ಸಿಎಂ ಮಾತುಕತೆ ಯಶಸ್ವಿ: ಅಂಗನವಾಡಿ ಕಾರ್ಯಕರ್ತೆಯರ ಧರಣಿ ಹಿಂತೆಗೆತ
Update: 2017-03-21 09:46 GMT
ಬೆಂಗಳೂರು, ಮಾ.21: ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರು ನಗರದ ಶೇಷಾದ್ರಿಪುರಂ ರಸ್ತೆಯಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿಯನ್ನು ಹಿಂಪಡೆದಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತದಲ್ಲಿ ಅಂಗನವಾಡಿ ಕಾರ್ಯಕರ್ತೆರೊಂದಿಗೆ ನಡೆಸಿರುವ ಮಾತುಕತೆ ಯಶಸ್ವಿಯಾಗಿದ್ದು, ಎ.19ರೊಳಗೆ ಬೇಡಿಕೆ ಈಡೇರಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.
‘‘ವಿವಿಧ ಸಂಘಟನೆಯ ಮುಖಂಡರ ಜೊತೆ ಮಾತುಕತೆ ನಡೆಸಲಾಗಿದೆ. ಪ್ರತಿ ವರ್ಷ ಗೌರವ ಧನ 500 ರೂ. ಹೆಚ್ಚಿಸಲಾಗುತ್ತಿತ್ತು. ಈ ಬಾರಿ 1000 ರೂ. ಹೆಚ್ಚಿಸಲಾಗಿದೆ. ನ್ಯಾಯಯುತ ಬೇಡಿಕೆಯನ್ನು ಪರಿಗಣಿಸಲಾಗುವುದು. ಎ.19 ರಂದು ಸಭೆ ನಡೆಸಿ ನಿರ್ಧರಿಸಲಾಗುವುದು’’ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಸಭೆಯಲ್ಲಿ ನಿಡುಮಾಮಿಡಿ ಸ್ವಾಮೀಜಿ, ಮರುಳ ಸಿದ್ದಪ್ಪ, ಮಾರುತಿ ಮಾನ್ಪಡೆ, ವರಲಕ್ಷ್ಮೀ, ಸಚಿವೆ ಉಮಾಶ್ರೀ, ಸಚಿವ ಟಿ.ಬಿ.ಜಯಚಂದ್ರ ಮತ್ತಿತರರು ಭಾಗವಹಿಸಿದ್ದರು.