×
Ad

ಸ್ವಂತ ನಿವೇಶನವಿಲ್ಲದ ನಿಲಯಗಳ ಬಗ್ಗೆ ಮಾಹಿತಿ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

Update: 2017-06-29 20:07 IST

ಮಡಿಕೇರಿ ಜೂ.29: ಸಮಾಜ ಕಲ್ಯಾಣ, ಐಟಿಡಿಪಿ ಮತ್ತು ಹಿಂದುಳಿದ ವರ್ಗ ಇಲಾಖೆ ವ್ಯಾಪ್ತಿಯ ಎಲ್ಲಾ ವಿದ್ಯಾರ್ಥಿ ನಿಲಯ, ಆಶ್ರಮ ಶಾಲೆಗಳು ಹಾಗೂ ವಸತಿ ಶಾಲೆಗಳಿಗೆ ಸ್ವಂತ ನಿವೇಶನ ಇರಬೇಕು. ಸ್ವಂತ ನಿವೇಶನ ಇಲ್ಲದಿದ್ದಲ್ಲಿ ಕೂಡಲೇ ಮಾಹಿತಿಯ ಪಟ್ಟಿ ಒದಗಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯ, ಆಶ್ರಮ ಶಾಲೆ ಮತ್ತು ವಸತಿ ನಿಲಯಗಳಿಗೆ ಆದಷ್ಟು ನಿವೇಶನ ಮಂಜೂರು ಮಾಡಲಾಗಿದೆ. ಆದರೂ ನಿವೇಶನ ಇಲ್ಲ ಎಂಬುದು ಕೇಳಿ ಬರಬಾರದು. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಮುತುವರ್ಜಿ ವಹಿಸಿ ಸರ್ಕಾರಿ ಜಾಗ ಪಡೆಯಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಸರ್ಕಾರ ಪ್ರತೀ ಹೋಬಳಿ ಕೇಂದ್ರದಲ್ಲಿ ವಸತಿ ನಿಲಯ ಆರಂಭಿಸಲು ಉದ್ದೇಶಿಸಿದ್ದು, ಈ ಸಂಬಂಧ 10 ಎಕರೆ ಜಾಗ ಗುರುತಿ ಸಲಾಗುವುದು. ಜಿಲ್ಲೆಯ ಯಾವ ಹೋಬಳಿ ಕೇಂದ್ರದಲ್ಲಿ ವಸತಿ ನಿಲಯವಿಲ್ಲ. ಅದರ ಬಗ್ಗೆ ಮಾಹಿತಿ ಒದಗಿಸುವಂತೆ ಕಂದಾಯ ನಿರೀಕ್ಷಕರಿಗೆ ತಿಳಿಸಿದರು.

ಜಿಲ್ಲೆಯಲ್ಲಿ ಆದಿವಾಸಿ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಮೂರು ಕೋಟಿ ರೂ. ಮಂಜೂರಾಗಿದ್ದು, ನಿವೇಶನ ಗುರ್ತಿಸಬೇಕಿದೆ ಎಂದು ಐಟಿಡಿಪಿ ಇಲಾಖಾ ಅಧಿಕಾರಿ ಪ್ರಕಾಶ್ ಅವರು ಮಾಹಿತಿ ನೀಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಗೋಣಿಕೊಪ್ಪ ಬಳಿ ಜಾಗ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕಂದಾಯ ನಿರೀಕ್ಷಕರಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ ಹೀಗೆ ನಾನಾ ಇಲಾಖೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಾಗವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ಒತ್ತುವರಿಗೆ ಅವಕಾಶ ನೀಡಬಾರದು, ಸರ್ಕಾರಿ ಜಾಗವನ್ನು ಸಂರಕ್ಷಿಸುವುದು ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರ ಜವಾಬ್ದಾರಿಯಾಗಿದೆ ಎಂದು ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಹೇಳಿದರು.

