×
Ad

ಬೈಕಂಪಾಡಿ ಕೈಗಾರಿಕಾ ಪ್ರದೇಶವಿನ್ನು ಕೈಗಾರಿಕಾ ನಗರ ಪ್ರಾಧಿಕಾರ

Update: 2016-10-28 23:27 IST

ಮಂಗಳೂರು, ಅ.28: ಬೈಕಂಪಾಡಿ ಕೈಗಾರಿಕಾ ಪ್ರದೇಶವನ್ನು ಕೈಗಾರಿಕಾ ನಗರ ಪ್ರಾಧಿ ಕಾರವನ್ನಾಗಿ ಮಾಡುವ ಸಲುವಾಗಿ ಪಾಲಿಕೆಯಿಂದ ನಿರಾಕ್ಷೇಪಣಾ ಪತ್ರ ಕೋರಿ ಇಂದು ನಡೆದ ಮನಪಾ ಸಾಮಾನ್ಯ ಸಭೆಯಲ್ಲಿ ಕಾರ್ಯಸೂಚಿ ಮಂಡಿಸಲ್ಪಟ್ಟಿತು. ಮೇಯರ್ ಹರಿನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಪಕ್ಷ ಸದಸ್ಯರು ಮಾಹಿತಿ ಬಯಸಿದ ಹಿನ್ನೆಲೆಯಲ್ಲಿ ಈ ಕಾರ್ಯಸೂಚಿಯನ್ನು ನಗರ ಯೋಜನೆ ಸಮಿತಿಯಲ್ಲಿ ವಿಲೇವಾರಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಲಭ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ಪ್ರದೇಶ ಸೇರಿ ರಾಜ್ಯದ 8 ಕೈಗಾರಿಕಾ ಪ್ರದೇಶಗಳನ್ನು ಕೈಗಾರಿಕಾ ನಗರ ಪ್ರಾಧಿಕಾರವನಾಗಿಸಲು ರಾಜ್ಯ ಸರಕಾರ ನಿರ್ದೇಶಿಸಿದೆ ಎಂದು ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್ ಸಭೆಯಲ್ಲಿ ತಿಳಿಸಿದರು. ಮನಪಾ ವ್ಯಾಪ್ತಿಯ ಬೈಕಂಪಾಡಿ ಕೈಗಾರಿಕಾ ಪ್ರದೇಶದ 1,407 ಎಕರೆ ಈ ಕೈಗಾರಿಕಾ ನಗರ ಪ್ರಾಧಿಕಾರಕ್ಕೆ ಒಳಪಡಲಿದೆ. ಸ್ಥಳೀಯ ಸಂಸ್ಥೆಗಳೇ ಅದರ ಅಭಿವೃದ್ಧಿಯನ್ನು ಮಾಡಬೇಕಾಗಿದ್ದು, ಸಂಗ್ರಹವಾಗುವ ತೆರಿಗೆಯಲ್ಲಿ ಶೇ. 30ರಷ್ಟನ್ನು ಮನಪಾಕ್ಕೆ ಸಲ್ಲಿಸಬೇಕಾಗಿದೆ ಎಂದು ಗೋಕುಲ್‌ದಾಸ್ ನಾಯಕ್ ಮಾಹಿತಿ ನೀಡಿದರು. ಈ ಬಗ್ಗೆ ಸದಸ್ಯರ ಒತ್ತಾಯದ ಮೇರೆಗೆ, ನಗರ ಯೋಜನಾ ಸಮಿತಿಯಲ್ಲಿ ವಿಲೇವಾರಿಗೆ ಕಳುಹಿಸಲು ನಿರ್ಣಯಿಸಲಾಯಿತು. ಎಂಆರ್‌ಪಿಎಲ್ ರಸ್ತೆ ದುರಸ್ತಿ: ಟೆಂಡರ್‌ಗೆ ಅನುಮೋದನೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸುರತ್ಕಲ್‌ನ ಎಂಆರ್‌ಪಿಎಲ್ ರಸ್ತೆಯ ಕಟ್ಲ ಜಂಕ್ಷನ್‌ನಿಂದ ಕಾರ್ಗೋ ಗೇಟ್‌ವರೆಗೆ ಆಯ್ದ ಭಾಗಗಳಲ್ಲಿ ಡಾಮರೀಕರಣ ಕಾಮಗಾರಿಗೆ 99,87,000 ರೂ. ಅಂದಾಜು ವೆಚ್ಚದ ಆಡಳಿತ ಮಂಜೂರಾತಿ ಹಾಗೂ ಟೆಂಡರ್ ಕರೆಯಲು ಪೂರ್ವಭಾವಿ ಅನುಮೋದನೆಯನ್ನು ಸಭೆಯಲ್ಲಿ ನೀಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News