ರಾಜ್ಯದ ಎಷ್ಟು ಸರಕಾರಿ ಕಾಲೇಜುಗಳಲ್ಲಿ ಖಾಯಂ ಪ್ರಾಚಾರ್ಯರಿದ್ದಾರೆ ?

Update: 2016-12-23 11:25 GMT

ಸಾಗರ , ಡಿ.23  : ರಾಜ್ಯದಲ್ಲಿ 412 ಸರ್ಕಾರಿ ಕಾಲೇಜುಗಳಿವೆ. 412 ಕಾಲೇಜುಗಳ ಪೈಕಿ 42 ಕಾಲೇಜುಗಳಲ್ಲಿ ಮಾತ್ರ ಖಾಯಂ ಪ್ರಾಚಾರ್ಯರಿದ್ದಾರೆ. ಉಳಿದ ಕಾಲೇಜುಗಳಿಗೆ ಪ್ರಾಚಾರ್ಯರ ನೇಮಕಕ್ಕೆ ಸಂಬಂಧಪಟ್ಟಂತೆ ಹಿರಿತನ, ರೋಸ್ಟರ್ ಹಾಗೂ ಯುಜಿಸಿ ಮಾರ್ಗಸೂಚಿ ಅನ್ವಯ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಭರ್ತಿ ಮಾಡಲಾಗುತ್ತದೆ.  ಈ  ಕಾಲೇಜುಗಳು ಬಹುತೇಕ ಮೂಲಭೂತ ಸೌಲಭ್ಯಗಳ ಕೊರತೆಯನ್ನು ಅನುಭವಿಸುತ್ತಿರುವುದು ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.

ಇಲ್ಲಿನ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರ ಜ್ಞಾನಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ನಾನು ಸಚಿವನಾದ ಮೇಲೆ ರಾಜ್ಯದ ಸರ್ಕಾರಿ ಕಾಲೇಜುಗಳ ಬಗ್ಗೆ ಸಮಗ್ರ ಮಾಹಿತಿ ತಯಾರಿಸಿಕೊಂಡಿದ್ದು, ಅವುಗಳನ್ನು ಮುಂದಿನ ಐದು ವರ್ಷಗಳಲ್ಲಿ ಹಂತಹಂತವಾಗಿ ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

3200 ಸಹಾಯಕ ಪ್ರಾಧ್ಯಾಪಕರ ಹುದ್ದೆ ಖಾಲಿ ಇದ್ದು, ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಮೊದಲ ಹಂತದಲ್ಲಿ 2160 ಸಹಾಯಕ ಪ್ರಾಧ್ಯಾಪಕರ ಹುದ್ದೆಯನ್ನು ಭರ್ತಿ ಮಾಡಲು ಪಟ್ಟಿ ಪ್ರಕಟಿಸಲಾಗಿದೆ. ಕೆಲವು ಸಣ್ಣಪುಟ್ಟ ಲೋಪದೋಷ ಹಾಗೂ ಸಿಂಧುತ್ವ ಪತ್ರದ ಲೋಪದಿಂದಾಗಿ ಸ್ವಲ್ಪ ವಿಳಂಬವಾಗಿದೆ. ಶೀಘ್ರದಲ್ಲಿಯೆ ಸಮಸ್ಯೆ ಬಗೆಹರಿಯಲಿದ್ದು, 2160 ಜನರಿಗೆ ನೇಮಕಾತಿ ಪತ್ರ ನೀಡಲಾಗುತ್ತದೆ. ಉಳಿದ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಲಾಗುತ್ತದೆ. ಅಭ್ಯರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ಧಾರವಾಡದಲ್ಲಿ ಉನ್ನತ ಶಿಕ್ಷಣ ಅಕಾಡೆಮಿ ಸ್ಥಾಪನೆಗೆ 90 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಅಕಾಡೆಮಿಯಲ್ಲಿ ನೂತನವಾಗಿ ನೇಮಕವಾಗುವ ಪ್ರಾಧ್ಯಾಪಕರಿಗೆ ವಿದ್ಯಾರ್ಥಿಗಳಿಗೆ ಬೋಧನಾ ವಿಧಾನ, ಗುಣಮಟ್ಟದ ಶಿಕ್ಷಣ ನೀಡುವ ಬಗೆ, ಪಾಠ ಮಾಡುವಾಗ ಬಳಸಬೇಕಾದ ಶೈಲಿ ಕುರಿತು ತರಬೇತಿ ನೀಡಲಾಗುವುದು. ವಿದ್ಯಾರ್ಥಿಗಳು ಪ್ರಾಧ್ಯಾಪಕರು ಮಾಡುವ ಪಾಠದಿಂದ ಆಕರ್ಷಿತವಾಗಬೇಕು ಜೊತೆಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.

