×
Ad

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ವಾರ್ಷಿಕೋತ್ಸವ

Update: 2017-05-02 15:49 IST

ಬೆಳ್ತಂಗಡಿ, ಮೇ 2: ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಪಾರ್ಶ್ವ ಪರಿಣಾಮ ಇಲ್ಲದ ಚಿಕಿತ್ಸಾ ವಿಧಾನವಾಗಿದ್ದು, ಇದರ ಬಗ್ಗೆ ಜನರಿಗೆ ಅರಿವು, ಜಾಗೃತಿ ಮೂಡಿಸಬೇಕು. ಹೆಚ್ಚಿನ ಸಂಶೋಧನೆ ಮತ್ತು ಪ್ರಕಾಶನಾ ಕಾರ್ಯ ನಡೆಯಬೇಕು ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಉಪಕುಲಪತಿ ಡಾ.ಕೆ.ಎಸ್ ರವೀಂದ್ರನಾಥ್ ಹೇಳಿದರು.  

ಉಜಿರೆ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ನಡೆದ ವಾರ್ಷಕೋತ್ಸವ  ಸಮಾರಂಭದಲ್ಲಿ ಮಾತನಾಡಿದರು.

ಕಳೆದ ವರ್ಷ ಸಂಶೋಧನೆಗಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯಿಂದ ಹತ್ತು ಕೋಟಿ ರೂ. ಅನುದಾನ ನೀಡಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಇದಕ್ಕಾಗಿ 20 ಕೋಟಿ ರೂ. ಅನುದಾನ ನೀಡುವುದಾಗಿ ಪ್ರಕಟಿಸಿದರು.

ಇಂದು ಶಿಕ್ಷಣ ಕ್ಷೇತ್ರ ವಾಣಿಜ್ಯಮಯವಾಗುತ್ತಿದ್ದು, ಗುಣಮಟ್ಟ ಕಡಿಮೆಯಾಗುತ್ತಿದೆ. ಶೇ.50ರಷ್ಟು ಕಾಲೇಜುಗಳು ಮಾತ್ರ ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಆದುದರಿಂದ ಹೊಸ ಕಾಲೇಜುಗಳನ್ನು ಪ್ರಾರಂಭಿಸಲು ಅನುಮತಿ ನೀಡುವುದಕ್ಕಾಗಿ ಮಾರ್ಗದರ್ಶಿ ಸೂತ್ರಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು.

ವೈದ್ಯರು ಬದ್ಧತೆ, ಪ್ರಾಮಾಣಿಕತೆ ಮತ್ತು ವೃತ್ತಿಪರ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು. ಮಾನವೀಯತೆಯಿಂದ ರೋಗಿಗಳ ಸೇವೆ ಮಾಡಬೇಕು. ರೋಗಿ ಮತ್ತು ವೈದ್ಯರ ಸಂಬಂಧ ಪವಿತ್ರವಾಗಿದ್ದು, ವೈದ್ಯರು ರೋಗಿಯೊಂದಿಗೆ ಮುಕ್ತವಾಗಿ ಸಂವಹನ ನಡೆಸಿ ಚಿಕಿತ್ಸೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಆಧುನಿಕ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದಾಗಿ ಇಂದು ಜನರು ಅನೇಕ ರೋಗಗಳಿಗೆ ಬಲಿಯಾಗುತ್ತಾರೆ. ಶ್ರಮ, ಸಂಸ್ಕೃತಿಯೊಂದಿಗೆ ಹಿತ - ಮಿತ ಆಹಾರ ಸೇವನೆ ಮಾಡಿ ಆರೋಗ್ಯ ಸುಧಾರಣೆಯೊಂದಿಗೆ ಆರೋಗ್ಯಭಾಗ್ಯ ಹೊಂದಬೇಕು. ದೇಹ ಮತ್ತು ಮನಸ್ಸಿನ ಆರೋಗ್ಯದೊಂದಿಗೆ ನಾವು ಆಧ್ಯಾತ್ಮಿಕ ಅರಿವು, ಜಾಗೃತಿ ಹಾಗೂ ಸ್ಪಂದನ ಹೊಂದಿರಬೇಕು. ಪ್ರಕೃತಿ ಚಿಕಿತ್ಸೆ ಬಗ್ಗೆ ನಂಬಿಕೆ ಮತ್ತು ವಿಶ್ವಾಸ ಇಡಬೇಕು ಎಂದು ಹೇಳಿದರು.

ಡಾ. ಶಕ್ತಿವಿಜಯನ್ ಕಾಲೇಜಿನ ವರದಿ ಸಾದರ ಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ ಶೆಟ್ಟಿ ಸ್ವಾಗತಿಸಿದರು. ಡಾ. ಶಿವಪ್ರಸಾದ್ ಶೆಟ್ಟಿ ವಂದಿಸಿದರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ.ಯಶೋವರ್ಮ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News