ಬಿಜೆಪಿಗೆ ಹಾನಿ ಮಾಡಿರುವ ಈಶ್ವರಪ್ಪ: ಆರ್.ಅಶೋಕ್

Update: 2017-04-29 16:44 GMT

ಬೆಂಗಳೂರು, ಎ.29: ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬಹಿರಂಗ ಸಭೆ ನಡೆಸುವ ಮೂಲಕ ಬಿಜೆಪಿಗೆ ಹಾನಿ ಮಾಡಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಕಿಡಿಗಾರಿದ್ದಾರೆ.

ಶನಿವಾರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಬಹಿರಂಗ ಸಭೆ ನಡೆಸುವ ಮೂಲಕ ಪಕ್ಷದಲ್ಲಿ ಗೊಂದಲದ ವಾತಾವರಣ ನಿರ್ಮಿಸಿದ್ದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಏನೇ ಸಮಸ್ಯೆಗಳಿದ್ದರೂ ಅದನ್ನು ಪಕ್ಷದ ಚೌಕಟ್ಟಿನಲ್ಲಿ ಮಾತನಾಡಿ ಬಗೆಹರಿಸಿಕೊಳ್ಳಬೇಕಿತ್ತು. ಆದರೆ, ಬಹಿರಂಗ ಸಭೆಯನ್ನು ನಡೆಸುವ ಮೂಲಕ ಪಕ್ಷಕ್ಕೆ ಹಾನಿ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ.

ಈಶ್ವರಪ್ಪ ವ್ಯಕ್ತಪಡಿಸುತ್ತಿರುವ ಭಿನ್ನರಾಗಕ್ಕೆ ಶಿವಮೊಗ್ಗ ಜಿಲ್ಲೆಯ ಸ್ಥಳೀಯ ರಾಜಕಾರಣ ಕಾರಣ. ಅದನ್ನೆ ಇಷ್ಟು ದೊಡ್ಡ ಭಿನ್ನಮತವೆಂದು ಬಿಂಬಿಸುವ ಅಗತ್ಯವಿರಲಿಲ್ಲ ಎಂದು ಅವರು ಹೇಳಿದರು.

ಪಕ್ಷದಲ್ಲಿ ಏರ್ಪಟ್ಟಿರುವ ಗೊಂದಲಗಳನ್ನು ಬಗೆಹರಿಸುವಂತೆ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್‌ರಾವ್‌ಗೆ ಮನವಿ ಮಾಡಲಾಗಿದೆ. ಅವರು ಆಗಮಿಸಿ ಸಂಧಾನ ಮಾತುಕತೆಯನ್ನು ನಡೆಸಲಿದ್ದಾರೆ ಎಂದು ಅಶೋಕ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News