×
Ad

ಕೊರಗರೊಂದಿಗೆ ಅಧಿಕಾರಿಗಳ ಸಹ ಭೋಜನ: ಜಿಲ್ಲಾಧಿಕಾರಿ

Update: 2017-02-13 23:08 IST

ಉಡುಪಿ, ಫೆ.13: ಜಿಲ್ಲೆಯ ಕೊರಗ ಜನಾಂಗದವರೊಂದಿಗೆ ಜಿಲ್ಲೆಯ ಎಲ್ಲಾ ಅಧಿಕಾರಿಗಳ ಸಹಭೋಜನ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಾಗರೀಕ ಹಕ್ಕು ಸಂರಕ್ಷಣಾ ಅಧಿನಿಯಮ 1955 ಹಾಗೂ ಪರಿಶಿಷ್ಟ ಜಾತಿ/ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989ರಡಿಯಲ್ಲಿ ವಿಚಾರಗೋಷ್ಠಿ ಮತ್ತು ಕಾರ್ಯಾಗಾರ ನಡೆಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

 ಸಮಾಜದಲ್ಲಿರುವ ಅಸ್ಪಶ್ಯತೆಯನ್ನು ತೊಡೆಯುವ ಉದ್ದೇಶದಿಂದ ಜಿಲ್ಲೆಯ ಆಯ್ದ ಕೊರಗ ಕಾಲೋನಿಯಲ್ಲಿ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿ ಗಳು ಸಹಭೋಜನ ಸ್ವೀಕರಿಸುವ ಕಾರ್ಯಕ್ರಮ ಏರ್ಪಡಿಸಲು ಚಿಂತಿಸಲಾ ಗಿದ್ದು, ಈ ಕಾರ್ಯಕ್ರಮದಲ್ಲಿ ಕೊರಗ ಸಮುದಾಯದವರಿಂದಲೇ ಸಿದ್ದಪಡಿಸಿದ ಆಹಾರವನ್ನು ಎಲ್ಲಾ ಅಧಿಕಾರಿಗಳೊಂದಿಗೆ ಸ್ವೀಕರಿಸಲಾಗುವುದು ಎಂದರು.

ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳನ್ನೂ ಸಹ ಆಹ್ವಾನಿಸಲಾಗುವುದು ಎಂದ ಜಿಲ್ಲಾಧಿಕಾರಿಗಳು, ಕೊರಗ ಕಾಲೋನಿಯನ್ನು ಗುರುತಿಸಿ ದಿನಾಂಕವನ್ನು ನಿಗದಿಪಡಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

  ಜಿಲ್ಲೆಯಲ್ಲಿ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹಾಗೂ 158 ಗ್ರಾಪಂಗಳಲ್ಲಿ ನಾಗರೀಕ ಹಕ್ಕು ಸಂರಕ್ಷಣಾ ಅಧಿನಿಯಮ 1955 ಹಾಗೂ ಪರಿಶಿಷ್ಟ ಜಾತಿ/ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989ರ ಕುರಿತು ಬೀದಿ ನಾಟಕಗಳ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸ ಲಾಗುವುದು. ಹಾಗೂ ಜಿಲ್ಲಾಮಟ್ಟದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನುರಿತ ನ್ಯಾಯವಾದಿ ಅಥವಾ ನ್ಯಾಯಾಧೀಶರಿಂದ ಉಪನ್ಯಾಸ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಮಟ್ಟದಲ್ಲಿ ಕಾರ್ಯಾಗಾರವನ್ನು ಏರ್ಪಡಿಸಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸ್ವಯಂಸೇವಾ ಸಂಘಟನೆಗಳು, ಸಮುದಾಯ ಸಂಘಟನೆ ಗಳು ಹಾಗೂ ಅಧಿಕಾರಿಗಳಿಗೆ ಅಧಿನಿಯಮಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.

 ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಸ್.ಎನ್.ರಮೇಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News