×
Ad

ಅಪರಾಧ ಮುಕ್ತ ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

Update: 2017-06-10 18:26 IST

ಬೆಂಗಳೂರು, ಜೂ.10: ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ನಡೆಯುವ ಗೂಂಡಾ ಮತ್ತು ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರು ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದ್ದಾರೆ.

ಶನಿವಾರ ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬೆಂಗಳೂರು ನಗರ ಪೊಲೀಸರಿಂದ ನಾಗರಿಕ ಸಬಲೀಕರಣ ಉಪಕ್ರಮ ತುರ್ತು ಸಮಯದಲ್ಲಿ ಪ್ರತಿಕ್ರಿಯಿಸುವ ಸೇವೆ ನಮ್ಮ 100 ಸಹಾಯವಾಣಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ನಗರ ವ್ಯಾಪ್ತಿಯ ಸಮಸ್ಯೆಗಳನ್ನು ನಿವಾರಿಸಿ ಗುಣಾತ್ಮಕ ಬದಲಾವಣೆಗಳನ್ನು ತರಬೇಕೆಂಬ ಉದ್ದೇಶದಿಂದ ‘ನಿಮ್ಮ ದೂರು ನಮ್ಮ 100’ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಆಧುನಿಕ ಜಗತ್ತಿನಲ್ಲಿ ಹೊಸ ತಂತ್ರಜ್ಞಾನಗಳ ಬೆಳವಣಿಗೆಯಾಗುತ್ತಿದ್ದು, ನಮ್ಮ ರಾಜ್ಯಗಳಲ್ಲೂ ತಂತ್ರಜ್ಞಾನ ಅಭಿವೃದ್ದಿಯಾಗಬೇಕು ಎಂದ ಅವರು, ತುರ್ತು ಸಂದರ್ಭಗಳಲ್ಲಿ 100ಕ್ಕೆ ಕರೆ ಮಾಡಿ, ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರೆ ನಗರ ಪೊಲೀಸರು ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಾರೆ ಎಂದು ಮಾಹಿತಿ ನೀಡಿದರು.

ಪ್ರಕರಣ ನಡೆದ ತಕ್ಷಣ ತೊಂದರೆಯಲ್ಲಿದ್ದವರಿಗೆ ಸಹಾಯ ಮಾಡಲು ಈಗಾಗಲೇ ಹೊಯ್ಸಳ, ಪಿಂಕ್ ಹೊಯ್ಸಳ, ಸುರಕ್ಷಾ ಆಪ್ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪೊಲೀಸರು ಸಾರ್ವಜನಿಕರೊಂದಿಗೆ ಸದಾ ಸಂಪರ್ಕದಲ್ಲಿರಬೇಕು, ನಗರದಲ್ಲಿ 1.10 ಕೋಟಿ ಜನ ವಾಸ ಮಾಡುತ್ತಿದ್ದು, ಬೆಂಗಳೂರು ವೇಗವಾಗಿ ಬೆಳವಣಿಗೆಯಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಇಂತಹ ಸಹಾಯವಾಣಿಯನ್ನು ಆರಂಭಿಸಿ ಇದರ ಉದ್ದೇಶಿತ ಗುರಿ ಸಫಲವಾಗುವಂತೆ ಮಾಡಬೇಕು. ಪೊಲೀಸ್ ಇಲಾಖೆಯನ್ನು ಬಲಪಡಿಸಲು ಬೇಕಾದ ಎಲ್ಲಾ ಸೌಕರ್ಯಗಳನ್ನು ಸರಕಾರ ಒದಗಿಸುತ್ತಿದ್ದು, ಪೊಲೀಸರು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು. ಬೆಂಗಳೂರು ನಗರವನ್ನು ಸಂಪೂರ್ಣ ಅಪರಾಧ ಮುಕ್ತ ಮಾಡಲು ಸಾಧ್ಯವಿಲ್ಲ. ಆದರೆ, ನಗರದಲ್ಲಿ ನಡೆಯುತ್ತಿರುವ ಗೂಂಡಾ ಮತ್ತು ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರು ಪ್ರಾಮಾಣಿಕವಾಗಿ ಪ್ರಯತ್ನಿಸಿದರೆ, ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

 ರಾಜಧಾನಿ ಸುರಕ್ಷಿತ ನಗರ: ಸಿಲಿಕಾನ್ ಸಿಟಿ ಬೆಂಗಳೂರು ಅಂತಾರಾಷ್ಟ್ರಿಯ ಮಟ್ಟದಲ್ಲಿ ಡೈನಾಮಿಕ್ ಸಿಟಿ ಎಂದು ಗುರುತಿಸಲ್ಪಟ್ಟಿದ್ದು, ಸಾರ್ವಜನಿಕರಲ್ಲಿ ಅತ್ಯಂತ ಸುರಕ್ಷಿತ ನಗರ ಎಂಬ ಭಾವನೆ ಮೂಡಿಸುವುದು ಸರಕಾರ ಮತ್ತು ಪೊಲೀಸರ ಜವಾಬ್ದಾರಿ. ಈ ಮೊದಲು ಕೇವಲ ಐದು ಸಹಾಯವಾಣಿಗಳಿದ್ದವು. ಪ್ರಸ್ತುತ 100ಕ್ಕೆ ಹೆಚ್ಚಿಸಲಾಗಿದ್ದು, ಎಲ್ಲರೂ ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಬೆಂಗಳೂರು ಪೊಲೀಸ್ ಅಧಿಕಾರಿಗಳೊಂದಿಗೆ ಲಂಡನ್ ಪೊಲೀಸರ ಕಾರ್ಯ ನಿರ್ವಹಣೆಯನ್ನು ತಿಳಿದುಕೊಳ್ಳಲು ತೆರಳಿದ್ದ ಸಂದರ್ಭದಲ್ಲಿ ಅಲ್ಲೂ ಇದೇ ಮಾದರಿಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಅಲ್ಲಿ ಸಾರ್ವಜನಿಕರ ದೂರು ಸ್ವೀಕರಿಸಲು 1700 ಸಿಬ್ಬಂದಿಗಳಿದ್ದರು. ಸಾರ್ವಜನಿಕರು ಕರೆ ಮಾಡಿದ ಹದಿನೈದು ನಿಮಿಷಗಳಲ್ಲೆ ಪೊಲೀಸರು ಪ್ರಕರಣ ನಡೆದ ಸ್ಥಳದಲ್ಲಿರುತ್ತಿದ್ದರು. ಇದರಿಂದ ಪ್ರೇರೇಪಿತರಾಗಿ ಬೆಂಗಳೂರಿನಲ್ಲೂ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಸಚಿವ ರೋಶನ್‌ಬೇಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ಪೊಲೀಸ್ ಮಹಾನಿರ್ದೇಶಕ ಆರ್.ಕೆ.ದತ್ತಾ, ನಗರ ಪೊಲೀಸ್ ಆಯುಕ್ತ ಪ್ರವೀಣ್‌ಸೂದ್, ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಸೇರಿ ಪ್ರಮುಖರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News