ಕರಾವಳಿ ಅಭಿವೃದ್ದಿ ಪ್ರಾಧಿಕಾರಕ್ಕೆ 20ಕೋಟಿ: ಐವನ್ ಡಿಸೋಜ
ಉಡುಪಿ, ಮಾ.19: ಈ ಬಾರಿಯ ಬಜೆಟ್ನಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು 20 ಕೋಟಿ ರೂ. ಗಳ ಅನುದಾನವನ್ನು ಮೀಸಲಿರಿಸಲಾಗಿದೆ ಎಂದು ವಿಧಾನ ಪರಿಷತ್ನ ಮುಖ್ಯ ಸಚೇತಕ ಐವನ್ ಡಿಸೋಜ ತಿಳಿಸಿದ್ದಾರೆ.
ಮುದರಂಗಡಿ ಗ್ರಾಪಂ ವ್ಯಾಪ್ತಿಯಲ್ಲಿ ಒಟ್ಟು 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಮೀನು ಮಾರುಕಟ್ಟೆಯನ್ನು ರವಿವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಈ ನೂತನ ಮೀನು ಮಾರುಕಟ್ಟೆಯಲ್ಲಿ 26 ಮಂದಿ ಮಹಿಳೆಯರಿಗೆ ಮೀನು ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಮುದರಂಗಡಿಯ ಸಮಗ್ರ ಅಭಿವೃದ್ದಿಗೆ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು, 1.65 ಕೋಟಿ ವೆಚ್ಚ ದಲ್ಲಿ 4 ಪಥದ ರಸ್ತೆ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯ ಮುಂದುವರಿಕೆಗಾಗಿ 2 ಕೋಟಿ ಮಂಜೂರು ಮಾಡಲಾಗಿದೆ ಎಂದರು.
ನಂದಿಕೂರಿನಲ್ಲಿ ರಸ್ತೆ ಅಭಿವೃದ್ದಿಗಾಗಿ 80 ಲಕ್ಷ ರೂ. ಬಿಡುಗಡೆಯಾಗಲಿದೆ. ಕಾಪು ತಾಲೂಕು ಕೇಂದ್ರವಾಗಲಿರುವುದರಿಂದ ಈ ಭಾಗದ ಜನರ ಸಮಸ್ಯೆ ಗಳು ಶೀಘ್ರದಲ್ಲಿ ಪರಿಹಾರವಾಗುವುದಲ್ಲದೇ, ತಾಲೂಕು ಅಭಿವೃದ್ದಿಗಾಗಿ ಹೆಚ್ಚಿನ ಅನುದಾನ ದೊರೆಯಲಿದೆ ಎಂದು ಅವರು ಹೇಳಿದರು.
ಅಧ್ಯಕ್ಷತೆಯನ್ನು ಕಾಪು ಶಾಸಕ ವಿನಯ ಕುಮಾರ್ ಸೊರಕೆ ವಹಿಸಿದ್ದರು. ಮುದರಂಗಡಿ ಗ್ರಾಪಂ ಅಧ್ಯಕ್ಷ ಡೇವಿಡ್ ಡಿಸೋಜ, ಉಪಾಧ್ಯಕ್ಷೆ ಜಯಂತಿ ಪೂಜಾರ್ತಿ, ಜಿಪಂ ಸದಸ್ಯೆ ಶಿಲ್ಪಾ ಜಿ.ಸುವರ್ಣ, ತಾಪಂ ಸದಸ್ಯ ಮೈಕಲ್ ರಮೇಶ್ ಡಿಸೋಜ, ಕ್ಸೇವಿಯರ್ ಚರ್ಚ್ನ ಧರ್ಮಗುರು ರೆ.ಫಾ.ಫ್ರಾನ್ಸಿಸ್ ಕ್ಸೇವಿಯರ್ ಲೂಯಿಸ್, ಕೆಆರ್ಐಡಿಎಲ್ನ ಕೃಷ್ಣ ಹೆಪ್ಸೂರು ಉಪಸ್ಥಿತರಿ ದ್ದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ ಸ್ವಾಗತಿಸಿದರು.