ರಾ.ವೆಂಡರ್ ಡೆವಲಪ್ಮೆಂಟ್ ಕಾರ್ಯಕ್ರಮಕ್ಕೆ ಚಾಲನೆ
ಉಡುಪಿ, ಜ.11: ಮಧ್ಯಮ, ಸಣ್ಣ ಹಾಗೂ ಸೂಕ್ಷ್ಮ ಕೈಗಾರಿಕಾ ಘಟಕಗಳು (ಎಂಎಸ್ಎಂಇ) ಒಳ್ಳೆಯ ಭವಿಷ್ಯ ಹೊಂದಿರುವ ಅದ್ಭುತ ಕ್ಷೇತ್ರಗಳಾಗಿದ್ದು, ಯುವಜನತೆ ಈ ಕಡೆ ಹೆಚ್ಚು ಹೆಚ್ಚು ಆಸಕ್ತಿ ತೋರಿಸಬೇಕಾಗಿದೆ ಎಂದು ಬೆಂಗಳೂರಿನ ಎಂಎಸ್ಎಂಇ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಎಸ್.ಎನ್. ರಂಗಪ್ರಸಾದ್ ಹೇಳಿದ್ದಾರೆ.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯ, ಎಂಎಸ್ಎಂಇ ಅಭಿವೃದ್ಧಿ ಸಂಸ್ಥೆ ಮಂಗಳೂರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಮಣಿಪಾಲ, ಉಡುಪಿ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡಿನ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿರುವ 'ನ್ಯಾಷನಲ್ ವೆಂಡರ್ ಡೆವಲಪ್ಮೆಂಟ್ ಕಾರ್ಯಕ್ರಮ ಹಾಗೂ ವಸ್ತು ಪ್ರದರ್ಶನ'ದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮವನ್ನು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಿದರು. ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಹೈದರಾಬಾದ್ನಲ್ಲಿರುವ ಡಿಇಎಸ್ ಆ್ಯಂಡ್ ಡಿಯ ದಕ್ಷಿಣ ವಲಯ ಉಪ ಮಹಾನಿರ್ದೇಶಕ ಎಚ್.ಆರ್.ಶರ್ಮ, ಅದಾನಿ-ಯುಪಿಸಿಎಲ್ನ ಜಂಟಿ ಅಧ್ಯಕ್ಷ ಕಿಶೋರ್ ಆಳ್ವ, ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಎಚ್.ಸುಧೀರ್ ನಾಯಕ್, ಉಡುಪಿ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ ಅಧ್ಯಕ್ಷ ಕೃಷ್ಣರಾವ್ ಕೊಡಂಚ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಮಂಗಳೂರು ಎಂಎಸ್ಎಂಇ ಅಭಿವೃದ್ಧಿ ಸಂಸ್ಥೆಯ ಉಪನಿರ್ದೇಶಕ ಕೆ.ಸಾಕ್ರಟಿಸ್ ಸ್ವಾಗತಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ರಮಾನಂದ ನಾಯಕ್ ವಂದಿಸಿದರು. ಎಂಎಸ್ಎಂಇಡಿಯ ಸುಂದರ್ ಶೇರಿಗಾರ್ ಕಾರ್ಯಕ್ರಮ ನಿರ್ವಹಿಸಿದರು.
ಎರಡು ದಿನಗಳಲ್ಲಿ ತಾಂತ್ರಿಕ ಅಧಿವೇಶನ, ಉದ್ಯಮ ಶೀಲತಾ ಪ್ರೇರಣಾ ಶಿಬಿರ, ಚರ್ಚಾಗೋಷ್ಠಿಗಳು ನಡೆಯಲಿವೆ.ವಸ್ತು ಪ್ರದರ್ಶನದಲ್ಲಿ ಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ, ಸೌತ್ ವೆಸ್ಟರ್ನ್ ರೈಲ್ವೆ, ಎಂಆರ್ಪಿಎ್, ಬ್ಯಾಂಕ್ ಸಹಿತ ವಿವಿಧ ಕಂಪೆನಿಗಳ 70 ಮಳಿಗೆಗಳು ತೆರೆದಿವೆ.