ರಾಜ್ಯ ಬಜೆಟ್: ರೈತ ಮುಖಂಡರೊಂದಿಗೆ ಸಿ.ಎಂ. ಸಭೆ

Update: 2017-02-16 11:09 GMT

ಬೆಂಗಳೂರು, ಫೆ.16: ನಮ್ಮ ಸರ್ಕಾರ ರೈತರ ಹಿತ ಕಾಪಾಡಲು ಮತ್ತು ಅವರ ಹಕ್ಕುಗಳ ರಕ್ಷಣೆಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮಾರ್ಚ್ ತಿಂಗಳಲ್ಲಿ ಮಂಡನೆಯಾಗಲಿರುವ ಬಜೆಟ್ ಪೂರ್ವಭಾವಿಯಾಗಿ ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಗುರುವಾರ ಕರೆದಿದ್ದ ರೈತ ಸಂಘಟನೆಗಳ ಮುಖಂಡರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ರೈತರ ಹಿತ ಕಾಯುವತ್ತ ನಮ್ಮ ಗಮನ ಸದಾ ಇರುತ್ತದೆ. ಆ ದಾರಿಯಲ್ಲೇ ನಾವು ನಡೆಯುತ್ತಿದ್ದೇವೆ. ಇಂದಿನ ಪರಿಸ್ಥಿತಿಯಲ್ಲಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಅವರು ಬೆಳೆಯುವ ಆಹಾರ ಪದಾರ್ಥಗಳಿಗೆ ಸರಿಯಾದ ಮತ್ತು ನ್ಯಾಯಯುತ ಬೆಲೆ ಸಿಗಬೇಕು ಎಂಬುದು ನಮ್ಮ ನಿಲುವು. ಕೃಷಿ ಉತ್ಪನಗಳಿಗೆ ಉತ್ತಮ ಬೆಲೆ ದೊರಕಿಸಿಕೊಡುವ ದಿಕ್ಕಿನಲ್ಲಿ ಸರ್ಕಾರ ಪ್ರಯತ್ನ ನಡೆಸಿದೆ. ಇದಕ್ಕೆ ಪೂರಕವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಕೃಷಿ ಭಾಗ್ಯ ಯೋಜನೆಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯೋಜನೆಯಲ್ಲಿ ಈ ವರೆಗೆ ಒಂದು ಲಕ್ಷ ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ. ಮಾರ್ಚ್ ಅಂತ್ಯದ ವೇಳೆಗೆ ಇನ್ನೂ ಒಂದು ಲಕ್ಷ ಕೃಷಿ ಹೊಂಡಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಕೃಷಿ ಹೊಂಡಗಳಿಗೆ ದಿನೇ ದಿನೇ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಯೋಜನೆಗೆ ನಿಗಧಿ ಮಾಡಿರುವ ಅನುದಾನ ಹೆಚ್ಚಿಸುವ ಬಗ್ಗೆ ಚಿಂತನೆ ನಡೆದಿದೆ. ಇದರ ಜೊತೆಗೆ ಪಾಲಿ ಹೌಸ್‍ಗಳಿಗೆ ಭಾರಿ ಬೇಡಿಕೆ ಬಂದಿದೆ. ಈ ವರೆಗೆ 2,400 ಪಾಲಿ ಹೌಸ್‍ಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

ಆಹಾರ ಪದಾರ್ಥಗಳ ಉತ್ಪಾದನೆ ಪ್ರಮಾಣ ಹೆಚ್ಚಾಗಬೇಕು. ಜೊತೆಗೆ ಸೂಕ್ತ ಬೆಲೆ ಸಿಗಬೇಕು ಎಂಬುದು ಸರ್ಕಾರದ ಬಯಕೆ. ಇದಕ್ಕಾಗಿಯೇ ಎಪಿಎಂಸಿಗಳಲ್ಲಿ ಆನ್‍ಲೈನ್ ಹರಾಜು ಪದ್ಧತಿ ಜಾರಿಗೆ ತರಲಾಗಿದೆ. ಈ ವ್ಯವಸ್ಥೆ ಈಗ ದೇಶಕ್ಕೇ ಮಾದರಿಯಾಗಿದೆ.

ವಿವಿಧ ರಾಜ್ಯಗಳ ಕೃಷಿ ಸಚಿವರು ಇಲ್ಲಿಗೆ ಬಂದು ನಾವು ಅಳವಡಿಸಿರುವ ಪದ್ಧತಿ ಬಗ್ಗೆ ಅಧ್ಯಯನ ನಡೆಸಿ ಹೋಗಿದ್ದಾರೆ. ಆನ್‍ಲೈನ್ ಹರಾಜು ಪದ್ಧತಿ ರಾಜ್ಯದ 156 ಎಪಿಎಂಸಿಗಳಲ್ಲಿ ಜಾರಿಗೆ ತರಲಾಗಿದೆ. ಇದರಿಂದ ಮಾರುಕಟ್ಟೆಗಳಲ್ಲಿ ರೈತರಿಗೆ ಆಗುತ್ತಿದ್ದ ಮೋಸ, ಶೋಚಣೆ ಕಡಿಮೆ ಆಗಿದೆ. ಸ್ಪರ್ಧಾತ್ಮಕ ಬೆಲೆಯೂ ಸಿಗುತ್ತಿದೆ.

ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ಮಾರುಕಟ್ಟೆ ಮಧ್ಯೆ ಪ್ರವೇಶ ಮಾಡಿ ಬೆಂಬಲ ಬೆಲೆ ಘೋಷಣೆ ಮಾಡಲಾಗುತ್ತಿದೆ. ಇತ್ತೀಚೆಗೆ ತೊಗರಿಗೆ 450 ರೂ., ಭತ್ತಕ್ಕೆ 100 ರೂ., ಈರುಳ್ಳಿಗೆ 624 ರೂ. ಬೆಂಬಲ ಬೆಲೆ ನೀಡಿ ಖರೀದಿ ಮಾಡಲಾಗಿದೆ. ಕೊಬ್ಬರಿಗೆ ಒಂದು ಸಾವಿರ ರೂ. ಸಬ್ಸಿಡಿಯನ್ನೂ ಘೋಷಿಸಿದೆ ಎಂದು ವಿವರಿಸಿದರು. 

ಹನಿ ನೀರಾವರಿ ಮತ್ತು ತುಂತುರು ನೀರಾವರಿ ಯೋಜನೆಗೂ ಸರ್ಕಾರ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಮಳೆ ಕೊರತೆ ಪರಿಣಾಮ ಅಂತರ್ಜಲ ಮಟ್ಟ ಕುಸಿಯುತ್ತಿರುವುದು ಕಳವಳಕಾರಿ ಸಂಗತಿ. ಹೀಗಾಗಿ ಕೆರೆಗಳನ್ನು ತುಂಬಿಸುವ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ಅಂತರ್ಜಲ ಮಟ್ಟ ಕುಸಿಯುತ್ತಿರುವುದರ ಜೊತೆಗೆ ರಾಜ್ಯವನ್ನು ಭೀಕರ ಬರಗಾಲ ಆವರಿಸಿರುವುದು ಚಿಂತೆಗೀಡು ಮಾಡಿದೆ. ಒಟ್ಟು 160 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗಿದೆ. ಬರ ಪರಿಹಾರ ಕಾಮಗಾರಿಗಳಿಗೆ 4,702 ಕೋಟಿ ರೂ.ಗಳ ನೆರವು ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ 1,782 ಕೋಟಿ ರೂ. ಮಂಜೂರು ಮಾಡಿ 450 ಕೋಟಿ ರೂ. ಬಿಡುಗಡೆ ಮಾಡಿದೆ. ಹಿಂಗಾರು ಹಂಗಾಮಿನಲ್ಲಿ 3,310 ಕೋಟಿ ರೂ. ನಷ್ಟವಾಗಿದ್ದು, ಕೇಂದ್ರ ತಂಡವೂ ಬಂದು ಅಧ್ಯಯನ ನಡೆಸಿ ಹೋಗಿದೆ. ಇದರ ಜೊತೆಗೆ ಅತಿವೃಷ್ಟಿಯಿಂದ ಆಗಿರುವ ಹಾನಿಗೆ 386 ಕೋಟಿ ರೂ. ನೆರವು ಕೇಳಿದೆ. ಕುಡಿಯುವ ನೀರಿಗೂ ಅನುದಾನ ಒದಗಿಸುವಂತೆ ಮನವಿ ಮಾಡಿದೆ. ಆದರೆ, ಕೇಂದ್ರದಿಂದ ಯಾವುದೇ ನೆರವು ಸಿಕ್ಕಿಲ್ಲ. ಸರ್ಕಾರವೇ ಈ ವರೆಗೆ 1,140 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ಬರಪೀಡಿತ ಪ್ರದೇಶಗಳಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವು ಮತ್ತು ಉದ್ಯೋಗಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರೈತರ ಸಾಲ ಮನ್ನಾ ಬೇಡಿಕೆ ಕೇಳಿ ಬರುತ್ತಿದೆ. ರಾಷ್ಟ್ರೀಕೃತ ಮತ್ತು ವಾಣಿಜ್ಯ ಬ್ಯಾಂಕ್‍ಗಳ ಮೂಲಕ ರೈತರು 42 ಸಾವಿರ ಕೋಟಿ ರೂ. ಸಾಲ ಪಡೆದಿದ್ದಾರೆ. ಸಹಕಾರ ಬ್ಯಾಂಕ್‍ಗಳ ಮೂಲಕ ಪಡೆದಿರುವ ಸಾಲದ ಮೊತ್ತ 10,500 ಕೋಟಿ ರೂ. ಒಟ್ಟು 56 ಲಕ್ಷ ಮಂದಿ ಸಾಲ ಸೌಲಭ್ಯ ಪಡೆದಿದ್ದಾರೆ. 33 ಲಕ್ಷ ಮಂದಿ ಕೇಂದ್ರ ಸ್ವಾಮ್ಯದ ಬ್ಯಾಂಕ್‍ಗಳಲ್ಲಿ 23 ಲಕ್ಷ ಮಂದಿ ರಾಜ್ಯ ಸಹಕಾರ ಸಂಘ, ಬ್ಯಾಂಕ್‍ಗಳಲ್ಲಿ ಸಾಲ ಪಡೆದಿದ್ದಾರೆ. ಕೇಂದ್ ಸರ್ಕಾರ ಅರ್ಧ ಮನ್ನಾ ಮಾಡಿದರೆ, ನಾವು ಅರ್ಧ ಮನ್ನಾ ಮಾಡಬಹುದು ಎಂದು ತಿಳಿಸಿದರು.

ಕುರುಬೂರು ಶಾಂತಕುಮಾರ್, ಕೋಡಿಹಳ್ಳಿ ಚಂದ್ರ ಶೇಖರ್, ಚುಕ್ಕಿ ನಂಜುಂಡಸ್ವಾಮಿ, ಬಸವರಾಜು ಸೇರಿದಂತೆ ರೈತ ಸಂಘಟನೆಗಳ ನೂರಕ್ಕೂ ಹೆಚ್ಚು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News