ಆಗಸ್ಟ್ ಮೊದಲನೆ ವಾರದಲ್ಲಿ ‘ಆರೋಗ್ಯ ನಗರ’ ನಿರ್ಮಾಣಕ್ಕೆ ಶಿಲಾನ್ಯಾಸ
ಬೆಂಗಳೂರು, ಜು. 12: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ರಾಮನಗರದ ಅರ್ಚಕರಹಳ್ಳಿಯಲ್ಲಿ ‘ಆರೋಗ್ಯ ನಗರ’ ನಿರ್ಮಾಣಕ್ಕೆ ಆಗಸ್ಟ್ ಮೊದಲನೆ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ಕಟ್ಟಡ ಕಾಮಗಾರಿಗಳಿಗೆ ಚಾಲನೆ ನೀಡುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ, ಹಣಕಾಸು, ವೈದ್ಯ ಶಿಕ್ಷಣ ಮತ್ತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ರಾಮನಗರದ ಅರ್ಚಕರಹಳ್ಳಿಯಲ್ಲಿ ಆರೋಗ್ಯ ನಗರ ನಿರ್ಮಾಣದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ನಗರದಲ್ಲಿ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾಲಯದ ಕಟ್ಟಡಗಳು ತಲೆ ಎತ್ತಲಿವೆ. ಶಂಕುಸ್ಥಾಪನೆ ಕಾರ್ಯಕ್ರಮ ಮುಗಿದ ಕೂಡಲೇ ಕಾಮಗಾರಿಗೆ ಚಾಲನೆ ಸಿಗಬೇಕು. ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು. ಆರೋಗ್ಯ ನಗರ ನಿರ್ಮಾಣಕ್ಕೆ ವಶ ಪಡಿಸಿಕೊಂಡಿರುವ ಭೂಮಿಯ ಕುರಿತು ನ್ಯಾಯಾಲಯದಲ್ಲಿರುವ ಪ್ರಕರಣಗಳ ಇತ್ಯರ್ಥ್ಯಕ್ಕೆ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಅಡ್ವೊಕೇಟ್ ಜನರಲ್ ಅವರೊಂದಿಗೆ ಮಾತುಕತೆ ನಡೆಸಿ ಎಂದು ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ ಅಧಿಕಾರಿಗಳಿಗೆ ಆದೇಶಿಸಿದರು.
ನಗರದಲ್ಲಿ ಒಟ್ಟು 16 ಕಟ್ಟಡಗಳು ನಿರ್ಮಾಣವಾಗಲಿವೆ. ಈ ಪೈಕಿ 10 ಕಟ್ಟಡಗಳನ್ನು ವಿವಾದ ರಹಿತ ಪ್ರದೇಶದಲ್ಲಿ ನಿರ್ಮಿಸಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಒಂದು ಮೆಡಿಕಲ್ ಕಾಲೇಜು ಸಹಿತ ಆಸ್ಪತ್ರೆ, ಸೂಪರ್ಸ್ಪೆಷಾಲಿಟಿ ಆಸ್ಪತ್ರೆ, ದಂತ ವೈದ್ಯ, ನರ್ಸಿಂಗ್, ಫಾರ್ಮಸಿ ಕಾಲೇಜು ಆರೋಗ್ಯ ನಗರದಲ್ಲಿ ನಿರ್ಮಾಣವಾಗಲಿದೆ. ಜೊತೆಗೆ ವಿದ್ಯಾರ್ಥಿ ನಿಲಯ, ಸಿಬ್ಬಂದಿಗೆ ವಸತಿ ಗೃಹಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ ಎಂದು ವಿವರಿಸಿದರು. ಸಭೆಯಲ್ಲಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್, ವೈದ್ಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್, ಜಿಲ್ಲಾಧಿಕಾರಿ ಡಾ.ಮಮತಾ ಸೇರಿದಂತೆ ಇತರರು ಇದ್ದರು.