ತೋಟಗಾರಿಕೆ ಇಲಾಖೆ ವ್ಯಾಪ್ತಿಯ ಮದಲಾಪುರದಲ್ಲಿ 100 ಎಕರೆ ಭೂಮಿ ಇದ್ದು, ಇದನ್ನು ಸಂರಕ್ಷಣೆ ಮಾಡಿಕೊಳ್ಳಬೇಕು. ಹಾಗೆಯೇ ಮಾದಪುರದಲ್ಲಿಯೂ ಭೂಮಿ ಇದ್ದು ಸಂರಕ್ಷಣೆ ಮಾಡಿಕೊಳ್ಳ್ಳುವತ್ತ ಗಮನ ಹರಿಸುವಂತೆ ಡಿಸಿ ಅವರು ಸೂಚನೆ ನೀಡಿದರು. ಈಗಾಗಲೇ ಶಾಲೆ ಆರಂಭವಾಗಿದ್ದು, ಶಾಲೆಗಳಲ್ಲಿ ಬೈಸಿಕಲ್ ಹಾಗೂ ಪಠ್ಯಪುಸ್ತಕ ವಿತರಣೆ ಮಾಡಬೇಕು. ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕು. ಆರ್.ಟಿ.ಸಿ.ಗೆ ಬಾಕಿ ಇರುವ ಶಾಲೆಗಳ ಮಾಹಿತಿಯ ಪಟ್ಟಿಯನ್ನು ಒದಗಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಮಾತನಾಡಿ ಮಾಜಿ ಸೈನಿಕರಿಂದ ಭೂಮಿ ಮಂಜೂರಾತಿಗೆ ಸಾಕಷ್ಟು ಅರ್ಜಿಗಳು ಬಂದಿದ್ದು, ಈ ಸಂಬಂಧ ಕಂದಾಯ ನಿರೀಕ್ಷಕರು ಅಗತ್ಯ ಕ್ರಮಕೈಗೊಳ್ಳಬೇಕಿದೆ ಎಂದು ಅವರು ಸೂಚನೆ ನೀಡಿದರು.

ವಿವಿಧ ಇಲಾಖೆಗಳಿಗೆ ಬೇಕಿರುವ ಜಾಗ ಸಂಬಂಧ ಆದ್ಯತೆ ಮೇಲೆ ಗುರುತಿಸಿ ಒದಗಿಸಬೇಕಿದೆ. ಆ ನಿಟ್ಟಿನಲ್ಲಿ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಎಂ.ಸತೀಶ್ ಕುಮಾರ್ ಅವರು ನಿರ್ದೇಶನ ನೀಡಿದರು.

ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಜಿ.ಪಂ.ಉಪಕಾರ್ಯದರ್ಶಿ ಸಿದ್ದಲಿಂಗಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕೆ.ರಾಮಪ್ಪ, ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ಮಹಮ್ಮದ್ ಮುನೀರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ಸಿ.ನಾಗರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಜಿ.ಆರ್.ಬಸವರಾಜು, ಆಹಾರ ಇಲಾಖೆ ಉಪ ನಿರ್ದೇಶಕರಾದ ಪುಟ್ಟರಾಜು, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಬಿ.ಆರ್.ಗಿರೀಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಾಯಾದೇವಿ ಗಲಗಲಿ, ಐಟಿಡಿಪಿ ಇಲಾಖೆ ಅಧಿಕಾರಿ ಪ್ರಕಾಶ್, ಬಿಸಿಎಂ ಇಲಾಖೆ ಅಧಿಕಾರಿ ಕೆ.ವಿ.ಸುರೇಶ್, ತಹಶೀಲ್ದಾರರಾದ ಕುಸುಮ, ಗೋವಿಂದರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಮಮ್ತಾಜ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಕುಮಾರ, ಸರ್ವೇ ಇಲಾಖೆಯ ಸಹಾಯಕ ನಿರ್ದೇಶಕರಾದ ಷಂಶುದ್ದೀನ್ ಇತರರು ಹಲವು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News