×
Ad

‘ಭೂಮಿಯಲ್ಲಿ ಕೃಷಿ ಮಾಡಿ ಬದುಕು ಕಟ್ಟಿಕೊಳ್ಳಿ’ ಕೊರಗರಿಗೆ ಪ್ರಮೋದ್ ಸಲಹೆ

Update: 2017-07-26 20:52 IST

ಕೊಕ್ಕರ್ಣೆ, ಜು.26: ಜಿಲ್ಲೆಯ ಆದಿವಾಸಿ ಸಮುದಾಯಕ್ಕೆ ಈಗಾಗಲೇ ಸರಕಾರದಿಂದ ಭೂಮಿಯನ್ನು ಹಂಚಲಾಗಿದ್ದು, ಸರಕಾರ ನೀಡಿರುವ ಯೋಜನೆ ಗಳನ್ನು ಸದ್ಬಳಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳುವಂತೆ ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಕೊರಗರಿಗೆ ಕಿವಿಮಾತು ಹೇಳಿದ್ದಾರೆ.

ಬುಧವಾರ ಕೊಕ್ಕರ್ಣೆ ಸಮೀಪದ ಕುದಿ ಗ್ರಾಮದ ಕೊರಗ ಸಮುದಾಯದ ಜಮೀನಿನಲ್ಲಿ ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡಿ ಅವರು ಮಾತನಾಡು ತ್ತಿದ್ದರು. ದೇವರಾಜ್ ಅರಸ್ ಕಾಲದಲ್ಲೇ ಉಳುವವನೇ ಭೂಮಿಗೆ ಒಡೆಯ ಕಾನೂನು ತಂದು ಭೂಮಿ ನೀಡಲಾಗಿದ್ದರೂ, ಆ ಭೂಮಿಯನ್ನು ಅಭಿವೃದ್ಧಿ ಪಡಿಸಿ ಫಲ ಪಡೆಯುವಲ್ಲಿ ಜಿಲ್ಲೆಯ ಕೊರಗ ಸಮುದಾಯ ಹಿಂದುಳಿದಿದೆ. ಇದೀಗ ಕೊರಗರ ಈ ಭೂಮಿಯನ್ನು ಫಲಭರಿತ ಪ್ರದೇಶವನ್ನಾಗಿಸಲು ಇಲಾಖೆಗಳೇ ಎಲ್ಲ ಸೌಲ್ಯಗಳನ್ನು ವಿತರಿಸುತ್ತಿದ್ದು ಅದರ ಪ್ರಯೋಜನ ಪಡೆದು ಸುಂದರ ಬದುಕು ಕಟ್ಟಿಕೊಳ್ಳುವಂತೆ ಸಚಿವರು ಸಲಹೆ ನೀಡಿದರು.

ತೋಟಗಾರಿಕಾ ಇಲಾಖೆ, ಯೋಜನೆ ಅನುಷ್ಠಾನಕ್ಕೆ ಮೊದಲೇ ಸ್ಥಳೀಯ ಕೊರಗ ಸಮುದಾಯದ ಅವಶ್ಯಕತೆಗಳನ್ನು ಪಟ್ಟಿ ಮಾಡಿ ಅವರೇ ನೀಡಿದ ಬೇಡಿಕೆಯಂತೆ ಒಂದು ಕುಟುಂಬಕ್ಕೆ 15 ತೆಂಗು, ಮಲ್ಲಿಗೆ, ಹಲಸು, ಜೀಗುಜ್ಜೆ ಹಾಗೂ ತರಕಾರಿ ಬೀಜಗಳನ್ನು ನೀಡುತ್ತಿದೆ. ಉದ್ಯೋಗ ಖಾತ್ರಿ ಯೋಜನೆ (ಎನ್‌ಆರ್‌ಇಜಿ)ಯಡಿ ಕೃಷಿ ಮಾಡಿ, ಕೂಲಿಯನ್ನೂ ಪಡೆಯಿರಿ ಎಂದು ಸಲಹೆ ನೀಡಿದ ಸಚಿವರು, ಇಲ್ಲಿಗೆ ತನ್ನ ಮುಂದಿನ ಭೇಟಿ ವೇಳೆ ಈ ಜಮೀನು ಫಲಭರಿತವಾಗಿರಬೇಕೆಂದು ಸೂಚಿಸಿದರು.

ಏಪ್ರಿಲ್-ಮೇ ತಿಂಗಳಲ್ಲಿ ಎದುರಿಸುತ್ತಿರುವ ನೀರಿನ ಸಮಸ್ಯೆ ಪರಿಹರಿಸಲು ಯೋಜನೆ ರೂಪಿಸಲಾಗಿದೆ ಎಂದ ಪ್ರಮೋದ್, ವಿದ್ಯುತ್ ಸಂಪರ್ಕ ಬೇಡಿಕೆ ಯನ್ನು ದೀನದಯಾಳ್ ಯೋಜನೆಯಡಿ ಪಡೆಯಲು ತಿಳಿಸಿದರು. ಇಲ್ಲಿನ ಕೊರಗರಿಗೆ ನೀಡಿರುವ ಭೂಮಿ ಒತ್ತುವರಿಯಾಗಿದ ಬಗ್ಗೆ ದೂರು ಸ್ಥಳದಲ್ಲಿ ಉಪಸ್ಥಿತರಿದ್ದ ಕುಟುಂಬಗಳಿಂದ ಬಂದಿದ್ದು, ಈ ಬಗ್ಗೆ ಲಿಖಿತ ದೂರು ನೀಡಿ ಸಂಬಂಧಪಟ್ಟವರಿಗೆ ಕ್ರಮಕೈಗೊಳ್ಳಲು ಸೂಚಿಸುವೆ ಎಂದು ಸಚಿವರು ಉತ್ತರಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾಪಂ ಸದಸ್ಯರಾದ ಸುನೀತಾ ಶೆಟ್ಟಿ, ಭುಜಂಗ ಶೆಟ್ಟಿ, ಗ್ರಾಪಂ ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷೆ ದೇವಕಿ ಕೋಟ್ಯಾನ್, ಬೊಗ್ರ ಕೊರಗ, ಸುಶೀಲ, ತೋಟಗಾರಿಕಾ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ, ಸಹಾಯಕ ನಿರ್ದೇಶಕ ಸಂಜೀವ ನಾಯಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News