×
Ad

ಹೊರ ರಾಜ್ಯದವರಿಗೆ ವೈದ್ಯಕೀಯ ಸೀಟು ಬೇಡ: ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳ ಆಗ್ರಹ

Update: 2017-07-13 17:55 IST

ಬೆಂಗಳೂರು, ಜು.13: ನೀಟ್ ತೇರ್ಗಡೆಯಾದ ಹೊರ ರಾಜ್ಯದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೈದ್ಯಕೀಯ ಸೀಟಿಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿರುವುದನ್ನು ಈ ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳ ಹಾಗೂ ಯುವ ವೈದ್ಯರ ಸಂಘ(ಕೆಎಂಎಸ್‌ವೈಡಿಎ) ಆಗ್ರಹಿಸಿದೆ.ಗುರುವಾರ ನಗರದ ಫ್ರೀಡಂಪಾರ್ಕ್‌ನಲ್ಲಿ ರಾಜ್ಯ ವಿದ್ಯಾರ್ಥಿಗಳ ಪಾಲಕರು, ಕರ್ನಾಟಕ ವೈದ್ಯಕೀಯ ವಿದ್ಯಾರ್ಥಿಗಳ ಹಾಗೂ ಯುವ ವೈದ್ಯರ ಸಂಘದ ಸದಸ್ಯರು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷ ಡಾ.ಭರತ್‌ ಕುಮಾರ್, ವೈದ್ಯಕೀಯ ಮತ್ತು ದಂತವೈದ್ಯಕೀಯ ಸೀಟುಗಳಿಗೆ ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆಯಲ್ಲಿ (ನೀಟ್) ತೇರ್ಗಡೆ ಹೊಂದಿದ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಕರ್ನಾಟಕದ ವೈದ್ಯಕೀಯ ಕಾಲೇಜಿನಲ್ಲಿ ಸೀಟು ನೀಡಲು ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ.
ಆದರೆ, ಈ ರೀತಿ ಯಾವ ರಾಜ್ಯದಲ್ಲೂ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ಅವಕಾಶ ನೀಡಿಲ್ಲ. ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಈ ನಿರ್ಧಾರದಿಂದ ರಾಜ್ಯದ ಸಾವಿರಕ್ಕೂ ಅಧಿಕ ಪ್ರತಿಭಾವಂತ ವಿದ್ಯಾರ್ಥಿಗಳು ವೈದ್ಯಕೀಯ ಸೀಟಿನಿಂದ ವಂಚಿತರಾಗಲಿದ್ದಾರೆ ಎಂದು ಹೇಳಿದರು.

ವಿದ್ಯಾರ್ಥಿಯ ಪಾಲಕರಾದ ಕರುಣಾಕರ ಹೆಗಡೆ ಮಾತನಾಡಿ, ಅಖಿಲ ಭಾರತ ಮಟ್ಟದ ಶೇ.15ರಷ್ಟು ಸೀಟು ಯಾರಿಗೇ ಬೇಕಾದರೂ ಹಂಚಿಕೆ ಮಾಡಲಿ. ಆದರೆ, ಉಳಿದ ಶೇ.85ರಷ್ಟು ಸೀಟು ಕರ್ನಾಟಕದ ವಿದ್ಯಾರ್ಥಿಗಳಿಗೆ ನೀಡಬೇಕು. ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ವೈದ್ಯಕೀಯ ಸೀಟು ನೀಡುವುದರಿಂದ ರಾಜ್ಯದ ಯುವ ವೈದ್ಯರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ ಎಂದರು.
ರಾಜ್ಯದಲ್ಲಿ ಖಾಸಗಿ, ಸರಕಾರಿ ಹಾಗೂ ಭಾಷಾ ಅಲ್ಪಸಂಖ್ಯಾತರ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15 ರಷ್ಟು ಸೀಟನ್ನು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಡಿ ಪಡೆದುಕೊಳ್ಳಬಹುದು. ಆದರೆ, ಹಿಂದೆಂದೂ ಇಲ್ಲದ ಹೊಸ ಪದ್ಧತಿಯನ್ನು ಜಾರಿ ಮಾಡಲು ಮುಂದಾಗಿರುವ ಪರೀಕ್ಷಾ ಪ್ರಾಧಿಕಾರ, ಈಗಲಾದರೂ ಅನ್ಯರಾಜ್ಯದ ವಿದ್ಯಾರ್ಥಿಗಳನ್ನು ರಾಜ್ಯದ ವೈದ್ಯಕೀಯ ಸೀಟು ಹಂಚಿಕೆಗೆ ಆಹ್ವಾನಿಸುವುದನ್ನು ಕೈಬಿಡಬೇಕೆಂದು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News