ಬಂದ್ಗೆ ಕರೆ; 44 ಮಂದಿಗೆ ನೋಟಿಸ್ ಜಾರಿ: ಪೊಲೀಸ್ ಕಮಿಶನರ್
ಮಂಗಳೂರು, ಫೆ.23: ಬಂದ್ಗೆ ಕರೆ ನೀಡಲು ಯಾರಿಗೂ ಅವಕಾಶವಿಲ್ಲ. ಸುಪ್ರೀಕೋರ್ಟ್ ನಿರ್ದೇಶನದ ಪ್ರಕಾರ ಬಂದ್ ನಡೆಸಲು ಅವಕಾಶವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಬಂದ್ಗೆ ಕರೆ ನೀಡಿರುವ 44 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಕಮೀಶನರ್ ಚಂದ್ರಶೇಖರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕಾನೂನು ಸುವ್ಯವವಸ್ಥೆಗೆ ತೊಂದರೆ ಉಂಟು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದವರು ಸ್ಪಷ್ಪಪಡಿಸಿದರು. ಯಾವ ರೀತಿ ಬಂದ್ ಅಥವಾ ಹರತಾಳ ನಡೆಸುತ್ತಾರೆ ಎನ್ನುವ ಬಗ್ಗೆ ಸೆಕ್ಷನ್ 107ರ ಪ್ರಕಾರ ವಿವರಣೆ ಕೇಳಿ ನೋಟಿಸ್ ನೀಡಲಾಗಿದೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಗರಕ್ಕೆ ಆಗಮಿಸುತ್ತಿರುವ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತು ಕಲ್ಪಿಸಲಾಗುವುದು. ಕಾರ್ಯಕ್ರಮ ಆಯೋಜಕರಿಗೆ ಸೂಕ್ತ ರಕ್ಷಣೆ ನೀಡಲಾಗುವುದು. ಕಾನೂನುಬಾಹಿರ ಚಟುವಟಿಕೆ ನಡೆಸುವವರ ಬಗ್ಗೆ ನಿಗಾ ವಹಿಸಿ ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಕಮಿಶನರ್ ತಿಳಿಸಿದ್ದಾರೆ.
ಹೆಚ್ಚುವರಿ ಪೊಲೀಸರು: ದ.ಕ. ಜಿಲ್ಲೆಯಲ್ಲಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ನಿರ್ವಹಿಸಲು ಹೊರ ಜಿಲ್ಲೆಗಳಿಂದ ಸುಮಾರು 2,000 ಪೊಲೀಸರು, 20 ಕೆ.ಎಸ್.ಆರ್.ಪಿ. ಪ್ಲಟೂನ್ ಶೀಘ್ರದಲ್ಲಿ ಜಿಲ್ಲೆಗೆ ಆಗಮಿಸಿ ಕಾರ್ಯನಿರ್ವಹಿಸಲಿದ್ದಾರೆ. ಜಿಲ್ಲೆಯ 1,500 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಕಮಿಶನರ್ ವಿವರಿಸಿದರು.