ಕೊಡಾಜೆ ಸುಲ್ತಾನ್ ಹಾಜಿ

Update: 2017-07-20 16:13 GMT

ವಿಟ್ಲ, ಜು. 20: ಮಾಣಿ ಸಮೀಪದ ಕೊಡಾಜೆ ನಿವಾಸಿ ಕೊಡುಗೈ ದಾನಿ, ನ್ಯೂ ಸುಲ್ತಾನ್ ಬೀಡಿ ಮಾಲಕ ಹಾಜಿ ಬಿ. ಹುಸೈನ್ ಕೊಡಾಜೆ (73) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 

ಸುಮಾರು 15 ದಿನಗಳ ಹಿಂದೆ ಎದೆ ನೋವು ಕಾಣಿಸಿಕೊಂಡ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಬುಧವಾರ ತಮ್ಮ ಕೊಡಾಜೆಯ ನಿವಾಸಕ್ಕೆ ವಾಪಾಸಾಗಿದ್ದರು. ಇಂದು ಮಧ್ಯಾಹ್ನದ ಸುಮಾರಿಗೆ ಮತ್ತೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೊಡಾಜೆ ಬದ್ರಿಯಾ ಜುಮಾ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಅಧ್ಯಕ್ಷರಾಗಿ, ಕೋಶಾಧಿಕಾರಿಯಾಗಿ ಹಾಗೂ ಸದಸ್ಯನಾಗಿ ಸೇವೆ ಸಲ್ಲಿಸಿರುವ ಅವರು ಯಾವುದೇ ಪ್ರಚಾರವನ್ನು ಬಯಸದ ಕೊಡುಗೈದಾನಿಯಾಗಿದ್ದು, ಸುಲ್ತಾನ್ ಹಾಜಿ ಎಂದೇ ಚಿರಪರಿಚಿತರಾಗಿದ್ದರು. 

ಮೃತರು ಪತ್ನಿ, ಕೊಡಾಜೆ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಮುಹಮ್ಮದ್ ರಫೀಕ್ ಸಹಿತ ಆರು ಮಂದಿ ಪುತ್ರರು, ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. 

ಸಂತಾಪ: ಮೃತರ ಮನೆಗೆ ತೆರಳಿ ಅಂತಿಮ ದರ್ಶನ ಪಡೆದ ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ಉಪಾಧ್ಯಕ್ಷ ಶೈಖುನಾ ಹಾಜಿ ಕೆ.ಪಿ. ಅಬ್ದುಲ್ ಜಬ್ಬಾರ್ ಮುಸ್ಲಿಯಾರ್, ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ರಾಜ್ಯ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಜಿ ಬಿ.ಎಚ್ ಖಾದರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್ ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಮಂಜುಳಾ ಮಾವೆ, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಸದಸ್ಯ ಹಾಜಿ ಆದಂ ಕುಂಞಿ, ಅನಂತಾಡಿ ಗ್ರಾ.ಪಂ ಅಧ್ಯಕ್ಷ ಸನತ್ ಕುಮಾರ್ ರೈ, ಬಂಟ್ವಾಳ ಅಕ್ರಮ-ಸಕ್ರಮ ಸಮಿತಿ ಸದಸ್ಯ ಶ್ರೀಧರ್ ರೈ, ಕಲ್ಲಡ್ಕ ಜುಮಾ ಮಸೀದಿ ಅಧ್ಯಕ್ಷ ಹಾಜಿ ಅಬೂಬಕ್ಕರ್ ಗೋಳ್ತಮಜಲು, ಕೆ.ಸಿ. ರೋಡ್ ಜುಮಾ ಮಸೀದಿ ಅಧ್ಯಕ್ಷ ಕೆ.ಎಸ್. ಇಸ್ಮಾಯಿಲ್ ಹಾಜಿ, ಖಾದಿ ನಿಗಮದ ಸದಸ್ಯ ಹಾಜಿ ಎಸ್. ಅಬ್ಬಾಸ್ ಸಜಿಪ, ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಜೆಡಿಎಸ್ ಮುಖಂಡ ಹಾರೂನ್ ರಶೀದ್ ಬಂಟ್ವಾಳ ಸಹಿತ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಗಣ್ಯರು ಸಂತಾಪ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