ಅಮಿತ್ ಶಾ ಆಗಮನದಿಂದ ಕಾಂಗ್ರೆಸ್ಗೆ ಗಾಬರಿ: ಸುರೇಶ್ ಕುಮಾರ್
ಬೆಂಗಳೂರು, ಆ.13: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿರುವುದರಿಂದ ರಾಜ್ಯ ಕಾಂಗ್ರೆಸ್ ನಾಯಕರಿಗೆ ಗಾಬರಿಯಾಗಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಸ್.ಸುರೇಶ್ ಕುಮಾರ್ ಲೇವಡಿ ಮಾಡಿದ್ದಾರೆ.
ಇಡೀ ದೇಶದಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ಣಾಮವಾಗುವ ಸಮಯ ದೂರವಿಲ್ಲ. ಇದಕ್ಕೆ ಬೆಚ್ಚಿ ಬಿದ್ದಿರುವ ಕಾಂಗ್ರೆಸ್ ನಾಯಕರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಮನಸಿಗೆ ಬಂದಂತೆ ವಾಗ್ದಾಳಿ ನಡೆಸುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯಾವ ಮಟ್ಟಕ್ಕೆ ಹೋಗಲಿದೆ ಎಂಬುದು ದೇಶಕ್ಕೆ ತಿಳಿಯಲಿದೆ ಎಂದು ಅವರು ವಾಗ್ದಾಳಿ ನಡೆಸಿದರು.
ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಿಜೆಪಿಯ ಚಿಂತನಾ ಸಭೆಯಲ್ಲಿ ಕೇಂದ್ರ ಸರಕಾರ ಮೂರು ವರ್ಷದ ಸಾಧನೆಯನ್ನು ವಿವರವಾಗಿ ಹೇಳಿದ್ದಾರೆ. ಆದರೆ, ಕೇಂದ್ರ ಸರಕಾರದ ಸಾಧನೆಯ ಬಗ್ಗೆ ಕಾಂಗ್ರೆಸ್ ನಾಯಕರು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಈ ಬಗ್ಗೆ ಜನತೆಯ ನಿರ್ಣಯಿಸಲಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.