ಹೊರಗುತ್ತಿಗೆ ಸಿಬ್ಬಂದಿ ಸೇವೆ ಖಾಯಂ ಇಲ್ಲ: ಕಂದಾಯ ಸಚಿವ ಕಾಗೋಡು ತಿಮ್ಮಪ್ಪ
ಬೆಂಗಳೂರು, ಜೂ. 12: ಅಟಲ್ಜಿ ಜನಸ್ನೇಹಿ ಕೇಂದ್ರಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ನೌಕರರ ಸೇವೆ ಖಾಯಂಗೊಳಿಸಲು ಹಾಗೂ ಸೇವಾ ಭದ್ರತೆ ಕಲ್ಪಿಸಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ 1148 ನೌಕರರು ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ.
ಜನಸ್ನೇಹಿ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಜಾತಿ, ಆಧಾಯ ದೃಢೀಕರಣ ಪತ್ರ ಸೇರಿ ವಿವಿಧ ಪ್ರಮಾಣ ಪತ್ರಗಳ ಸೇವೆಯ ಅರ್ಜಿ ಶುಲ್ಕದಿಂದ ಸಂಗ್ರಹವಾಗುವ ಹಣವು ಜಿಲ್ಲಾಧಿಕಾರಿಗಳ ಬ್ಯಾಂಕ್ ಖಾತೆಯ ಅಟಲ್ ಜನಸ್ನೇಹಿ ಕೇಂದ್ರದ ಯೋಜನೆಯ ಬಳಕೆದಾರರ ನಿಧಿಯಲ್ಲಿ ಜಮೆಯಾಗುತ್ತದೆ ಎಂದು ಹೇಳಿದರು.
ನಾಡ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸಿರುವ ಡೇಟಾ ಎಂಟ್ರಿ ಆಪರೇಟರ್ಗಳಿಗೆ ಪಾವತಿಸಬೇಕಾದ ಮಾಸಿಕ ಹಣವನ್ನು ಯಾವುದೇ ವಿಳಂಬವಿಲ್ಲದೆ ಪಾವತಿಸಲು ಕ್ರಮ ವಹಿಸಲಾಗುವುದು ಎಂದ ಅವರು, ಬಳಕೆದಾರರ ನಿಧಿಯ ಹಣ ಬಳಸಿಕೊಂಡು ಜಿಲ್ಲಾಧಿಕಾರಿಗಳೆ ನೇರವಾಗಿ ಏಜೆನ್ಸಿಗೆ ಪಾವತಿಸಲು ಸೂಚಿಸಲಾಗಿದೆ ಎಂದರು.