ಜಾಮೀನು ಅರ್ಜಿಯ ತ್ವರಿತ ವಿಚಾರಣೆ: ಕರ್ಣನ್ ಮನವಿ ತಿರಸ್ಕರಿಸಿದ ಸುಪ್ರೀಂ

Update: 2017-07-03 17:02 GMT

ಹೊಸದಿಲ್ಲಿ, ಜು.3: ಜಾಮೀನು ಕೋರಿ ತಾನು ಸಲ್ಲಿಸಿರುವ ಅರ್ಜಿಯ ತ್ವರಿತ ವಿಚಾರಣೆ ಹಾಗೂ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ಪರಿಗಣಿಸಿ ಜೈಲು ಶಿಕ್ಷೆ ವಿಧಿಸಿರುವುದನ್ನು ರದ್ದುಗೊಳಿಸಬೇಕೆಂಬ ನ್ಯಾಯಮೂರ್ತಿ ಸಿ.ಎಸ್.ಕರ್ಣನ್ ಅವರ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.

   ತೀರ್ಪಿನ ವಿರುದ್ಧ ವೌಖಿಕ ಮನವಿಯನ್ನು ಪರಿಗಣಿಸಲಾಗದು ಎಂದು ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್, ಡಿ.ವೈ.ಚಂದ್ರಚೂಡ್ ಅವರಿದ್ದ ಪೀಠ ತಿಳಿಸಿದೆ. ಕರ್ಣನ್ ಅವರು ಈಗ ಜೈಲುಶಿಕ್ಷೆ ಅನುಭವಿಸುತ್ತಿದ್ದು ಅವರ ಮನವಿಯನ್ನು ತ್ವರಿತವಾಗಿ ಪರಿಗಣಿಸಬೇಕು ಎಂದು ಕರ್ಣನ್ ಅವರ ಪರ ವಕೀಲರಾದ ಮ್ಯಾಥ್ಯೂಸ್ ನೆಡುಂಪುರ ಕೋರಿದ್ದರು.

    ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತನ್ನನ್ನು ದೋಷಿ ಎಂದು ಪರಿಗಣಿಸಿ ಜೈಲು ಶಿಕ್ಷೆ ವಿಧಿಸಿರುವುದನ್ನು ರದ್ದುಪಡಿಸಬೇಕು ಎಂದು ಕೋರಿ, ಈಗ ಬಂಧನಲ್ಲಿರುವ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಸಿ.ಎಸ್.ಕರ್ಣನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಜೂನ್ 21ರಂದು ತಳ್ಳಿಹಾಕಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News