ಡಿವೈಎಫ್ ಐ, ಸಿಪಿಎಂನಿಂದ ಮನಪಾಗೆ ಮುತ್ತಿಗೆ: 32 ಮಂದಿಯ ಬಂಧನ, ಬಿಡುಗಡೆ
ಮಂಗಳೂರು, ಎ.13: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ಭವಿಸಿರುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿ ಡಿವೈ ಎಫ್ ಐ ಮತ್ತು ಸಿಪಿಎಂ ವತಿಯಿಂದ ಮಂಗಳೂರು ನಗರ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಲಾಯಿತು.
ಟ್ಯಾಂಕರ್ ಮಾಫಿಯಾಗೆ ಮಣಿದು ಮೇಯರ್ ನೀರಿನ ಅಭಾವ ಸೃಷ್ಟಿಸುತ್ತಿದ್ದಾರೆ. ಮಹಾನಗರ ಪಾಲಿಕೆಯಿಂದ ನೀರಿನ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ. ತುಂಬೆ ಅಣೆಕಟ್ಟಿನಲ್ಲಿ ಸಾಕಷ್ಟು ನೀರಿದ್ದರೂ, 4 ದಿನಗಳಿಗೊಮ್ಮೆ ನೀರು ಬಿಟ್ಟು ನೀರಿನ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದರು.
ಮುತ್ತಿಗೆ ಹಾಕಲು ಯತ್ನಿಸಿದ 32 ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು ನಂತರ ಅವರನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭ ಡಿವೈಎಫ್ ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮುಖಂಡರಾದ ಬಿ.ಕೆ. ಇಮ್ತಿಯಾಝ್, ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮಿತಿಯ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಡಿವೈಎಫ್ ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸಾದಿಕ್ ಕಣ್ಣೂರು, ನೌಶಾದ್ ಬೆಂಗ್ರೆ, ಯೋಗೀಶ್ ಜೆಪ್ಪಿನಮೊಗರು, ಸಂತೋಷ್ ಶಕ್ತಿನಗರ, ಮನೋಜ್ ವಾಮಂಜೂರು, ಆಶಾ ಬೋಳೂರು, ಸಮುದಾಯ ಸಂಘಟನೆಯ ವಾಸುದೇವ ಉಚ್ಚಲ್ ಮೊದಲಾದವರು ಉಪಸ್ಥಿತರಿದ್ದರು.