×
Ad

ತಲಪಾಡಿ ಟೋಲ್‌ಗೇಟ್: ಮಾ.3ರವರೆಗೆ ವಿನಾಯಿತಿಗೆ ಸಂಸದ ಸೂಚನೆ

Update: 2017-02-28 22:43 IST

ಮಂಗಳೂರು, ಫೆ.28: ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಟೋಲ್‌ಗೇಟ್‌ನಲ್ಲಿ ಮಾ.3ರವರೆಗೆ 5 ಕಿ.ಮೀ. ವ್ಯಾಪ್ತಿಯ ವಾಹನಗಳಿಗೆ ಟೋಲ್‌ನಿಂದ ವಿನಾಯಿತಿ ನೀಡುವುದನ್ನು ಮುಂದುವರಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ.

ತಲಪಾಡಿ ಟೋಲ್ ವಿವಾದಕ್ಕೆ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(ಎನ್‌ಎಚ್‌ಎಐ) ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರನ್ನು ಉದ್ದೇಶಿಸಿ ಅವರು ಮಾತನಾಡಿದರು.

ತಲಪಾಡಿ-ಪಂಪ್‌ವೆಲ್ ನಾಲ್ಕು ಪಥ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲವಾದರೂ ಶೇ.80ರಷ್ಟು ಪೂರ್ತಿಯಾಗಿದೆ ಎಂದು ಎನ್‌ಎಚ್‌ಎಐಗೆ ಗುತ್ತಿಗೆದಾರರು ತಪ್ಪುಮಾಹಿತಿ ನೀಡಿದ್ದಾರೆ. ಸ್ಥಳೀಯರನ್ನು, ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿ ಟೋಲ್ ಸಂಗ್ರಹವನ್ನು ಆರಂಭಿಸಲಾಗಿದೆ. ಸ್ಥಳೀಯ 5 ಕಿ.ಮೀ. ವ್ಯಾಪ್ತಿಯ ವಾಹನಗಳಿಗೆ ಟೋಲ್‌ನಿಂದ ವಿನಾಯ್ತಿ ನೀಡಬೇಕು. 20 ಕಿ.ಮೀ. ವ್ಯಾಪ್ತಿಯ ವಾಹನಗಳಿಗೆ ಶುಲ್ಕದಲ್ಲಿ ಅರ್ಧದಷ್ಟು ಕಡಿತ ಮಾಡಬೇಕು. ಟೋಲ್ ಸಿಬ್ಬಂದಿಯ ಪೂರ್ವಾಪರವನ್ನು ಪೊಲೀಸರು ಪರಿಶೀಲಿಸಿದ ಬಳಿಕವೇ ಗುರುತಿನ ಚೀಟಿ ನೀಡಬೇಕು. ಹಗಲು ಹೊತ್ತು ಮಹಿಳಾ ಸಿಬ್ಬಂದಿಯನ್ನು ಟೋಲ್ ಸಂಗ್ರಹಕ್ಕೆ ನಿಯೋಜಿಸಬೇಕು. ಶಾಲಾ ವಾಹನಗಳಿಗೆ ವಿನಾಯಿತಿ ನೀಡಬೇಕು ಎಂಬ ಸಲಹೆಗಳ ಬಗ್ಗೆ ಸಚಿವ ಯು.ಟಿ.ಖಾದರ್ ಗಮನ ಸೆಳೆದರು.

ಸ್ಥಳೀಯ 5 ಕಿ.ಮೀ. ವ್ಯಾಪ್ತಿಯ ವಾಹನಗಳಿಗೆ ಟೋಲ್‌ನಿಂದ ವಿನಾಯಿತಿ ನೀಡಿರುವುದು ಬಿಟ್ಟರೆ ಬೇರೆ ಯಾವುದೇ ಸಲಹೆ ಕಾರ್ಯಗತಗೊಂಡಿಲ್ಲ ಎಂದು ಎನ್‌ಎಚ್‌ಎಐ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.

ತಲಪಾಡಿ ಟೋಲ್‌ಗೇಟ್‌ನ 5 ಕಿ.ಮೀ. ವ್ಯಾಪ್ತಿಯಲ್ಲಿ 8 ಗ್ರಾಮಗಳು ಬರುತ್ತವೆ. ಕೇರಳ ಭಾಗದಲ್ಲಿ 4 ಸಾವಿರ ಹಾಗೂ ತಲಪಾಡಿಯಲ್ಲಿ 11,031 ವಾಹನಗಳು ಇವೆ. ಸ್ಥಳೀಯ ವಾಹನಗಳಿಗೆ ಶುಲ್ಕ ವಿನಾಯಿತಿಯ ಅವಧಿ ಮುಕ್ತಾಯಗೊಂಡಿದೆ. ಶಾಲಾ ವಾಹನಗಳಿಗೆ ಮಾಸಿಕ 3,620 ರೂ. ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ ಎಂದು ಗುತ್ತಿಗೆದಾರರು ಹೇಳಿದರು.

ಸುರತ್ಕಲ್‌ನ ಎನ್‌ಐಟಿಕೆ ಬಳಿಯ ಟೋಲ್‌ನಲ್ಲಿ ಶಾಲಾ ವಾಹನಗಳಿಂದ ಶುಲ್ಕವನ್ನು ಸಂಗ್ರಹಿಸುತ್ತಿಲ್ಲ ಎಂದು ಸಾರ್ವಜನಿಕರೊಬ್ಬರು ಮಾಹಿತಿ ನೀಡಿದರಲ್ಲದೆ ತಲಪಾಡಿಯಲ್ಲಿ ಅವೈಜ್ಞಾನಿಕ ರೀತಿಯಲ್ಲಿ ಟೋಲ್ ಸಂಗ್ರಹಿಸಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಕುಮಾರ್, ಡಿಸಿಪಿ ಶಾಂತರಾಜು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News