ಕೊರಗ ಮಕ್ಕಳಿಗೆ ಕ್ರೀಡೆಯಲ್ಲಿ ವಿಶೇಷ ತರಬೇತಿಗೆ ಯೋಜನೆ: ಪ್ರಮೋದ್
ಉಡುಪಿ, ಮೇ 26: ಸಿದ್ಧಿ ಜನಾಂಗದ ಯುವಕ ಯುವತಿಯರಿಗೆ ಕ್ರೀಡೆ ಯಲ್ಲಿ ವಿಶೇಷ ತರಬೇತಿ ನೀಡುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಕ್ರೀಡಾ ಶಾಲೆಯನ್ನು ಮಂಜೂರು ಮಾಡಲಾಗಿದ್ದು, ಇದರ ಕೆಲಸ ಸದ್ಯದಲ್ಲೇ ಆರಂಭಿಸಲಾಗುವುದು. ಇದೇ ಮಾದರಿಯಲ್ಲಿ ಕೊರಗ ಸಮುದಾಯದ ಮಕ್ಕಳಿಗೆ ಕ್ರೀಡೆಯಲ್ಲಿ ವಿಶೇಷ ತರಬೇತಿ ನೀಡಲು ಯೋಜನೆ ರೂಪಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಯುವಜನಸೇವೆ ಹಾಗೂ ಕ್ರೀಡಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಕೊರಗ ಸಮುದಾಯದ ಯುವಕ ಯುವತಿಯರಿಗಾಗಿ ಆಯೋಜಿಸಲಾದ ಜಿಲ್ಲಾ ಮಟ್ಟದ ಕ್ರೀಡೋತ್ಸವವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಅಜ್ಜರಕಾಡಿನಲ್ಲಿರುವ ಈಜುಕೊಳಕ್ಕೆ ರೂಫಿಂಗ್ ನಿರ್ಮಿಸಲು ಒಂದು ಕೋಟಿ, ಹೆಣ್ಣು ಮಕ್ಕಳ ಕ್ರೀಡಾ ಹಾಸ್ಟೆಲ್ ಸ್ಥಾಪನೆಗೆ ಒಂದು ಕೋಟಿ, ಅಂತಾ ರಾಷ್ಟ್ರೀಯ ಮಟ್ಟದ ಜಿಮ್ ಕೇಂದ್ರ ನಿರ್ಮಿಸಲು ಎರಡು ಕೋಟಿ ಮಂಜೂರು ಮಾಡಲಾಗಿದೆ. ನೇಜಾರಿನಲ್ಲಿ ಅಂತಾರಾಷ್ಟ್ರೀಯ ಈಜು ಕೊಳ ನಿರ್ಮಿಸಲು ಎಂಟು ಕೋಟಿ ರೂ. ಅನುದಾನದ ಪ್ರಸ್ತಾಪನೆಯನ್ನು ಕೇಂದ್ರ ಸರಕಾರಕ್ಕೆ ಕಳುಹಿ ಸಲಾಗಿದೆ ಎಂದರು.
ಉಡುಪಿಯಲ್ಲಿ ಅಥ್ಲೆಟಿಕ್ ಅಕಾಡೆಮಿ ಸ್ಥಾಪಿಸಲು 1.5 ಕೋಟಿ ರೂ., ಶಟಲ್ ಒಳಾಂಗಣ ಕ್ರೀಡಾಂಗಣಕ್ಕೆ ಹವಾನಿಯಂತ್ರಣ ವ್ಯವಸ್ಥೆ ಕಲ್ಪಿಸಲು ಒಂದು ಕೋಟಿ ರೂ., ಲಾನ್ ಟೆನಿಸ್ ಕೋರ್ಟ್ ನಿರ್ಮಾಣಕ್ಕೆ 3.5ಕೋಟಿ ರೂ. ಮಂಜೂರು ಮಾಡಲಾಗಿದೆ. ಹೀಗೆ ಉಡುಪಿಯನ್ನು ಕ್ರೀಡಾ ರಾಜಧಾನಿ ಯನ್ನಾಗಿ ಮಾಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ ತಿಲಕ್ರಾಜ್, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ದಿನೇಶ್ ಪುತ್ರನ್ ಉಪಸ್ಥಿತರಿದ್ದರು.
ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕೊರಗ ಮುಖಂಡ ಗಣೇಶ್ ಕುಂದಾಪುರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶೇಖರ್ ಮರವಂತೆ ವಂದಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.
ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ
ಕ್ರೀಡೆಗೆ ವೈಜ್ಞಾನಿಕವಾಗಿ ಶಕ್ತಿ ನೀಡುವ ನಿಟ್ಟಿನಲ್ಲಿ ಬೆಂಗಳೂರು ಹಾಗೂ ಉಡುಪಿಗೆ ಕ್ರೀಡಾ ವಿಜ್ಞಾನ ಕೇಂದ್ರವನ್ನು ಮಂಜೂರು ಮಾಡಲಾಗಿದ್ದು, ಇದಕ್ಕೆ ಎರಡು ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು.