ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡಮಿಯ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ
ಕೊಣಾಜೆ, ಫೆ.10: ಇಂದು ಕ್ರೀಡೆಗೆ ದೇಶದೆಲ್ಲೆಡೆ ಉತ್ತಮ ಪ್ರೋತ್ಸಾಹ ಸಿಗುತ್ತಿದೆ. ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಸದೃಢತೆಯಲ್ಲಿ ಕ್ರೀಡೆ ಬಹುಮುಖ್ಯ ಪಾತ್ರವಹಿಸುತ್ತದೆ. ಆದ್ದರಿಂದ ವಿದ್ಯಾರ್ಥಿಗಳು, ಯುವ ಸಮುದಾಯ ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಎನ್.ವಿನಯ ಹೆಗ್ಡೆ ಹೇಳಿದರು.
ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾನಿಲಯ ಕ್ಯಾಂಪಸ್ನ ನೂತನ ಮೈದಾನದಲ್ಲಿ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡಮಿಯ 18ನೆ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡಮಿಯ ಡೀನ್ ಪ್ರೊ.ಸತೀಶ್ ಕುಮಾರ್ ಭಂಡಾರಿ, ಇದುವರೆಗೆ ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಸೂಕ್ತ ಮೈದಾನದ ವ್ಯವಸ್ಥೆ ಇಲ್ಲದೆ ಬೇರೆಡೆ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಇದೀಗ ದೇರಳಕಟ್ಟೆ ಕ್ಯಾಂಪಸ್ನಲ್ಲೇ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಗೊಂಡಿದೆ ಎಂದರು.
ಮುಖ್ಯ ಅತಿಥಿಗಳಾಗಿ ಅಂತಾರಾಷ್ಟ್ರೀಯ ಕ್ರೀಡಾಪಟು ಅನಿಲ್ ಶೆಟ್ಟಿ, ವೈಸ್ ಡೀನ್ಗಳಾದ ಡಾ.ಪಿ.ಎಸ್.ಪ್ರಕಾಶ್, ಡಾ.ಅಮೃತ್ ಎಂ. ಮಿರಾಜ್ಕರ್, ಕ್ಷೇಮ ಕುಲಸಚಿವ ಡಾ.ಜಯಪ್ರಕಾಶ್ ಶೆಟ್ಟಿ ಉಪಸ್ಥಿತರಿದ್ದರು.
ನಿಟ್ಟೆ ವಿ.ವಿ. ಕ್ರೀಡಾ ಸಲಹೆಗಾರ ಮುರಳೀಕೃಷ್ಣ ವಿ. ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಕರುಣಾಕರ ಶೆಟ್ಟಿ ಕ್ರೀಡಾ ವಾರ್ಷಿಕ ವರದಿ ವಾಚಿಸಿದರು. ಕ್ರೀಡಾ ಕಾರ್ಯದರ್ಶಿ ಇರ್ಫಾನ್ ಹಾರಿಸ್ ವಂದಿಸಿದರು. ವಿದ್ಯಾರ್ಥಿ ಸಂಘದ ನಾಯಕ ಅಜೀಶ್ ಸಾಮ್ ಜಾರ್ಜ್ ಕಾರ್ಯಕ್ರಮ ನಿರ್ವಹಿಸಿದರು.