೋರ್ಸ್ ಸಮಿತಿ ಸಭೆಯನ್ನು ನಡೆಸಿ ವರದಿಯನ್ನು ಪಡೆದುಕೊಳ್ಳಬೇಕು. ಬೋರ್ವೆಲ್ ದುರಸ್ತಿ, ಪೈಪ್ಲೈನ್ ಅಳವಡಿಕೆ, ಫ್ಲಶಿಂಗ್, ಟ್ಯಾಂಕರ್ ಮೂಲಕ ನೀರು ಪೂರೈಕೆ ಇತ್ಯಾದಿ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ, ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಪಂ ಸಿಇಒ ಚಂದ್ರಶೇಖರ ನಾಯಕ್, ಎಎಸ್ಪಿದೇವರಾಜ್, ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಶೇ.18ರಷ್ಟು ಮಳೆ ಕೊರತೆ ಉಂಟಾಗಿದೆ. ಹಳಿಯಾಳದಲ್ಲಿ ಶೇ.59ರಷ್ಟು, ಯಲ್ಲಾಪುರದಲ್ಲಿ ಶೇ.45ರಷ್ಟು ಮತ್ತು ಮುಂಡಗೋಡಿನಲ್ಲಿ ಶೇ.42ರಷ್ಟು ಮಳೆ ಕೊರತೆ ಉಂಟಾಗಿದೆ. ಜಿಲ್ಲೆಯಲ್ಲಿ 79, 612ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆಸಲಾಗಿದೆ. ಶೇ.33ಕ್ಕಿಂತ ಹೆಚ್ಚು ನಷ್ಟ ಸಂಭವಿಸಿದೆ. ಮುಂಡಗೋಡಿನಲ್ಲಿ 9ಸಾವಿರ ಹೆಕ್ಟೇರ್, ಹಳಿಯಾಳದಲ್ಲಿ 6, 253ಹೆಕ್ಟೇರ್, ಶಿರಸಿಯಲ್ಲಿ 4, 770ಹೆಕ್ಟೇರ್, ಸಿದ್ದಾಪುರದಲ್ಲಿ 3, 200 ಮತ್ತು ಯಲ್ಲಾಪುರದಲ್ಲಿ 1,125ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಹೊನ್ನಪ್ಪಗೌಡ ಅವರು ಮಾಹಿತಿ ನೀಡಿದರು