×
Ad

ಪಶ್ಚಿಮ ವಾಹಿನಿ ಯೋಜನೆ ಅನುಷ್ಠಾನಕ್ಕೆ ಹಣ ಮೀಸಲಿಡಲು ಒತ್ತಾಯ

Update: 2017-02-08 22:18 IST

ಮಂಗಳೂರು, ಫೆ. 8: ದ.ಕ. ಜಿಲ್ಲೆಯ ಮಂಗಳೂರು ನಗರ, ಸುರತ್ಕಲ್ ಮತ್ತಿತರ ಕಡೆಗಳಲ್ಲಿ ಪ್ರತೀ ವರ್ಷ ನೀರಿನ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ಪರಿಹಾರವನ್ನು ಕಲ್ಪಿಸುವ ನಿಟ್ಟಿನಲ್ಲಿ ಪಶ್ಚಿಮ ವಾಹಿನಿ ಯೋಜನೆ ಅನುಷ್ಠಾನಕ್ಕೆ ಮುಂದಿನ ಬಜೆಟ್‌ನಲ್ಲಿ 800ಕೋ.ರೂ. ಮೀಸಲಿಡಬೇಕೆಂದು ಶಾಸಕ ಮೊಯ್ದಿನ್ ಬಾವ ಒತ್ತಾಯಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಮುಖ್ಯಮಂತ್ರಿಯವರಲ್ಲಿ ಜಿಲ್ಲೆಗೆ ಸಂಬಂಧಿಸಿ ಹಲವು ಬೇಡಿಕೆಗಳನ್ನು ಮುಂದಿಟ್ಟರು.

ಬೆಳೆಯುತ್ತಿರುವ ಮಂಗಳೂರು ನಗರಕ್ಕೆ ಸದ್ಯಕ್ಕಿರುವ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ವಿಸ್ತರಣೆಗೊಳಿಸಬೇಕೆಂಬ ಬೇಡಿಕೆ ಹಿಂದಿನಿಂದಲೂ ಇದೆ. ಈ ಹಿನ್ನೆಲೆಯಲ್ಲಿ ಏರ್‌ಪೋರ್ಟ್‌ನ ರನ್‌ವೇ ವಿಸ್ತರಣೆಗಾಗಿ 200 ಎಕರೆ ಜಮೀನು ಅಗತ್ಯವಾಗಿದ್ದು, ಈ ಜಮೀನಿನ ಸ್ವಾಧೀನಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕೆಂದು ಒತ್ತಾಯಿಸಲಾಗಿದೆ ಶಾಸಕ ಮೊಯ್ದಿನ್ ಬಾವ ತಿಳಿಸಿದ್ದಾರೆ.

ಮಂಗಳೂರು ನಗರದ ಸ್ಮಾರ್ಟ್‌ಸಿಟಿಗೆ ಆಯ್ಕೆಯಾಗಿದ್ದು, ನಗರದ ಅಭಿವೃದ್ಧಿಗೆ ಮುಖ್ಯಮಂತ್ರಿಯವರು 100 ಕೋ.ರೂ. ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಬೇಕು ಒತ್ತಾಯ ಮಾಡಲಾಗಿದೆ. ಮಂಗಳೂರು ಮನಪಾ ನಿರ್ದಿಷ್ಟ ವ್ಯಾಪ್ತಿಗೊಳಪಟ್ಟು 94ಸಿಸಿಯಲ್ಲಿ ನಿವೇಶನ ರಹಿತರಿಗೆ ನೀಡಲಾಗುವ ಒಂದೂವರೆ ಸೆಂಟ್ಸ್ ಭೂಮಿಯ ಹಕ್ಕನ್ನು 3 ಸೆಂಟ್ಸ್‌ಗೆ ಹೆಚ್ಚಿಬೇಕು. ಅಲ್ಲದೆ ಈಗಾಗಲೇ ಗ್ರಾಮಾಂತರ ಪ್ರದೇಶದಲ್ಲಿ ಬಫರ್ ರೆನ್ ಎಂದು ಗುರುತಿಸಿ 5 ಸೆಂಟ್ಸ್ ನಿವೇಶನ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದ್ದು, ಈ ಎಲ್ಲ ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ ಎಂದು ಶಾಸಕರು ಹೇಳಿದ್ದಾರೆ.

ಸುರತ್ಕಲ್ ಜಂಕ್ಷನ್ ಬಳಿ ಕಳೆದ 10 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮಾಜಿ ಸಂಸದ ಶ್ರೀನಿವಾಸ ಮಲ್ಯ ಭವನಕ್ಕೆ ಕಳೆದ ಬಾರಿ ಮುಖ್ಯಮಂತ್ರಿಯವರು 1 ಕೋ.ರೂ. ಬಿಡುಗಡೆಗೊಳಿಸಿದ್ದು, ಇದರ ಕಾಮಗಾರಿ ಪ್ರಗತಿಯ ಹಂತದಲ್ಲಿದೆ. ಆದರೆ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ 1 ಕೋ.ರೂ. ಅಗತ್ಯವಿದೆ ಎಂದು ತಾನು ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿದ್ದು, ಇದಕ್ಕೆ ಶೀಘ್ರವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಯವರು 1 ಕೋ.ರೂ. ಮಂಜೂರುಗೊಳಿಸಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News