ಸಾಲಬಾಧೆ: ರೈತ ಆತ್ಮಹತ್ಯೆ
Update: 2017-07-30 20:29 IST
ಮದ್ದೂರು, ಜು.30: ಸಾಲಬಾಧೆ ತಾಳಲಾರದೆ ತಾಲೂಕಿನ ರಾಜೇಗೌಡನದೊಡ್ಡಿ ಗ್ರಾಮದ ರೈತ ನಂಜೇಗೌಡ ಅವರ ಪುತ್ರ ಮುತ್ತುರಾಜು(45) ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂರು ದಿನದ ಹಿಂದೆ ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ.
ಒಂದು ಎಕರೆ ಜಮೀನು ಹೊಂದಿರುವ ಮುತ್ತುರಾಜು ಹಾಕಿದ್ದ ಬೆಳೆ ನೀರಿಲ್ಲದೆ ಒಣಗಿ ಹೋಗಿತ್ತು. ಕೃಷಿಗಾಗಿ ಸುಮಾರು 3 ಲಕ್ಷ ರೂ. ಸಾಲ ಮಾಡಿದ್ದು, ಸಾಲಗಾರರ ಕಾಟ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರು ನೀಡಲಾಗಿದೆ.
ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.