ಕೆಪಿಸಿಸಿ ಅಧ್ಯಕ್ಷ ಸ್ಥಾನ ಮಾಸಾಂತ್ಯಕ್ಕೆ ಗೊಂದಲ ನಿವಾರಣೆ: ಕೆ.ಸಿ.ವೇಣುಗೋಪಾಲ್
ಬೆಂಗಳೂರು, ಮೇ 22: ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಬೇಕೆ ಅಥವಾ ಹಾಲಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನೇ ಮುಂದುವರಿಸಬೇಕೆ ಎಂಬುದರ ಕುರಿತು ಈ ತಿಂಗಳ ಅಂತ್ಯದಲ್ಲಿ ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ಸೋಮವಾರ ನಗರದ ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧಗೊಳಿಸಲು ಇಂದಿನಿಂದ ಐದು ದಿನಗಳ ಕಾಲ ಎಲ್ಲ ಜಿಲ್ಲೆಗಳ ಸಚಿವರು, ಶಾಸಕರು ಹಾಗೂ ಮುಖಂಡರ ಸರಣಿ ಸಭೆ ನಡೆಯಲಿದೆ ಎಂದರು.
ಕೆಪಿಸಿಸಿ ಅಧ್ಯಕ್ಷರ ನೇಮಕದ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ತುಸು ಕೋಪದಿಂದಲೇ ಪ್ರತಿಕ್ರಿಯಿಸಿದ ವೇಣುಗೋಪಾಲ್, ಎಲ್ಲ ವಿಚಾರಗಳನ್ನು ನೀವೇ ನಿರ್ಧಾರ ಮಾಡುತ್ತೀರಾ, ಈ ತಿಂಗಳ ಅಂತ್ಯದಲ್ಲಿ ಈ ಸಂಬಂಧ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನಲ್ಲ ಎಂದರು.