ರಾಜಕಾರಣಿಗಳು, ಶಿಕ್ಷಣ ತಜ್ಞರು, ನ್ಯಾಯಾಧೀಶರು, ಅಧಿಕಾರಿಗಳು ದಾರಿ ತಪ್ಪಿದರೆ ದೇಶವು ದಾರಿ ತಪ್ಪುತ್ತದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಮಾರಕ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರವನ್ನು ನೈತಿಕವಾಗಿ ಸಂರಕ್ಷಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೆ ಕಳೆದ ವರ್ಷ 25ಸಾವಿರ ಕೋಟಿ ಹಣ ಖರ್ಚು ಮಾಡಲಾಗಿದೆ. ಇದರಲ್ಲಿ ಸುಮಾರು 22.50 ಸಾವಿರ ಕೋಟಿ ಶಿಕ್ಷಕರ ಸಂಬಳ, ಪಿಂಚಣಿಗೆ ಖರ್ಚಾಗುತ್ತಿದೆ. ಮುಂದಿನ ಬಜೆಟ್‌ನಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಹಣ ಬಜೆಟ್‌ನಲ್ಲಿ ಘೋಷಿಸುವ ನಿರೀಕ್ಷೆ ಇರಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವುದು ಕಾನೂನಾತ್ಮಕವಾಗಿ ಸಾಧ್ಯವಿಲ್ಲ. ಅತಿಥಿ ಉಪನ್ಯಾಸಕರ ಹಿತ ಕಾಯುವುದು ಎಷ್ಟು ಮುಖ್ಯವೋ, ಹಾಗೆಯೆ ಕಾನೂನು ಚೌಕಟ್ಟಿನೊಳಗೆ ಕೆಲಸ ಮಾಡುವುದು ನಮ್ಮ ಮುಂದಿರುವ ಸವಾಲು. ಈ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರನ್ನು ಮುಂದುವರೆಸುವುದು ಸೇರಿದಂತೆ ವೇತನ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ. ಖಾಸಗಿ ಸಂಸ್ಥೆಗಳಿಗೆ ಹೋಲಿಕೆ ಮಾಡಿದರೆ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಹೆಚ್ಚಿನ ಸಂಭಾವನೆ ನೀಡುತ್ತಿದ್ದು, ಇದಕ್ಕೆ ತಕ್ಕಂತೆ ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ನಗರಸಭೆ ಅಧ್ಯಕ್ಷೆ ಎನ್.ಉಷಾ, ಉಪಾಧ್ಯಕ್ಷೆ ಮರಿಯಾ ಲೀಮಾ, ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಸಿದ್ದರಾಮಯ್ಯ, ಪ್ರಾಚಾರ್ಯ ಪ್ರೊ. ಉಮೇಶ್ ಪಿ., ಕಾಲೇಜು ಅಭಿವೃದ್ದಿ ಸಮಿತಿಯ ಎಸ್.ಬಿ.ಮಹಾದೇವ್, ಡಾ. ಡಿ.ಬಿ.ಕಾರಿಯಪ್ಪ, ಎಂ.ರಾಮಪ್ಪ ಇನ್ನಿತರರು ಹಾಜರಿದ್ದರು. ಡಾ. ಎಚ್.ಎಸ್.ರಘುನಾಥ್ ಕಾರ್ಯಕ್ರಮ ನಿರ್ವಹಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News