×
Ad

ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಮಕ್ಕಳನ್ನು ಕರೆದೊಯ್ಯದಂತೆ ಡಿಸಿ ಸೂಚನೆ

Update: 2017-01-09 20:09 IST

ಮಂಗಳೂರು, ಜ.9: ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಮಕ್ಕಳನ್ನು ಕರೆದೊಯ್ಯದಂತೆ ಜಿಲ್ಲೆಯ ಎಲ್ಲ ಶಾಲೆಗಳಿಗೆ ಸುತ್ತೋಲೆ ಹೊರಡಿಸಲು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ.

ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಎಸ್ಸಿ/ಎಸ್ಟಿ ಮುಖಂಡರ ಕುಂದುಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸುಳ್ಯ ತಾಲೂಕಿನ ಸರಕಾರಿ ಶಾಲೆಯೊಂದರಲ್ಲಿ ಮಕ್ಕಳನ್ನು ಶಿಕ್ಷಕರು ಶಾಲಾ ಸಮೀಪದ ಗೃಹಪ್ರವೇಶಕ್ಕೆ ಕರೆದುಕೊಂಡು ಹೋದಾಗ ದಲಿತ ಮಕ್ಕಳನ್ನು ಮನೆಯ ಹೊರಗಡೆ ನಿಲ್ಲಿಸಿ ಅಸ್ಪಶ್ಯತೆ ನಡೆಸಿದ ವಿಷಯನ್ನು ದಲಿತ ಮುಖಂಡರೊಬ್ಬರು ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಇನ್ನು ಮುಂದೆ ಜಿಲ್ಲೆಯಲ್ಲಿ ಯಾವುದೇ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಮಕ್ಕಳನ್ನು ಶಾಲೆಯಿಂದ ಕರೆದೊಯ್ಯದಂತೆ ನಿರ್ದೇಶನ ನೀಡಲು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು. ಈ ಪ್ರಕರಣದಲ್ಲಿ ಈಗಾಗಲೇ ಸಂಬಂಧಪಟ್ಟ ಶಿಕ್ಷಕರನ್ನು ಅಮಾನತು ಮಾಡಲಾಗಿದ್ದು, ಪೊಲೀಸ್ ಪ್ರಕರಣ ದಾಖಲಾಗಿದೆ ಎಂದು ಡಿಡಿಪಿಐ ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದವರಿಗಾಗಿ ಕಾದಿರಿಸಿರುವ ಡಿಸಿ ಮನ್ನಾ ಭೂಮಿ ಒತ್ತುವರಿಯಾಗದಂತೆ ಮತ್ತು ಅದರ ರಕ್ಷಣೆಗೆ ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ಅಕ್ರಮ-ಸಕ್ರಮದಲ್ಲಿ ಮಂಜೂರಾತಿ ಪಡೆದ ಎಸ್ಸಿ/ಎಸ್ಟಿ ಸಮುದಾಯದವರಿಗೆ ದಾಖಲಾತಿ ಹಾಗೂ ಪ್ರಕ್ರಿಯೆಗಳನ್ನು ತ್ವರಿತವಾಗಿ ನಡೆಸಿಕೊಡಬೇಕು. ಈ ಸಮುದಾಯಕ್ಕೆ ಕಾದಿರಿಸಲ್ಪಟ್ಟ ನಗರಸ್ಥಳೀಯ ಸಂಸ್ಥೆಗಳ ವಾಣಿಜ್ಯ ಸಂಕೀರ್ಣ ಕೊಠಡಿಗಳಲ್ಲಿ ಬೇರೆಯವರು ವ್ಯವಹಾರ ನಡೆಸುತ್ತಿದ್ದರೆ ಕೂಡಲೇ ಅವರನ್ನು ತೆರವುಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಎನ್.ಆರ್. ಉಮೇಶ್, ಅಪರ ಜಿಲ್ಲಾಧಿಕಾರಿ ಕುಮಾರ್, ಡಿಸಿಪಿ ಶಾಂತರಾಜು, ಹೆಚ್ಚುವರಿ ಎಸ್ಪಿ ವೇದಮೂರ್ತಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಮನಪಾ ಆಯುಕ್ತ ಮುಹಮ್ಮದ್ ನಝೀರ್ ಮತ್ತಿತರ ಇಲಾಖಾಧಿಕಾರಿಗಳು, ದಲಿತ ಮುಖಂಡರು ಉಪಸ್ಥಿತರಿದ್ದರು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News