ಮಂಗಳೂರು ವಿವಿ ಯಕ್ಷಗಾನ ಅಧ್ಯಯನ ಕೇಂದ್ರದ ‘ಯಕ್ಷಮಂಗಳ’ ಪ್ರಶಸ್ತಿಗೆ ಆಯ್ಕೆ

Update: 2017-04-06 18:38 GMT

ಕೊಣಾಜೆ, ಎ.6: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ. ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2016ನೆ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ತೆಂಕುತಿಟ್ಟಿನ ಪ್ರಸಿದ್ಧ ಭಾಗವತ ಬಲಿಪ ನಾರಾಯಣ ಭಾಗವತ, ತಾಳಮದ್ದಳೆ ಅರ್ಥಧಾರಿ, ಸಂಶೋಧಕ ಡಾ.ಪ್ರಭಾಕರ ಜೋಶಿ, ಬಡಗುತಿಟ್ಟಿನ ಹಿರಿಯ ಕಲಾವಿದ ಐರೋಡಿ ಗೋವಿಂದಪ್ಪ ಮತ್ತು ಹಿಮ್ಮೇಳ ತಜ್ಞ ಗೋಪಾಲಕೃಷ್ಣ ಕುರುಪ್ ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ ಅವರ ‘ಯಕ್ಷಗಾನ ಕವಿ ಕಾವ್ಯ ವಿಹಾರ ಕೃತಿಯು ಆಯ್ಕೆಯಾಗಿದೆ.

ಯಕ್ಷಮಂಗಳ ಪ್ರಶಸ್ತಿಯು ತಲಾ 25,000 ರೂ. ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಕೃತಿ ಪ್ರಶಸ್ತಿಯು 10,000 ರೂ. ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರೊ.ಎಂ.ಎಲ್.ಸಾಮಗ, ಪ್ರೊ.ಪಾದೇಕಲ್ಲು ವಿಷ್ಣು ಭಟ್, ಪ್ರೊ.ಕೆ.ಚಿನ್ನಪ್ಪ ಗೌಡ, ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಧನಂಜಯ ಕುಂಬ್ಳೆ ಅವರನ್ನೊಳಗೊಂಡ ಆಯ್ಕೆ ಸಮಿತಿಯು ಸರ್ವಾನು ಮತದಿಂದ ಈ ಹೆಸರುಗಳನ್ನು ಆಯ್ಕೆ ಮಾಡಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಎ.17ರಂದು 11:30ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ.ಕೆ.ಭೈರಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮಂಗಳೂರು ವಿವಿ ಕುಲಸಚಿವ ಪ್ರೊ.ಕೆ.ಎಂ.ಲೋಕೇಶ್ ಹಾಗೂ ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಧನಂಜಯ ಕುಂಬ್ಳೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News