ಮಾಸಾಂತ್ಯಕ್ಕೆ ಕೆಪಿಸಿಸಿಗೆ ನೂತನ ಸಾರಥಿ ನೇಮಕ: ಮುಖ್ಯಮಂತ್ರಿ ಸಿದ್ಧರಾಮಯ್ಯ
ಬೆಂಗಳೂರು, ಮೇ 21: ಈ ತಿಂಗಳ ಅಂತ್ಯದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಗೆ ನೂತನ ಅಧ್ಯಕ್ಷರ ನೇಮಕವಾಗಲಿದ್ದು, ಈ ಬಗ್ಗೆ ಶೀಘ್ರದಲ್ಲೆ ಪಕ್ಷದ ವರಿಷ್ಠರು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟಣೆ ನೀಡಿದ್ದಾರೆ.
ರವಿವಾರ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ಗಾಂಧಿ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ತಿಂಗಳೊಳಗೆ ಕೆಪಿಸಿಸಿಗೆ ಬಹುತೇಕ ಹೊಸ ಅಧ್ಯಕ್ಷರ ನೇಮಕವಾಗುತ್ತದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯಾಗಲಿದೆ ಎಂದರು.
ಬಿಎಸ್ವೈ ದ್ವಂದ್ವ ನೀತಿ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರದು ಡಬಲ್ ಕ್ಯಾರೆಕ್ಟರ್, ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಒಂದು ಮಾತನಾಡುತ್ತಾರೆ. ವಿರೋಧ ಪಕ್ಷದಲ್ಲಿರುವ ವೇಳೆ ಮತ್ತೊಂದು ಮಾತನಾಡುತ್ತಿದ್ದಾರೆಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು.
ಬಿಎಸ್ವೈ ಸಿಎಂ ಆಗಿದ್ದಾಗ ರೈತರ ಸಾಲಮನ್ನಾ ಮಾಡಲು ಸಾಧ್ಯವೇ ಎಂದಿದ್ದರು. ಅಲ್ಲದೆ, ಸಾಲಮನ್ನಾ ಮಾಡಲು ನಾನು ನೋಟು ಪ್ರಿಂಟ್ ಮಾಡುವ ಮಿಷನ್ ಇಟ್ಟುಕೊಂಡಿಲ್ಲ ಎಂದು ಮೇಲ್ಮನೆ ಹೇಳಿಕೆ ನೀಡುವುದು ದಾಖಲೆಯಲ್ಲಿದೆ ಎಂದ ಅವರು, ಇದೀಗ ಮತ್ತೊಂದು ಹೇಳಿಕೆ ನೀಡುತ್ತಿದ್ದಾರೆ ಎಂದರು.
ಯಡಿಯೂರಪ್ಪರ ಬರ ಅಧ್ಯಯನ ಪ್ರವಾಸದ ಕುರಿತು ಟೀಕೆ ಮಾಡುವುದಿಲ್ಲ. ಆದರೆ, ರಾಜ್ಯ ಪ್ರವಾಸದ ಬದಲಿಗೆ ಹೊಸದಿಲ್ಲಿಗೆ ತೆರಳಿ ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕೆಂದು ಎಂದು ಸಿದ್ಧರಾಮಯ್ಯ ಆಗ್ರಹಿಸಿದರು.