ಜಂತಕಲ್ ಮೈನಿಂಗ್ ಪ್ರಕರಣ; ಬಿಎಸ್ವೈ, ಎಸ್.ಎಂ.ಕೃಷ್ಣ ಕೂಡ ಭಾಗಿ: ಎಸ್.ಆರ್.ಹಿರೇಮಠ
ಹುಬ್ಬಳ್ಳಿ, ಮೇ 19: ಜಂತಕಲ್ ಮೈನಿಂಗ್ ಕಂಪೆನಿ ಪ್ರಕರಣದಲ್ಲಿ ಕೇವಲ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್ ಅಷ್ಟೇ ಭಾಗಿಯಾಗಿಲ್ಲ. ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಹಾಗೂ ಬಿ.ಎಸ್. ಯಡಿಯೂರಪ್ಪ ಕೂಡ ಇದ್ದಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಆರೋಪಿಸಿದ್ದಾರೆ.
ಹುಬ್ಬಳ್ಳಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಅಕ್ರಮ ಗಣಿಗಾರಿಕೆಯ ಜನಕರಾಗಿದ್ದಾರೆ. ಅವರು ತಮ್ಮ ಅಧಿಕಾರಾವಧಿಯಲ್ಲಿ ಸಾಕಷ್ಟು ಅಕ್ರಮ ಮಾಡಿದ್ದಾರೆ. ಅವರೇ ಇಲ್ಲಿಯವರೆಗೂ ಅಕ್ರಮ ಗಣಿಗಾರಿಕೆ ನಡೆಯಲು ಕಾರಣಕರ್ತರಾಗಿದ್ದಾರೆ. ಈಗ ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ತಡವಾಗಿಯಾದರೂ ಎಸ್ಐಟಿ ಅಧಿಕಾರಿಗಳು ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾರನ್ನು ಬಂಧಿಸಿದ್ದಾರೆ.
ಇನ್ನು ಎಚ್.ಡಿ.ಕುಮಾರಸ್ವಾಮಿ ಮತ್ತು ಧರಂಸಿಂಗ್ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ. ಈ ಪ್ರಕಣದಲ್ಲಿ ಸರಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಅಕ್ರಮ ಗಣಿಗಾರಿಕೆಯಲ್ಲಿ ಪಾಲ್ಗೊಂಡಿರುವ ಪ್ರತಿಯೊಬ್ಬರ ಬಗ್ಗೆಯೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.