ಕೊಳವೆಬಾವಿ ಕೊರೆಸುವುದಕ್ಕೆ ನಿಷೇಧ
Update: 2017-02-19 18:21 GMT
ಕಾಸರಗೋಡು, ಫೆ.19: ಕೇರಳದಲ್ಲಿ ಕೊಳವೆಬಾವಿ ಕೊರೆಯಲು ಕಂದಾಯ ಇಲಾಖೆ ತಾತ್ಕಾಲಿಕ ನಿಷೇಧ ಹೇರಿ ಆದೇಶ ಹೊರಡಿಸಿದೆ. ಮೇ ಕೊನೆ ತನಕ ಕೊಳವೆಬಾವಿ ಕೊರೆಯಲು ಅನುಮತಿ ನೀಡದಂತೆ ಜಿಲ್ಲಾಡಳಿತಕ್ಕೆ ಆದೇಶ ನೀಡ ಲಾಗಿದೆ.
ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸ ಲಾಗಿದ್ದು, ಇದು ಉಲ್ಲಂಘನೆಯಾಗದಂತೆ ನಿಗಾ ವಹಿಸುವಂತೆ ಆದೇಶದಲ್ಲಿ ತಿಳಿ ಸಲಾಗಿದೆ. ಕೊಳವೆಬಾವಿಯಿಂದ ಅಂತರ್ಜಲ ಮಟ್ಟ ಕುಸಿಯುತ್ತಿರುವುದು ಈ ಬಗ್ಗೆ ನಡೆಸಿರುವ ಅಧ್ಯಯನದಲ್ಲಿ ಸ್ಪಷ್ಟಗೊಂಡಿರುವ ಹಿನ್ನೆಲೆಯಲ್ಲಿ ಸರಕಾರ ಈ ಕಠಿಣ ಕ್ರಮಕ್ಕೆ ಮುಂದಾಗಿದೆ.
ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ಟ್ಯಾಂಕರ್ ಲಾರಿಗಳಲ್ಲಿ ನೀರು ಪೂರೈಸಲು ಕ್ರಮ ಕೈಗೊಳ್ಳುವ ಅಧಿಕಾರವನ್ನು ರಾಜ್ಯ ಸಚಿವ ಸಂಪುಟವು ಜಿಲ್ಲಾಧಿಕಾರಿಗಳಿಗೆ ನೀಡಿದೆ. ಇದೇ ವೇಳೆ ನೀರಿನ ದುರ್ಬಳಕೆ ತಡೆಗಟ್ಟಲು ನೀರು ಪೂರೈಸುವ ವಾಹನಗಳಿಗೆ ಜಿಪಿಎಸ್ ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ.